Friday, March 30, 2012

ಸದ್ದಿಲ್ಲದೆ ಸಾಮಾಜಿಕ ಕ್ರಾಂತಿ : ಪ್ರಸನ್ನ ಅವರ ಪರಿಶ್ರಮ

ರವಿ ಕೃಷ್ಣಾರೆಡ್ಡಿ


ಸಾಗರದ ಬಳಿಯ ಹೆಗ್ಗೋಡು ಕರ್ನಾಟಕದ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯಕ್ಕೆ ಪರಿಚಿತವಾದ ಸ್ಥಳವೇ. ಆದರೆ ಇತ್ತೀಚಿನ ವರ್ಷಗಳಲ್ಲಿ ಅಲ್ಲಿಂದ ಒಂದೆರಡು ಕಿಲೋಮೀಟರ್ ದೂರದಲ್ಲಿಯೇ ಸದ್ದಿಲ್ಲದೆ ಸಾಮಾಜಿಕ ಕ್ರಾಂತಿಯೊಂದು ಜರುಗುತ್ತಿದೆ. ಅದು “ಚರಕ” ಸಂಸ್ಥೆಯ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ರೂಪದಲ್ಲಿ.
ಹಿರಿಯ ರಂಗಕರ್ಮಿ, ಲೇಖಕ, ನಾಟಕಕಾರ ಪ್ರಸನ್ನರ ಪ್ರಯತ್ನ ಇದು. ಹತ್ತಿಯ ನೂಲಿಗೆ ಬಣ್ಣ ಹಾಕಿ ಖಾದಿ ಬಟ್ಟೆ ನೇಯುವುದರಿಂದ ಹಿಡಿದು ವಿವಿಧ ದಿರಿಸುಗಳನ್ನು ಹೊಲಿದು ಮಾರುಕಟ್ಟೆಗೆ ತಲುಪಿಸುವ ತನಕ “ಚರಕ” ಸಂಸ್ಥೆ ಕಾರ್ಯನಿರ್ವಹಿಸುತ್ತದೆ. ಬೆಂಗಳೂರಿನಲ್ಲಿ ಮೂರ್ನಾಲ್ಕು ಕಡೆ ಅದು ತನ್ನದೇ ಆದ “ದೇಸಿ” ಹೆಸರಿನ ಅಂಗಡಿಗಳ ಮೂಲಕ ಈ ರೆಡಿಮೇಡ್ ದಿರಿಸುಗಳನ್ನು ಮಾರಾಟ ಮಾಡುತ್ತದೆ.
ವಾರ್ಷಿಕ ಒಂದು ಕೋಟಿ ಆದಾಯವಿರುವ ಈ “ಚರಕ” ಸಹಕಾರ ಸಂಘ ನಡೆಯುತ್ತಿರುವುದೆಲ್ಲ ಅಲ್ಲಿ ಕೆಲಸ ಮಾಡುವ ಸ್ಥಳೀಯ ಹೆಣ್ಣು ಮಕ್ಕಳ ಆಡಳಿತ ಮಂಡಳಿಯಿಂದಲೆ. ಅಲ್ಲಿ ಕೆಲಸ ಮಾಡುವ ಯಾರು ಬೇಕಾದರೂ ಆಡಳಿತ ಮಂಡಳಿಯ ಸದಸ್ಯರಾಗಬಹುದು. ಅವರನ್ನು ಆಯ್ಕೆ ಮಾಡುವುದು ಪ್ರಜಾಸತ್ತಾತ್ಮಕವಾಗಿ; ಅಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳೆ ತಮ್ಮಲ್ಲಿಯ ಹಲವರನ್ನು ಅಧ್ಯಕ್ಷೆ, ಕಾರ್ಯದರ್ಶಿ, ಇತ್ಯಾದಿಯಾಗಿ ಆರಿಸಿಕೊಳ್ಳುತ್ತಾರೆ.
ಮತ್ತೆ “ಚರಕ” ಕೇವಲ ನೌಕರಿ ನೀಡುವ ಸಂಸ್ಥೆ ಮಾತ್ರವಲ್ಲ. ಅದೊಂದು ಸಾಂಸ್ಕೃತಿಕ ಸಂಘಟನೆ ಸಹ. ಅಲ್ಲಿ ವರ್ಷಕ್ಕೊಮ್ಮೆ ಚರಕ ಉತ್ಸವ ನಡೆಯುತ್ತದೆ. ಇದೇ ಹೆಣ್ಣುಮಕ್ಕಳು ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಾರೆ. ವೈಚಾರಿಕವಾಗಿ ಅವರನ್ನು ಬೆಳೆಸುವ ಪರಿಸರ ಅದು.
ಅಲ್ಲಿಗೆ ನಾನು 2009ರ ಮಾರ್ಚ್‌ನಲ್ಲಿ ಭೇಟಿ ಕೊಟ್ಟಿದ್ದೆ; ಹಿರಿಯ ಮಿತ್ರರಾದ ಡಿ.ಎಸ್.ನಾಗಭೂಷಣ್ ಮತ್ತು ಸವಿತಾ ನಾಗಭೂಷಣ್‌ರೊಂದಿಗೆ. ಅಂದು “ಚರಕ”ದ ಆ ವರ್ಷದ ಅಧ್ಯಕ್ಷೆ ಮತ್ತು ಕಾರ್ಯದರ್ಶಿಯವರೊಡನೆ ಅನೌಪಚಾರಿಕವಾಗಿ ಎಂಬಂತೆ ಮಾತನಾಡುತ್ತ ಅವರ ಮಾತುಗಳನ್ನು ವಿಡಿಯೊ ರೆಕಾರ್ಡ್ ಮಾಡಿದ್ದೆ. ಇಷ್ಟು ದಿನ ಅದನ್ನು ಎಡಿಟ್ ಮಾಡಿ ಅಪ್‌ಲೋಡ್ ಮಾಡಲು ಆಗಿರಲಿಲ್ಲ. ಇತ್ತೀಚೆಗಷ್ಟೆ ಸಾಧ್ಯವಾಯಿತು. ಈ ವಿಡಿಯೊ ಬಹುಶಃ ನಿಮಗೆ “ಚರಕ”ದ ಬಗ್ಗೆ ಒಂದಷ್ಟು ವಿಭಿನ್ನ ಮಾಹಿತಿ ನೀಡಬಹುದು ಎನ್ನಿಸುತ್ತದೆ.
ಕೃಪೆ : ವರ್ತಮಾನ

ಅಣ್ಣಾ ಅಂದರೆ ಇಂಡಿಯಾ ಎಂದು ನಾವೆಲ್ಲರೂ ತುಂಬಾ ಗೌರವಿಸಿದ್ದ ಕಿರಣ್ ಬೇಡಿ ಎಂಬ ಮಾಜಿ ಅಧಿಕಾರಿ ಭಾರತದ ಭಾವುಟ ಹಿಡಿದು ಕುಣಿದಾಡುವುದು. ಕೇಜ್ರಿವಾಲ ಎಂಬ ವ್ಯಕ್ತಿ ಥೇಟ್ ಸ್ವಯಂ ಸೇವಾ ಸಂಸ್ಥೆಯ ವಕ್ತಾರನಾಗಿ ಸರ್ಕಾರದ ವಿರುದ್ಧ ಕಿಡಿ ಕಾರುವುದು.
ಪ್ರತಿನಿತ್ಯ ರಸ್ತೆಯಲ್ಲಿ ಶಾಲಾ ಮಕ್ಕಳು, ಸಂಘ, ಸಂಸ್ಥೆಗಳು ಮೊಂಬತ್ತಿ ಹಿಡಿದು ಮೆರವಣಿಗೆ ತೆಗೆಯುವುದು ಜನ ಲೋಕ್‌ಪಾಲ್ ಮಸೂದೆಗೆ ಆಗ್ರಹಿಸುವುದು ನನಗೆ ತಮಾಷೆಯಾಗಿ ಕಾಣುತ್ತಿದೆ.
ಈ ಅಸಂಗತ ನಾಟಕವನ್ನು ನಾವು ದಿನ ನೋಡಬೇಕಲ್ಲ ಎಂಬ ಖೇದವೂ ಕಾಡುತ್ತದೆ.
Anna_Hazare (Pic courtesy: wikipedia)
ಸುಮ್ಮನೆ ಹೇಳಿ ಬಿಡುತ್ತೇನೆ. ಎಲ್ಲಾ ಸಂಸದರು ಲೋಕಸಭೆಯಲ್ಲಿ ಒಮ್ಮತದಿಂದ ಒಪ್ಪಿ ಅಣ್ಣಾ ಹಜಾರೆ ತಂಡ ಪ್ರತಿಪಾದಿಸುವ ಜನ ಲೋಕ್‌ಪಾಲ್ ಮಸೂದೆಯನ್ನು ಜಾರಿಗೆ ತಂದು ಬಿಟ್ಟರು ಎಂದು ಕೊಳ್ಳೋಣ. ಭ್ರಷ್ಟಾಚಾರ ಮಾಡಿದ ಪ್ರಧಾನಿ ಅಥವಾ ಸುಪ್ರೀಂಕೋರ್ಟು ನ್ಯಾಯಮೂರ್ತಿ ಇವರನ್ನು ಈ ಲೋಕ್‌ಪಾಲ್ ಗಲ್ಲಿಗೆ ಹಾಕುತ್ತದೆ ಎಂದೇ ಭಾವಿಸೋಣ. ಇದರಿಂದ ಭ್ರಷ್ಟಾಚಾರ ನಿಲ್ಲುತ್ತದೆಯೇ? (ಇದು ಕಾರ್ಯಸಾಧುವಲ್ಲದ ಕಲ್ಪನೆ, ಆ ಮಾತು ಬೇರೆ.)
Anna_Hazareನನ್ನ ಪ್ರಶ್ನೆ ಇಷ್ಟು? ಈ ದೇಶದಲ್ಲಿ ಸರ್ಕಾರಿ ನೌಕರರು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು ಸೇರಿ ಎಷ್ಟು? ನ್ಯಾಯಾಂಗ ಇಲಾಖೆಯ ನ್ಯಾಯಾಧೀಶರನ್ನು ಒಳಗೊಂಡ ನೌಕರರು ಎಷ್ಟು? ನಮ್ಮ ಎಲ್ಲಾ ರಾಷ್ಟ್ರೀಯ ಹಾಗೂ ಚೋಟಾ, ಮೋಟಾ ಪ್ರಾದೇಶಿಕ ಪಕ್ಷಗಳ ಜನ ಪ್ರತಿನಿಧಿಗಳ ಸಂಖ್ಯೆ ಎಷ್ಟು? ಇವರಲ್ಲಿ ಗ್ರಾ.ಪಂ.ಸದಸ್ಯರಿಂದ ಹಿಡಿದು, ಲೋಕಸಭೆ ಸದಸ್ಯರವರೆಗೆ ಈ ಎಲ್ಲರನ್ನೂ ಒಟ್ಟು ಸೇರಿಸಿದರೆ ಈ ದೇಶದ ಶೇ.2ರಷ್ಟು ಸಂಖ್ಯೆಯನ್ನು ಇದು ದಾಟುವುದಿಲ್ಲ. ಈ ಎರಡರಷ್ಟು ಸಂಖ್ಯೆಯ ಜನರನ್ನು ತೋರಿಸಿ, ಇಡೀ ರಾಷ್ಟ್ರದ ಜ್ವಲಂತ ಸಮಸ್ಯೆ ಇದೊಂದೆ ಎನ್ನುವಂತೆ ಬಿಂಬಿಸಿ ಹೋರಾಟ ಮಾಡುತ್ತಿರುವುದು ಏನನ್ನು ಸೂಚಿಸುತ್ತದೆ?
ಸುಮ್ಮನೆ ಲೋಕಾಯುಕ್ತರ ವರದಿಯನ್ನು ಪ್ರಸ್ತಾಪಿಸುತ್ತೇನೆ. ಈ ವರದಿ ಆಕ್ರಮ ಗಣಿಗಾರಿಕೆ, ರಾಷ್ಟ್ರದ ಅತ್ಯಮೂಲ್ಯ ಸಂಪನ್ಮೂಲವನ್ನು ಕೊಳ್ಳೆ ಹೊಡೆದು ರಫ್ತು ಮಾಡಿದ್ದು, ತೀವ್ರ ಭ್ರಷ್ಟಾಚಾರ ಎಲ್ಲವನ್ನೂ ಬಯಲು ಮಾಡಿದ್ದಾರೆ. ಸಂತೋಷ ಹೆಗಡೆಯವರು ಸರ್ಕಾರಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಿದ್ದು ನನಗೆ ಇಲ್ಲಿ ಮುಖ್ಯ ಅನ್ನಿಸುತ್ತದೆ. ಸರ್ಕಾರದ ತೆರಿಗೆ ವಂಚಿಸಿದ್ದರ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು, ಈ ಹಣವನ್ನು ಸರ್ಕಾರ ವಶ ಪಡೆಸಿಕೊಳ್ಳಬೇಕು. ಕಾನೂನು ಪ್ರಕಾರ ಇದಕ್ಕಿಂತಲೂ ಬೇರೇನೂ ಮಾಡಲು ಸಾಧ್ಯವಿದೆ ಪಾಪ ಸಂತೋಷ ಹೆಗಡೆಯವರಿಗೆ.
ಇಲ್ಲಿ ಯಡಿಯೂರಪ್ಪ, ಸೋಮಣ್ಣ, ರೆಡ್ಡಿ ಬ್ರದರ್ಸ್ ಇವರೆಲ್ಲಾ ತುಂಬಾ ಭ್ರಷ್ಟರು. ಇದನ್ನೆಲ್ಲಾ ಒಪ್ಪಿಕೊಳ್ಳೋಣ. ಅವರನ್ನು ಜನ ಕ್ಯಾಕರಿಸಿ ಛೀ, ಥೂ ಎಂದು ಉಗಿಯುತ್ತಾರೋ ಬಿಡುತ್ತಾರೋ ಅದನ್ನು ಮುಂದೆ ನೋಡೋಣ.
ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ ಘೋಷಿಸಿ ಸತ್ಯ ಹರಿಶ್ಚಂದ್ರರೆಂದು ವೇದಿಕೆ ಮೇಲೆ ಕಂಗೊಳಿಸುವ ಕಾರ್ಪೋರೇಟ್ ಸಂಸ್ಥೆಗಳ ಭ್ರಷ್ಟಾಚಾರದ ಬಗ್ಗೆ ಯಾರು ಮಾತನಾಡಬೇಕು?
ಲೋಕಾಯುಕ್ತ ವರದಿಯಲ್ಲಿ ಉಲ್ಲೇಖವಾಗಿರುವ ಭಾಗವನ್ನು ಹೇಳುವ ಮೂಲಕ ನನ್ನ ಮಾತನ್ನು ವಿಸ್ತರಿಸುವೆ. ರಾಜ್ಯ ಸರ್ಕಾರದ ಒಡೆತನ ಇರುವ ಮೈಸೂರು ಮಿನರಲ್ಸ್ ಲಿ., ಕಂಪನಿ (ಎಂಎಂ.ಎಲ್.) ಜೊತೆ ಜಿಂದಾಲ್ ಉಕ್ಕು ಕಾರ್ಖಾನೆಯು ವಿಜಯನಗರ ಮಿನರಲ್ಸ್ ಪ್ರೈ. ಲಿ., (ವಿಎಂಪಿಲ್) ಎಂಬ ಹೆಸರಿನಲ್ಲಿ ಜಂಟಿಯಾಗಿ ಸಂಡೂರಿನ ಪ್ರದೇಶದಲ್ಲಿ ತಿಮ್ಮಪ್ಪನ ಗುಡಿ ಐರನ್ ಓರ್ ಕಂಪನಿ (ಟಿಐಓಎಂ) ಗಣಿಗಾರಿಕೆ ಆರಂಭಿಸಿತು. ಕರಾರಿನಲ್ಲಿ ಮೂರನೆ ವ್ಯಕ್ತಿಗೆ ಕಬ್ಬಿಣದ ಅದಿರು ಮಾರುವಂತಿಲ್ಲ ಎಂದಿದೆ. ಸೌಥ್ ವೆಸ್ಟ್ ಮೈನಿಂಗ್ ಲಿ., ಕಂಪನಿಯು 85,022 ಮೆಟ್ರಿಕ್  ಟನ್ ಕಬ್ಬಿಣದ ಅದಿರು ರಫ್ತು ಮಾಡಿದೆ. 2003-04ರಿಂದ 2004-05ರವರೆಗೆ 3,65,594 ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದೆ.
ಜಿಂದಾಲ್ ಉಕ್ಕಿನ ಕಾರ್ಖಾನೆಯು ತನ್ನ ಅವಶ್ಯಕತೆಗೆ ಮೀರಿ ಕಬ್ಬಿಣದ ಅದಿರು ಖರೀದಿಸಿದೆ. ಮತ್ತು ಅದನ್ನು ಆಕ್ರಮವಾಗಿ ರಫ್ತು ಮಾಡಿದೆ. ತನ್ನ ಉಕ್ಕು ಉದ್ಯಮಕ್ಕೆ ಬೇಕಾಗಿದ್ದಕ್ಕಿಂತಲೂ 12,97,707 ಮೆಟ್ರಿಕ್ ಟನ್ ಕಬ್ಬಿಣದ ಅದಿರು ಖರೀದಿಸಿದೆ. ಆಕ್ರಮವಾಗಿ ಇದನ್ನು ರಫ್ತು ಮಾಡಿದೆ. ಒಂದು ಟನ್ ಕಬ್ಬಿಣದ ಅದಿರಿಗೆ 2500 ರೂ. ಎಂದು ಲೆಕ್ಕ ಹಾಕಿದರೂ ಇದರ ಮೌಲ್ಯವು 324,42,52,500 ರೂ. ಆಗುತ್ತದೆ.
ಈ ಕಾರ್ಪೋರೇಟ್ ಸಂಸ್ಥೆಯ ಗಣಿದಾಹ, ಭ್ರಷ್ಟಾಚಾರದ ಬಗ್ಗೆ ಯಾರು ಮಾತನಾಡಬೇಕು?
ತನ್ನ ಹೊಲಸು ಕೈಗಳನ್ನು ರಾಜಕಾರಣಿಗಳ ಬಿಳಿ ಬಟ್ಟೆಗೆ ಹಚ್ಚಿ, ಅವರ ಜೇಬು ಹೊಲಸು ಮಾಡಿ, ನೋಡಿ ಕಳ್ಳರು ಎಲ್ಲಿದ್ದಾರೆ ಎಂದು ಹೇಳುತ್ತಾ ಭಾರತದ ಭಾವುಟ ಹಿಡಿದು, ಮೊಂಬತ್ತಿ ಹಚ್ಚಿ ತಮ್ಮ ಕರಾಳ ಮುಖ ಬಚ್ಚಿಟ್ಟುಕೊಂಡು ದೇಶಭಕ್ತರಾಗಿ ಕಾಣುವ ಇವರ ಬಗ್ಗೆ ಜನ ಲೋಕ್‌ಪಾಲ್ ಮಸೂದೆಯಲ್ಲಿ ಉತ್ತರ ಇದೆಯಾ? ನನಗೆ ಗೊತ್ತು, ನಾನು ಹುತ್ತ ಹೊಡೆದಿದ್ದೇನೆ. ಪ್ರತಿಕ್ರಿಯೆಗಳು ಬರಲಿ, ನಂತರ ನನ್ನ ಸಂವಾದ ಮುಂದುವರೆಸುವೆ.
ಕೃಪೆ : ವರ್ತಮಾನ

ಮಾತ್ಗವಿತೆ-60

ನನಗೆ ಕನಸುಗಳಿಲ್ಲ ಎಂದು
ಯಾಕೆ ನಿನಗೆ ಅನಿಸಿತು ?
ಕಾಡಿಸುವುದು ಬೇಡವೆಂದು
ಸುಮ್ಮನಿರುವುದೇ ಸರಿಯಲ್ಲವೇನೋ ?
ನೂರೆಂಟು ಬಯಕೆಗಳು ; ಸಾವಿರದ ಕುಸುರುಗಳು
ಹೆಸರು ಹೇಳಲು ಕಾದು ಕುಳಿತಿವೆ !
ಸ್ಪರ್ಧೆಗೆ ಇಳಿದು ಮೇಲೇರಿ ಬರುತ್ತವೆ !
ಅನುಭವಿಸು ; ನೀನೇ ಕೇಳಿದ್ದು !

Thursday, March 29, 2012

ಮಾತ್ಗವಿತೆ-59

ನನ್ನ ಎದೆಯಲ್ಲಿ
ಮಿಣುಕು ಮಿಣುಕಾಗಿದ್ದ
ನೀನು
ಇಡೀ ಹೃದಯದ
ಲಬ್ ಡಬ್ ಆಗಿದ್ದೊಂದು
ಅಚ್ಚರಿ !

Tuesday, March 27, 2012

ಮಾತ್ಗವಿತೆ-58

ಹರಿದೊಗೆದ ಮೇಲೆ ಸಂಬಂಧಗಳ
ಸೂಕ್ಷ್ಮಗಳಾದರೂ ಯಾಕೆ ಬೇಕು ?
ಮರೆವೆಯಿಂದ ಕರೆಯದಿದ್ದರೆ ಸರಿ
ಇರುತ್ತಿತ್ತು ; ಮೆರೆಯುವಿಕೆಯ
ಅಹಂಕಾರದಲ್ಲಿ ಮರೆತವರ ನಾಟಕ
ಯಾಕೆ ಬೇಕು ದುಡಿವ ಬದುಕಿಗೆ ?

Monday, March 26, 2012

ಜಾತಿ ನಾಯಕನಾಗುವುದು ಜನಪ್ರಿಯತೆಯಲ್ಲ !

                          ದಿನೇಶ ಅಮೀನಮಟ್ಟು

ತನ್ನನ್ನು ಹೊಗಳಲು ಆಸ್ಥಾನ ತುಂಬಾ ವಿದೂಷಕರನ್ನು ಇಟ್ಟುಕೊಳ್ಳುತ್ತಿದ್ದ ರಾಜ ಮಹಾರಾಜರು ತಮ್ಮ ಬಗ್ಗೆ ಪ್ರಜೆಗಳು ಏನನ್ನುತ್ತಾರೆ ಎಂದು ತಿಳಿದುಕೊಳ್ಳಲು ಮಾತ್ರ ಮಾರುವೇಷದಲ್ಲಿ ಊರು ಸುತ್ತುತ್ತಿದ್ದರಂತೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸುತ್ತ ವಿದೂಷಕರಷ್ಟೇ ಇದ್ದಾರೆ, ಅದರ ಜತೆಗೆ ಮಾರುವೇಷದಲ್ಲಿ ಅವರೊಮ್ಮೆ ರಾಜ್ಯದಲ್ಲಿ ಒಂದು ಸುತ್ತು ಹೊಡೆದರೆ ಮರುದಿನದಿಂದ ಭಿನ್ನಮತೀಯ ಚಟುವಟಿಕೆಗಳನ್ನೆಲ್ಲ ಕೈಬಿಟ್ಟು ತೆಪ್ಪಗೆ ಮನೆಮೂಲೆ ಸೇರಿ ತನ್ನ ಸರದಿಗಾಗಿ ಕಾಯುತ್ತಾ ಕೂರಬಹುದು. ಆಡಳಿತಾರೂಢ ಬಿಜೆಪಿಯ ಭ್ರಷ್ಟಚಾರ, ವ್ಯಭಿಚಾರ ಮತ್ತು ಒಳಜಗಳದ ಜತೆಗೆ ಕಳೆದ ಆರು ತಿಂಗಳಲ್ಲಿ ಮತ್ತೆ ಮುಖ್ಯಮಂತ್ರಿಯಾಗಲು ಯಡಿಯೂರಪ್ಪನವರು ನಡೆಸುತ್ತಿರುವ ಸರ್ಕಸ್ ಜನರಲ್ಲಿ ರೇಜಿಗೆ ಹುಟ್ಟಿಸಿದೆ. ಇದನ್ನು ತಿಳಿದುಕೊಳ್ಳಬೇಕಾದರೆ ಬಸ್ ನಿಲ್ದಾಣಗಳಲ್ಲಿಯೋ ಇಲ್ಲವೇ ಊರ ಸಂತೆಗಳಲ್ಲಿಯೋ ಜನರು ಆಡುತ್ತಿರುವ ಮಾತುಗಳಿಗೆ ಕಿವಿಕೊಟ್ಟರೆ ಸಾಕು.  ಈ ಪರಿಸ್ಥಿತಿ ಯಲ್ಲಿಯೂ `ತನಗೊಮ್ಮೆ ನಾಯಕತ್ವ ಕೊಟ್ಟು ನೋಡಿ, ಮುಂದಿನ ಚುನಾವಣೆಯಲ್ಲಿ 150 ಶಾಸಕರನ್ನು ಗೆಲ್ಲಿಸಿಕೊಂಡು ಬರುತ್ತೇನೆ` ಎಂದು ಯಡಿಯೂರಪ್ಪನವರು ಹೇಳುತ್ತಾರೆಂದರೆ.....
 ಗರಿಷ್ಠ ಐದು ವರ್ಷಗಳ ಕಾಲ ಮಾತ್ರ ಆಳಲು ರಾಜ್ಯದ ಮತದಾರರು ತಮ್ಮ ಪಕ್ಷವನ್ನು ಪ್ರಜಾಸತ್ತಾತ್ಮಕವಾಗಿ ಆಯ್ಕೆ ಮಾಡಿದ್ದಾರೆ ಎಂದು ಯಡಿಯೂರಪ್ಪನವರು ಎಂದೂ ತಿಳಿದುಕೊಂಡವರಲ್ಲ. ಪ್ರಾರಂಭದ ದಿನದಿಂದಲೇ ಅವರು ಮಾತು ಶುರು ಮಾಡಿದರೆ `ಇನ್ನು ಇಪ್ಪತ್ತು ವರ್ಷಗಳ ಕಾಲ ನಾವೇ...` ಎಂದು ಹೇಳುತ್ತಿದ್ದರು. ಈ ರೀತಿ ಹೇಳುವುದು  ನಾಡಿನ ಪ್ರಜ್ಞಾವಂತ ಮತದಾರರಿಗೆ ಮಾಡುವ ಅವಮಾನ ಎನ್ನುವ ಸಣ್ಣ ಅಳುಕು ಕೂಡಾ ಅವರನ್ನು ಕಾಡುವುದಿಲ್ಲ. ಉಳಿಸಿಕೊಂಡರೆ ಮಾತ್ರ ಈ ಐದು ವರ್ಷಗಳ ಅವಧಿ, ಇಲ್ಲದಿದ್ದರೆ ಅದಕ್ಕಿಂತ ಮೊದಲೇ ಗಂಟುಮೂಟೆ ಕಟ್ಟಿಕೊಂಡು ಹೊರಟು ಹೋಗಬೇಕಾಗುತ್ತದೆ ಎನ್ನುವ ಪ್ರಜಾಪ್ರಭುತ್ವ ವ್ಯವಸ್ಥೆಯ ಕಠೋರ ಸತ್ಯವನ್ನೂ ಅವರು ಅರ್ಥಮಾಡಿಕೊಂಡಿಲ್ಲ.

ಗೆಲುವಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ವಿಫಲನಾದವನು ಆ ಗೆಲುವನ್ನು ಬಹಳ ಕಾಲ ಉಳಿಸಿಕೊಳ್ಳಲು ಆಗುವುದಿಲ್ಲ. ಯಡಿಯೂರಪ್ಪನವರ ರಾಜಕೀಯ ಹಿನ್ನಡೆಗೆ ಇದು ಕಾರಣ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದದ್ದೇ ತನ್ನಿಂದ ಎಂದು ಅವರು ಬಲವಾಗಿ ನಂಬಿದ್ದಾರೆ. ಅವರು ಒಂದು ಪ್ರಾದೇಶಿಕ ಪಕ್ಷದ ನಾಯಕರಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬಂದಿದ್ದರೆ ಅವರ ನಂಬಿಕೆಗೆ ಆಧಾರ ಇರುತ್ತಿತ್ತು, ಅದನ್ನು ನಂಬಬಹುದಿತ್ತು.


ಆದರೆ ಯಡಿಯೂರಪ್ಪನವರು ಒಂದು ರಾಷ್ಟ್ರೀಯ ಪಕ್ಷದ ನಾಯಕರು. ರಾಜ್ಯದ ಮತದಾರರು ಆರಿಸಿದ್ದು ಭಾರತೀಯ ಜನತಾ ಪಕ್ಷವನ್ನು, ಕೇವಲ ಯಡಿಯೂರಪ್ಪನವರನ್ನಲ್ಲ. ಅದೇನು ದೊಡ್ಡ ಗೆಲುವು ಕೂಡಾ ಅಲ್ಲ. ಸಂಖ್ಯೆಯಲ್ಲಿ ಶಾಸಕರು ಹೆಚ್ಚಿದ್ದರೂ ಮತ ಪ್ರಮಾಣದಲ್ಲಿ  ಶೇಕಡಾ 0.73ರಷ್ಟು ಮುಂದೆ ಇದ್ದದ್ದು ಕಾಂಗ್ರೆಸ್.


ರಾಜ್ಯದಲ್ಲಿ  ಅಧಿಕಾರಕ್ಕೆ ಬರುವಷ್ಟು ಬಿಜೆಪಿ ಬೆಳೆಯಲು ಮುಖ್ಯಪಾತ್ರ ವಹಿಸಿದ್ದವರು ಬಿ.ಎಸ್.ಯಡಿಯೂರಪ್ಪ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಆದರೆ ಅವರೊಬ್ಬರೇ ಗೆಲುವಿಗೆ ಕಾರಣರಲ್ಲ. ಯಡಿಯೂರಪ್ಪನವರ ಜನಪ್ರಿಯತೆಯ ಜತೆಯಲ್ಲಿ ಸೀಮಿತ ಪ್ರಮಾಣದಲ್ಲಿಯಾದರೂ ಸಂಘ ಪರಿವಾರ ಹೊಂದಿದ್ದ ನೆಲೆ, ಎಚ್.ಡಿ.ಕುಮಾರಸ್ವಾಮಿಯವರ `ವಚನಭಂಗ` ಹುಟ್ಟಿಸಿದ ಜನಾಕ್ರೋಶ, ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯವಾಗಿ ಅನ್ಯಾಯಕ್ಕೀಡಾಗಿದ್ದ ಮಾದಿಗ ಸಮುದಾಯವನ್ನು ಸೆಳೆದುಕೊಂಡು ನಡೆಸಿದ್ದ ಸೋಷಿಯಲ್ ಎಂಜಿನಿಯರಿಂಗ್, ಅಸ್ಪೃಶ್ಯರಲ್ಲದ ಬೋವಿ ಮತ್ತಿತರ ಜಾತಿಗಳ ಅಭ್ಯರ್ಥಿಗಳನ್ನು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಕ್ಷೇತ್ರದಲ್ಲಿ ಕಣಕ್ಕಿಳಿಸಿ ಮೇಲ್ಜಾತಿ ಮತಗಳನ್ನು ಪಡೆದ ರಾಜಕೀಯ ಜಾಣತನ, ನೀರಿನಂತೆ ಹರಿದ ಬಳ್ಳಾರಿ ಗಣಿ ಲೂಟಿಕೋರರ ದುಡ್ಡು....ಇವುಗಳೆಲ್ಲವೂ 2008ರಲ್ಲಿ ಬಿಜೆಪಿ ಗೆಲುವಿಗೆ ಕಾರಣ.


ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುತ್ತೇನೆ ಎಂದು ಯಡಿಯೂರಪ್ಪನವರು ಈಗ ಹೇಳುತ್ತಿರುವುದು ತನ್ನ ಯಾವ ಸಾಧನೆಯನ್ನು ನಂಬಿಕೊಂಡು? ಮೂರುವರೆ ವರ್ಷಗಳ ಕಾಲದ ಭ್ರಷ್ಟಾಚಾರ ಮುಕ್ತ ನಡವಳಿಕೆಯನ್ನೇ? ರಾಜ್ಯಕ್ಕೆ ಕೊಟ್ಟಿರುವ ಬಿಗಿಯಾದ  ಆಡಳಿತವನ್ನೇ?  ಅನುಷ್ಠಾನಕ್ಕೆ ತಂದಿರುವ ಜನಪರ ಅಭಿವೃದ್ಧಿ ಯೋಜನೆಗಳನ್ನೇ? ಶಾಸಕರು ಸೇರಿದಂತೆ ಸಹೋದ್ಯೋಗಿಗಳ ಜತೆ ತಾನು ಉಳಿಸಿಕೊಂಡಿರುವ ಸೌಹಾರ್ದಯುತ ಸಂಬಂಧವನ್ನೇ? ಯಾವುದನ್ನು?  ಲೋಕಾಯುಕ್ತ ಸಲ್ಲಿಸಿದ್ದ ಪ್ರಥಮಮಾಹಿತಿ ವರದಿಯನ್ನು ಹೈಕೋರ್ಟ್ ರದ್ದು ಮಾಡಿದ ಮಾತ್ರಕ್ಕೆ ತಾನು ದೋಷಮುಕ್ತ ಎಂದು ಅವರು ಹೇಗೆ ತಿಳಿದುಕೊಂಡರೋ ಗೊತ್ತಿಲ್ಲ.  ಅವರ ಬೆಂಬಲಿಗರು ಸದಾ ಹೇಳುತ್ತಿರುವ `ಸಹಜ ನ್ಯಾಯ`ದ ಪ್ರಕಾರ ಆ ಪ್ರಕರಣ ಸುಪ್ರೀಂಕೋರ್ಟ್‌ನ ವಿಚಾರಣೆಗೊಳಪಡಬೇಕಲ್ಲವೇ? ಒಂದೊಮ್ಮೆ ಹೈಕೋರ್ಟ್ ತೀರ್ಪು ತನ್ನ ವಿರುದ್ಧವಾಗಿ ಬಂದಿದ್ದರೆ ಅದನ್ನು ಯಡಿಯೂರಪ್ಪನವರು ಒಪ್ಪಿಕೊಳ್ಳುತ್ತಿದ್ದರೇ? ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತಿರಲಿಲ್ಲವೇ?  ತನ್ನ ನಿರಪರಾಧಿತನದ ಬಗ್ಗೆ ಅವರು ಅಷ್ಟೊಂದು ವಿಶ್ವಾಸ ಹೊಂದಿದ್ದರೆ ಆದಷ್ಟು ಬೇಗ ಲೋಕಾಯುಕ್ತ ಮೇಲ್ಮನವಿ ಸಲ್ಲಿಸುವಂತೆ ಮಾಡಿ ಸುಪ್ರೀಂಕೋರ್ಟ್‌ನಿಂದಲೇ ಪ್ರಾಮಾಣಿಕತೆಗೆ  ಯಾಕೆ ಸರ್ಟಿಫಿಕೇಟ್ ತೆಗೆದುಕೊಳ್ಳಬಾರದು? ಯಡಿಯೂರಪ್ಪನವರನ್ನು ಭ್ರಷ್ಟಾಚಾರದ ಆರೋಪಗಳು ಯಾವ ರೀತಿಯಲ್ಲಿ ಸುತ್ತಿಕೊಂಡಿವೆ ಎಂದರೆ ಬಹಳ ಬೇಗ ಅವೆಲ್ಲವುಗಳಿಂದ ಬಿಡಿಸಿಕೊಳ್ಳುವುದು ಕಷ್ಟ. ಇವುಗಳಿಂದ ಬಿಡಿಸಿಕೊಳ್ಳದೆ ಚುನಾವಣೆಯಲ್ಲಿ ಮತದಾರರನ್ನು ಹೇಗೆ ಎದುರಿಸಲು ಸಾಧ್ಯ?


ಭ್ರಷ್ಟಾಚಾರದ ಆರೋಪ ಹೊತ್ತವರೂ ಉತ್ತಮ ಆಡಳಿತಗಾರರಾಗಿರುವ ಉದಾಹರಣೆಗಳು ಸಾಕಷ್ಟಿವೆ. ಶರದ್‌ಪವಾರ್, ಮಾಯಾವತಿ, ಜಯಲಲಿತಾ ಮೊದಲಾದವರೆಲ್ಲ ಈ ಗುಂಪಿಗೆ ಸೇರಿದವರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ವಿಧಾನಸೌಧದಲ್ಲಿ ಎಷ್ಟು ದಿನ ಶಿಸ್ತಿನಿಂದ ಕೂತು ಆಡಳಿತ ನಡೆಸಿದ್ದಾರೆ? ಅಧಿಕಾರಿಗಳ ವರ್ಗಾವಣೆಗಳಷ್ಟೇ ಆಡಳಿತ ಅಲ್ಲವಲ್ಲ? ಬಜೆಟ್‌ನಲ್ಲಿ ಒಂದಷ್ಟು ಜನಪ್ರಿಯ ಯೋಜನೆಗಳ ಘೋಷಣೆ ಮತ್ತು ಮಠ-ಮಂದಿರಗಳಿಗೆ ದುಡ್ಡು ಹಂಚಿಕೆಯಷ್ಟೇ ಅಭಿವೃದ್ಧಿ ಯೋಜನೆಗಳೆಂದು ಅವರು ತಿಳಿದುಕೊಂಡ ಹಾಗಿದೆ. ರಾಜ್ಯದ ಕೃಷಿ ಮತ್ತು ಕೈಗಾರಿಕೆಗಳ ಕ್ಷೇತ್ರದಲ್ಲಿ ರಾಜ್ಯ ಹಿನ್ನಡೆ ಅನುಭವಿಸಿರುವುದಕ್ಕೆ ಸರ್ಕಾರವೇ ಮಂಡಿಸಿರುವ ಆರ್ಥಿಕ ಸಮೀಕ್ಷೆಗಿಂತ ಬೇರೆ ದಾಖಲೆಗಳೇನು ಬೇಕು? ಮಾತೆತ್ತಿದರೆ ಸೈಕಲ್, ಸೀರೆ, ಪಂಚೆ ಎನ್ನುವುದನ್ನು ಬಿಟ್ಟರೆ ಸರ್ಕಾರದ ಸಾಧನೆಯೆಂದು ಹೇಳಿಕೊಳ್ಳಲು ಬೇರೇನಾದರೂ ಇದೆಯೇ? ಮೂರುವರ್ಷಗಳಾಗುತ್ತಾ ಬಂದರೂ ಉತ್ತರ ಕರ್ನಾಟಕದ ನೆರೆಪೀಡಿತ ಕುಟುಂಬಗಳಿಗೆಲ್ಲ ಮನೆ ಕಟ್ಟಿಕೊಡಲು ಸಾಧ್ಯವಾಗದಿರುವುದನ್ನು ಸಾಧನೆ ಎನ್ನೋಣವೇ?


ಕೊನೆಯದಾಗಿ ಯಡಿಯೂರಪ್ಪನವರ ನಡವಳಿಕೆ. ಬಿಜೆಪಿ ಶಾಸಕರು ಬಂಡೆದ್ದು ಮೊದಲು ಗಾಲಿ ಜನಾರ್ದನ ರೆಡ್ಡಿ ಜತೆಯಲ್ಲಿ, ನಂತರ ಎಚ್.ಡಿ.ಕುಮಾರಸ್ವಾಮಿಯವರ ಜತೆಯಲ್ಲಿ ಸೇರಿಕೊಂಡು ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿದ್ದು ಮುಖ್ಯವಾಗಿ ಯಡಿಯೂರಪ್ಪನವರ ಮೇಲಿನ ಸಿಟ್ಟಿನಿಂದಾಗಿ. ತಮ್ಮ ಮಾತುಗಳನ್ನು ಕೇಳುವ ತಾಳ್ಮೆಯಾಗಲಿ, ಅದನ್ನು ಅರ್ಥಮಾಡಿಕೊಳ್ಳುವ ಔದಾರ್ಯವಾಗಲಿ ಅವರಲ್ಲಿ ಇಲ್ಲ ಎನ್ನುವುದೇ ಆ ಭಿನ್ನಮತೀಯರ ಪ್ರಮುಖ ದೂರು ಆಗಿತ್ತು. ಮೊನ್ನೆ ರೆಸಾರ್ಟ್‌ಗೆ ಬೆಂಬಲಿಗ ಶಾಸಕರನ್ನು ಕರೆದುಕೊಂಡು ಹೋದ ಅವರ ನಡವಳಿಕೆಯನ್ನು ಗಮನಿಸಿದರೆ ಯಡಿಯೂರಪ್ಪನವರು ಈಗಲೂ ಬದಲಾಗಿದ್ದಾರೆಂದು ಅನಿಸುವುದಿಲ್ಲ. ಭೇಟಿಗೆಂದು ತನ್ನ ಮನೆಗೆ ಬಂದವರನ್ನು ಹೊರಗೆ ಹೋಗಲು ಬಿಡದೆ ಕುರಿಗಳನ್ನು ಅಟ್ಟಿಸಿಕೊಂಡು ಹೋಗುವಂತೆ ಬಸ್‌ನಲ್ಲಿ ತುಂಬಿಸಿ ಕೊಂಡೊಯ್ದಿದ್ದಾರೆ. ಅವರಲ್ಲಿ ಬಹಳಷ್ಟು ಶಾಸಕರಿಗೆ ರೆಸಾರ್ಟ್ ವಾಸ ಅನಿರೀಕ್ಷಿತವಾಗಿತ್ತು. ಅವರೆಲ್ಲ ಬೆಂಬಲಿಗರಾಗಿದ್ದರೂ ತಮ್ಮ ಮೇಲೆ ವಿಶ್ವಾಸ ಇಲ್ಲದ ನಾಯಕನ ಈ ರೀತಿಯ ಬಲವಂತದ ನಡವಳಿಕೆಯನ್ನು ಖಂಡಿತ ಇಷ್ಟಪಡಲಾರರು.


ಹಾಗಿದ್ದರೆ ಯಾವ ಬಲವನ್ನು ನಂಬಿ ಅವರು ಬಿಜೆಪಿಯನ್ನು ಅಧಿಕಾರಕ್ಕೆ ಮರಳಿ ತರುತ್ತೇನೆ ಎಂದು ಹೇಳುತ್ತಿರುವುದು? ತನಗೆ ಜನರ ಬೆಂಬಲ ಇದೆ ಎಂದು ಅವರು ಹೇಳುತ್ತಿದ್ದಾರೆ. ಯಾವ ಜನ? ಈಗಿನ ವಿಧಾನಸಭೆಯಲ್ಲಿ ಅತೀ ಹೆಚ್ಚು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಶಾಸಕರನ್ನು ಹೊಂದಿರುವುದು ಬಿಜೆಪಿ. ಆದರೆ ಕಳೆದವಾರ ರೆಸಾರ್ಟಿನಲ್ಲಿ ಬಲ ಪ್ರದರ್ಶಿಸಲು ಕೂಡಿಹಾಕಿಕೊಂಡಿದ್ದ ಶಾಸಕರಲ್ಲಿ ಪರಿಶಿಷ್ಟ ಶಾಸಕರ ತಲೆಗಳು ಹೆಚ್ಚು ಕಾಣಲೇ ಇಲ್ಲ, ಪ್ರಮುಖ ದಲಿತ ನಾಯಕರು ಯಾರೂ ಅಲ್ಲಿ ಇರಲಿಲ್ಲ.


ಶೋಭಾ ಕರಂದ್ಲಾಜೆಯವರನ್ನೂ ಸೇರಿಸಿಕೊಂಡರೂ ಯಡಿಯೂರಪ್ಪನವರ ಜತೆಯಲ್ಲಿ ಕಾಣಿಸಿಕೊಂಡದ್ದು  ಇಬ್ಬರೋ ಮೂವರೋ ಒಕ್ಕಲಿಗ ಶಾಸಕರು ಅಷ್ಟೇ. ಹಿಂದುಳಿದ ಜಾತಿಗಳ ಶಾಸಕರಿದ್ದದ್ದು ಕೂಡಾ ಬೆರಳೆಣಿಕೆಯಲ್ಲಿ. ಅವರ ಸುತ್ತ ಸೇರಿರುವ ಬಹುತೇಕ ಶಾಸಕರು ಲಿಂಗಾಯತ ಜಾತಿಗೆ ಸೇರಿದವರು. ಶಕ್ತಿಪ್ರದರ್ಶನಕ್ಕೆ ಅವರು ಬಳಸಿಕೊಳ್ಳುತ್ತಿರುವುದು ಕೂಡಾ ಸ್ವಜಾತಿಯ ಸ್ವಾಮೀಜಿಗಳನ್ನು.


ಭಾರತದ ರಾಜಕೀಯದಲ್ಲಿ ಜಾತಿಯದ್ದು ಬಹಳ ನಿರ್ಣಾಯಕ ಪಾತ್ರ ಎನ್ನುವುದು ನಿಜ. ಆದರೆ ಇದನ್ನು ಅರ್ಥಮಾಡಿಕೊಳ್ಳದೆ ಇಲ್ಲಿನ ಜಾತಿವ್ಯವಸ್ಥೆಯ ಹುತ್ತದೊಳಗೆ ಪೆದ್ದರಂತೆ ಕೈಹಾಕುವವರನ್ನು ಒಳಗಿದ್ದ ಹಾವು ಎದ್ದುಬಂದು ಕಡಿದುಬಿಡುತ್ತದೆ. ಜಾತಿಯ ಆಧಾರದಲ್ಲಿಯೇ ಮತಚಲಾಯಿಸುವವರು ಒಂದಷ್ಟು ಸಂಖ್ಯೆಯಲ್ಲಿದ್ದರೂ ಹೆಚ್ಚಿನವರು ಜಾತಿ ಅಭ್ಯರ್ಥಿಗಳನ್ನು ಬೆಂಬಲಿಸಲು ಬೇರೆ ಕಾರಣಗಳೂ ಇರುತ್ತವೆ.  ಒಂದೊಮ್ಮೆ ಆ ರೀತಿ ಯಾವುದಾದರೂ ಒಂದು ಜಾತಿಯವರು ಸ್ವಜಾತಿ ಅಭ್ಯರ್ಥಿಗೆ ನೂರಕ್ಕೆ ನೂರರಷ್ಟು ಮತಹಾಕಿ ಗೆಲ್ಲಿಸಬೇಕೆಂದು ನಿರ್ಧರಿಸಿದರೂ ಅದಕ್ಕೆ ಬೇಕಾದ ಸಂಖ್ಯಾಬಲ ದೇಶದಲ್ಲಿರುವ ಯಾವ ಜಾತಿಗೂ ಇಲ್ಲ, ಬೇರೆ ಜಾತಿಯವರ ಬೆಂಬಲ ಬೇಕೇ ಬೇಕು. ಈ ದೇಶದಲ್ಲಿ ಅತ್ಯಂತ ನಿಷ್ಠಾವಂತ ಮತದಾರರನ್ನು ಹೊಂದಿರುವ ರಾಜಕೀಯ ನಾಯಕಿ ಮಾಯಾವತಿ. ಆ ರಾಜ್ಯದಲ್ಲಿ ಶೇಕಡಾ 22ರಷ್ಟಿರುವ ದಲಿತರು ಬಿಎಸ್‌ಪಿ ಬೆಂಬಲಿಗರು, ಅವರೊಳಗೆ ಶೇಕಡಾ ಹನ್ನೆರಡರಷ್ಟಿರುವ ಜಾಟವರು ಕಣ್ಣುಮುಚ್ಚಿಕೊಂಡು ಬೆಹೆನ್‌ಜಿಗೆ ಮತಹಾಕುವವರು. ಹೀಗಿದ್ದರೂ ಅವರು ಯಾಕೆ ಸೋತುಹೋದರು? ಕರ್ನಾಟಕದಲ್ಲಿ ಮುಸ್ಲಿಮರ ಜನಸಂಖ್ಯೆ ಲಿಂಗಾಯತರಿಗಿಂತ ಶೇಕಡಾ ಎರಡರಷ್ಟು ಮಾತ್ರ ಕಡಿಮೆ ಇದೆ.


ಮುಸ್ಲಿಮರು ಗುಂಪಾಗಿ ಒಂದೇ ಅಭ್ಯರ್ಥಿಗೆ ಮತಚಲಾಯಿಸುತ್ತಾರೆ ಎನ್ನುವ ಅಭಿಪ್ರಾಯವೂ ಇದೆ. ಹೀಗಿದ್ದರೂ ಗ್ರಾಮಪಂಚಾಯತ್‌ನಿಂದ ಸಂಸತ್‌ವರೆಗೆ ಎಷ್ಟು ಮುಸ್ಲಿಮ್ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವರಿಗೆ ಸಾಧ್ಯವಾಗಿದೆ?


ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಪ್ರಮಾಣ ಶೇಕಡಾ ಹದಿನೈದುವರೆ. ಒಂದಷ್ಟು ಕ್ಷೇತ್ರಗಳಲ್ಲಿ ಈ ಪ್ರಮಾಣ ಶೇಕಡಾ 20-25ರಷ್ಟಿರಬಹುದು. ಆದರೆ ಇಷ್ಟರಿಂದಲೇ ಒಬ್ಬ ಲಿಂಗಾಯತ ಅಭ್ಯರ್ಥಿ ಗೆಲ್ಲಲು ಸಾಧ್ಯವೇ? ಕಳೆದ ಚುನಾವಣೆಯ ಕಾಲದಲ್ಲಿ ರಾಜ್ಯದ ಲಿಂಗಾಯತರು ಬಹುಸಂಖ್ಯೆಯಲ್ಲಿ ಯಡಿಯೂರಪ್ಪನವರಿಂದಾಗಿ ಬಿಜೆಪಿಗೆ ಮತ ಹಾಕಿರುವುದು ನಿಜ ಇರಬಹುದು. ವೀರೇಂದ್ರ ಪಾಟೀಲರನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಿದ ನಂತರ ಅಸಮಾಧಾನಕ್ಕೀಡಾಗಿದ್ದ ಲಿಂಗಾಯತರು ರಾಜಕೀಯ ಬಲಪ್ರದರ್ಶನದ ಅವಕಾಶಕ್ಕಾಗಿ ಕಾಯುತ್ತಿದ್ದರು. ಅದೇ ಸಮಯದಲ್ಲಿ ತನ್ನ ನೆಲೆಯನ್ನು ವಿಸ್ತರಿಸಿಕೊಳ್ಳಲು ಬಿಜೆಪಿ ರಾಜ್ಯದ ಪ್ರಮುಖ ಜಾತಿಗೆ ಸೇರಿರುವ ಒಬ್ಬ ಜನಪ್ರಿಯ ನಾಯಕನ ಹುಡುಕಾಟದಲ್ಲಿತ್ತು. ಈ ಎರಡೂ ಅವಕಾಶವನ್ನು ಯಡಿಯೂರಪ್ಪನವರು ಬಳಸಿಕೊಂಡರು, ಮುಖ್ಯಮಂತ್ರಿಯೂ ಆಗಿಬಿಟ್ಟರು.ಆದರೆ ತನ್ನ ಜಾತಿಯ ಜನ ಹೆಮ್ಮೆಪಟ್ಟುಕೊಳ್ಳುವಂತಹ ಜನಪ್ರಿಯ ನಾಯಕರಾಗಿ  ಬೆಳೆದರೇ? ಜನನಾಯಕನಾಗಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಯಡಿಯೂರಪ್ಪನವರು ಮೂರುವರೆ ವರ್ಷಗಳ ಕಾಲದ ಅಧಿಕಾರದ ನಂತರ ತನ್ನ ರಾಜಕೀಯ ಉಳಿವಿಗಾಗಿ ಒಂದು ಜಾತಿಯ ನಾಯಕನಾಗಿ ತನ್ನನ್ನು ಬಿಂಬಿಸಿಕೊಳ್ಳುವ ಮಟ್ಟಕ್ಕೆ ಇಳಿದಿರುವುದು ಖಂಡಿತ ಅವರ ಜನಪ್ರಿಯತೆಯನ್ನು ತೋರಿಸುವುದಿಲ್ಲ.
ಕೃಪೆ : ಪ್ರಜಾವಾಣಿ

Saturday, March 24, 2012

ಮಾತ್ಗವಿತೆ-57

ಒಳಗಣ್ಣಿನ ಒಳಲೋಕ ಕಾಣಬಾರದು !
ಒಳ ಅರಿವು ಒಳ ಹರಿವು ತೋರಬಾರದು !
ಒಳಗೊಂದು ಮಿಡಿತ ; ಹೊರಗೆ
ಹಲವು ತುಡಿತ !
ಕಾರಣಕ್ಕೆ ಕಾರಣಾಂತರಗಳೂ ಇರುತ್ತವೆ !
ಒಳ-ಹೊರಗಿನ ಘಾಸಿತನಕ್ಕೆ ಹೇಸಿಕೆ ಬಿಡು
ಹೊಸ ಲೋಕದ ಕನಸು ಧ್ಯಾನಿಸು !

Tuesday, March 20, 2012

ಮಾತ್ಗವಿತೆ-56

ಯಾರಿಗೆ ಏನು ಹೇಳುವುದು
ಮನಸ್ಸುಗಳೇ ಮಿಸ್ಸಾಗಿರುವಾಗ ?
ಮೈ ಮುರಿದು ದುಡಿ ; ಪರಿಶ್ರಮ ಪಡು ;
ಪ್ರಯತ್ನಿಸು ಎಂಬಿತ್ಯಾದಿಗಳ ನಡುವೆ
ಪರರಾಶ್ರಯ ಪಡಿ ಎಂಬುದೇ ಅಧಿಕವಾಗಿರುವಾಗ
ಯಾರಿಗೆ ಏನು ಹೇಳಬೇಕು ?
ಹ್ಞೂಂ ಅನ್ನಲೇ ? ಉಹ್ಞೂಂ ಅನ್ನಲೇ ?
ದ್ವಂದ್ವತೆಗಳಲ್ಲ ; ಬದುಕಿನ ಪ್ರಶ್ನೆ !

ಜಾತೀಯತೆ ಹಾಗೂ ಜಾತ್ಯಾತೀತತೆ !

-ಡಾ.ಎಸ್.ಬಿ.ಜೋಗುರ

ಅದೊಂದು ಅಚ್ಚುಕಟ್ಟಾದ ವೇದಿಕೆ. ವೇದಿಕೆಯ ಮೇಲೆ ನಿರೂಪಕನನ್ನು ಒಳಗೊಂಡು ಏಳು ಜನ. ಆ ಏಳು ಜನರಲ್ಲಿ ಕಾರ್ಯಕ್ರಮ ನಿರೂಪಣೆ ಮಾಡುವವನನ್ನು ಮೈನಸ್ ಮಾಡಿದರೆ ಮಿಕ್ಕವರೆಲ್ಲಾ ಬಹುತೇಕವಾಗಿ ಒಂದೇ ಜಾತಿಗೆ ಸೇರಿದವರು. ಅವರೆಲ್ಲರೂ ಅಲ್ಲಿ ಸೇರಿರುವ ಉದ್ದೇಶ ‘ಜಾತ್ಯಾತೀತತೆಯ ಪ್ರಸ್ತುತತೆ’ ಎನ್ನುವ ವಿಷಯದ ಬಗ್ಗೆ ಕುರಿತು ಚರ್ಚಿಸುವುದಾಗಿದೆ. ಜಾತ್ಯಾತೀತತೆ ಎಂದರೇನು? ಎನ್ನುವ ವಿಷಯದಿಂದ ಆರಂಭವಾಗುವ ಅವರ ಚರ್ಚೆ ಅದರ ಕಾರಣಗಳು. ಪರಿಣಾಮಗಳನ್ನೊಳಗೊಂಡು ಅಂತಿಮವಾಗಿ ತಮ್ಮ ಸಮುದಾಯ ಚಿಕ್ಕ ಸಮುದಾಯ, ಅನೇಕ ಬಗೆಯ ಹಕ್ಕು ಸೌಲಭ್ಯಗಳಿಂದ ವಂಚಿತವಾದ ಸಮುದಾಯ, ಹಾಗೆ ನೋಡಿದರೆ ತಮ್ಮ ಜಾತಿಗೆ ಸಿಗುವ ಸೌಲಭ್ಯಗಳು ತನ್ನದೇ ಸೈಜಿನ ಜಾತಿಯವರಿಗೆ ಸಿಗುವ ಸೌಲಭ್ಯಗಳಿಗಿಂತಲೂ ಕಡಿಮೆ, ಈ ಬಾರಿಯ ಚುನಾವಣೆಯ ಸಂದರ್ಭದಲ್ಲಿ ಅದನ್ನು ನಾವೆಲ್ಲಾ ಒಗ್ಗಟ್ಟಾಗಿ ವೋಟು ಕೇಳಲು ಬರುವವರಿಗೆ ಮನದಟ್ಟು ಮಾಡಬೇಕು, ನಮ್ಮ ಜಾತಿಯ ಮಠಾಧೀಶರನ್ನೊಳಗೊಂಡು ಆ ದಿಶೆಯಲ್ಲಿ ಒಂದು ಗಟ್ಟಿ ಹೋರಾಟವನ್ನು ರೂಪಿಸಬೇಕು ಎನ್ನುವವರೆಗೆ ಆ ಚರ್ಚೆ ಬಂದು ನಿಲ್ಲುತ್ತದೆ. ಈ ರೀತಿಯ ಚರ್ಚೆಗಳು ಕೇಂದ್ರ ವೃತ್ತಾಂತದಿಂದ ಕರೆಕ್ಟಾಗಿ ಶುರುವಾದರೂ ವಿಚಲಿತವಾಗಿ ಎಲ್ಲೆಲ್ಲೋ ಹಾಯುವ, ಸುತ್ತಿ ಸುಳಿಯುವ ಸುಂಟರಗಾಳಿಯಂತೆ ಹೋಗಿ ನಿಲ್ಲುವ ಅಪಾಯದ ನಡುವೆ, ಜಾತ್ಯಾತೀತತೆ ಎನ್ನುವ ಪದ ಇವರ ಭಂಡತನಕ್ಕೆ ಬೆದರಿ ನಾಚಿ ನೀರಾಗುವ ಜೊತೆಗೆ ತನ್ನ ಅನರ್ಥಕ್ಕೆ ಕಂಗಾಲಾಗುವುದೂ ಇದೆ.
ಇಂಗ್ಲಿಷ್‍ನ  ‘ಸೆಕ್ಯುಲ್ಯಾರಿಝಂ’ ಎನ್ನುವ ಪದ ಆಯಾ ಹೊತ್ತಿಗೊದಗುವಂತೆ ಅರ್ಥೈಸುವಲ್ಲಿರುವ ಮುಖ್ಯ ಕಾರಣ ಇತರೆ ಭಾಷೆಗಳಲ್ಲಿ [ಕನ್ನಡವನ್ನೊಳಗೊಂಡು] ಸಾರ್ವತ್ರಿಕವಾಗಿ ಸಲ್ಲಬಹುದಾದ ಸ್ವೀಕೃತವಾದ ಏಕಮಾತ್ರ ಪದವಿಲ್ಲ. ಕನ್ನಡದಲ್ಲಂತೂ ಜಾತ್ಯಾತೀತತೆ ಎನ್ನುವ ಪದವನ್ನು ಧರ್ಮ ನಿರಪೇಕ್ಷತೆ, ಮತಾತೀತತೆ ಎಂತಲೂ ಕರೆಯವುದಿದೆ. ಅತ್ಯಂತ ಜಟಿಲವಾಗಿರುವ ಜಾತಿ ಹಾಗೂ ಧರ್ಮದಂತಹ ವಿಷಯಗಳಲ್ಲಿ ಸಡಿಲತೆಯನ್ನು ಕಂಡುಕೊಳ್ಳುವ ಮಾರ್ಗವಾಗಿ ಜಾತ್ಯಾತೀತತೆ ಪರಿಕಲ್ಪನೆ ಬೆಳೆದುಬಂದಿದೆ. ಸರಳವಾಗಿ ಹೇಳುವುದಾದರೆ ಧರ್ಮ ಮತ್ತು ಜಾತಿಯಂಥ  ವಿಷಯಗಳನ್ನು ಕುರಿತು ಅತ್ಯಂತ ಯತಾರ್ಥವಾಗಿ ವ್ಯವಹರಿಸುವ ಮನ:ಸ್ಥಿತಿಯ ಜಾತ್ಯಾತೀತತೆ. ಪಿ.ಎಚ್.ಲ್ಯಾಂಡಿಸ್ ಎನ್ನುವ ಚಿಂತಕರು ಈ ಜಾತ್ಯಾತೀತತೆ ಎನ್ನುವುದು ಎರಡು ಪ್ರಮುಖ ಧ್ಯೇಯಗಳನ್ನು ಆಧರಿಸಿದೆ ಎಂದಿರುವರು. ಒಂದನೆಯದಾಗಿ ಅನೇಕ ಶತಮಾನಗಳಿಂದಲೂ ನಂಬಿಕೊಂಡು ಬರಲಾಗಿದ್ದ ಅತಿಮಾನುಷ ಶಕ್ತಿಗಳ ಬಗೆಗಿನ ನಂಬುಗೆಯ ಬುಡಕ್ಕೆ ಕೈ ಹಾಕಿ ಅಲ್ಲಾಡಿಸುವುದು, ಎರಡನೆಯದಾಗಿ ಈ ಅತಿಮಾನುಷ ಶಕ್ತಿಯ ಬಗೆಗಿನ ನಂಬುಗೆಯ ಜಾಗದಲ್ಲಿ ವೈಚಾರಿಕತೆಯನ್ನು ತಂದು ನಿಲ್ಲಿಸಿರುವ ಕೆಲಸ ಅಷ್ಟೇ ಮುಖ್ಯವಾದುದು. ಅನೇಕ ಶತಮಾನಗಳಿಂದಲೂ ಧರ್ಮದ ಹೊಟ್ಟೆಯೊಳಗೆ ಬೆಚ್ಚಗೆ ಕುಳಿತು ಕಾವು ಕಂಡ ನಂಬುಗೆಗಳು, ಸಂಪ್ರದಾಯಗಳ ಬೇರುಗಳು ಸಡಿಲುಗೊಂಡು, ನಡುಕ ಉಂಟಾಗುವಲ್ಲಿ ಈ ಜಾತ್ಯಾತೀತ ಮನೋಭಾವವೇ ಕಾರಣ. ಆದರೆ ಇತ್ತೀಚಿನ ದಿನಗಳಲ್ಲಿ ಈ ಜಾತ್ಯಾತೀತತೆ ಎನ್ನುವ ಪದ ಆಯಾ ದೇಶಗಳಲ್ಲಿ ಕೋಮುಗಲಭೆಗಳು ಘಟಿಸಿದಾಗ ಬಳಕೆಯಾಗುವ ಪದವಾಗಿ ತನ್ನ ಸಂಕುಚಿತ ಸೀಮಿತವನ್ನು ಉಳಿಸಿಕೊಂಡಿದೆ ಎನ್ನುವಂತಾಗಿದೆ.
ಜಾತ್ಯಾತೀತತೆಯ ಬಗೆಗೆ ಮಾತನಾಡುತ್ತಾ ಖ್ಯಾತ ಇತಿಹಾಸಕಾರ್ತಿ ರೋಮಿಲಾ ಥಾಪರ್ ಅವರು ’ಜಾತ್ಯಾತೀತತೆ ಎನ್ನುವುದು ಜಾತ್ಯಾತೀತವಲ್ಲದ ಘಟನೆಗಳಿಗೆ ಸಿಗಬಹುದಾದ ಪ್ರತಿಕ್ರಿಯೆಯ ಹಂತದಲ್ಲಿಯ ಒಂದು ಪದವಾಗಿ ಮಾತ್ರ ಉಳಿದಿದೆ’ ಎಂದಿರುವುದರ ಹಿಂದೆ ಆ ಪದದ ಸಸ್ತಾ ಬಳಕೆಯ ಬಗೆಗಿನ ಕಳಕಳಿ ಅಡಕವಾಗಿದೆ. ಅನೇಕ ಸಂದರ್ಭಗಳಲ್ಲಿ ಈ ಜಾತ್ಯಾತೀತತೆಯ ಪರಿಕಲ್ಪನೆಯನ್ನು ಪಾಶ್ಚಾತ್ತೀಕರಣಕ್ಕೆ ಸಂವಾದಿ ಎನ್ನುವ ಹಾಗೆ ಬಳಸುವುದೂ ಇದೆ. ಆದರೆ ಎರಡೂ ಬೇರೆ ಬೇರೆ ಕಲ್ಪನೆಗಳೇ. ಜಾತ್ಯಾತೀತತೆ ಎನ್ನುವದು ಧರ್ಮ ಮತ್ತು ಜಾತಿಯನ್ನು ಧಿಕ್ಕರಿಸುವ ಬಗ್ಗೆ ಮಾತನಾಡುವುದಲ್ಲ, ಬದಲಾಗಿ ತನ್ನಂತೆ ಪರರ ಬಗೆದೊಡೆ ಕೈಲಾಸ ಕಣ್ಣ ಮುಂದೆಯೇ ಎಂದು ಪ್ರತಿಪಾದಿಸುವ ಮನೋಭಾವ. ಹಾಗೆ ನೋಡಿದರೆ ಈ ಜಾತ್ಯಾತೀತತೆಗೆ ಒಂದು ಅಗಾಧವಾದ ಶಕ್ತಿಯಿದೆ. ಅದು ಕೇವಲ ವೇದಿಕೆಯ ಉಪಭೋಗದ ವಿಷಯವಾಗಿ, ಚರ್ಚೆ ಮತ್ತು ಸಂವಾದದ ಸರಕಾಗಿ ಉಳಿದಿರುವ ಹಿನ್ನೆಲೆಯಲ್ಲಿಯೇ ಅದರ ತಾಕತ್ತಿನ ಅರಿವು ನಮಗೆ ಸರಿಯಾಗಿ ಗ್ರಹಿಕೆಯಾಗುತ್ತಿಲ್ಲ. ಇದನ್ನು ಬಳಸಿ ಒಂದು ಸಮುದಾಯವನ್ನು ಕೇವಲ ಧಾರ್ಮಿಕ ಸಾಮರಸ್ಯದ ತಳಹದಿಯ ಮೇಲೆ ಕಟ್ಟುವ ಕೆಲಸ ಮಾತ್ರವಲ್ಲದೇ ಅದನ್ನು ಔಚಿತ್ಯಪೂರ್ಣವಾಗಿ ರೂಪಿಸುವಲ್ಲಿಯೂ ಇದು ನೆರವಾಗುತ್ತದೆ. ಅದು ಗಾಂಧೀಜಿಯವರ ರಾಮರಾಜ್ಯ, ಪ್ಲೇಟೊನ ಆದರ್ಶರಾಜ್ಯ, ಥಾಮಸ್ ಮೋರ್‍‌ನ ಯುಟೊಪಿಯಾಕ್ಕೆ ತುಂಬಾ ಹತ್ತಿರವಾದ ಸಮುದಾಯವನ್ನು ಕಟ್ಟುವಲ್ಲಿ ಈ ಜಾತ್ಯಾತೀತತೆಯ ಶಕ್ತಿ ನೆರವಾಗುತ್ತದೆ. ಈ ಪರಿಕಲ್ಪನೆಯನ್ನು ಬಳಸುವಾಗಲೆಲ್ಲಾ ನಾವು ಬಹುತೇಕವಾಗಿ ಹಿಂದು-ಮುಸ್ಲಿಂ, ಧಾರ್ಮಿಕ ಸಮೂಹಗಳನ್ನು ಮೀರಿ, ಹೊರತುಪಡಿಸಿ ಚಿಂತಿಸುವುದೇ ಇಲ್ಲ. ಜಾತ್ಯಾತೀತತೆ ಎನ್ನುವುದು ಧರ್ಮ, ಜಾತಿ, ಭಾಷೆ, ಪ್ರಾದೇಶಿಕತೆಯನ್ನು ಮೀರಿ ಅನ್ವಯ, ಅಳವಡಿಕೆಯಾಗುವ ಅವಶ್ಯಕತೆಯಿದೆ.
ಜಾತಿ ಎನ್ನುವುದು ಭಾರತೀಯ ಸಮಾಜದಲ್ಲಿ ಮತ್ತೆ ನಮ್ಮ ಬದುಕಿನ ಬೇರೆ ಬೇರೆ ಆಯಾಮಗಳ ಬಗೆಗಿನ ತೀರ್ಮಾನಗಳ ಮಧ್ಯೆ ಎಂಟ್ರಿ ಹೊಡೆಯುವ ಪರಿಣಾಮವಾಗಿ ನಾವು ಜಾತ್ಯಾತೀತತೆಯ ಪರಿಕಲ್ಪನೆಯನ್ನು ಸಂಕುಚಿತವಾದ ರೀತಿಯಲ್ಲಿ ಬಳಸುವ, ಅದರ ಆಳ ಅಗಲವನ್ನು ಕುಬ್ಜಗೊಳಿಸುವ ಕೆಲಸವನ್ನು ತಿಳಿದೂ ಮಾಡುತ್ತಿರುತ್ತೇವೆ. ಹಾಗಾದಾಗ ಜಾತ್ಯಾತೀತತೆ ಎನ್ನುವ ಪದ ಹುಳ ತಿಂದ ಕಟ್ಟಿಗೆಯಂಥಾಗುತ್ತದೆ. ಭಾರತೀಯ ಸಂವಿಧಾನದ ಪೂರ್ವ ಪೀಠಿಕೆಯಲ್ಲಿ ತಳ ಊರಿದ ಈ ಕಲ್ಪನೆಯನ್ನು ವಸ್ತುನಿಷ್ಠ ಹಿನ್ನೆಲೆಯಲ್ಲಿ ಅರಿಯುವ ಅವಶ್ಯಕತೆಯಿದೆ. ಜಾತಿಯ ಸೆಳಕಿನೊಂದಿಗೆ ಜಾತ್ಯಾತೀತತೆ ಎನ್ನುವ ಪದ ಪ್ರಯೋಗ ಮಾಡುವಾತ ಆ ಪದಕ್ಕೂ ನ್ಯಾಯ ಕೊಡಲಾರ. ಅಂತೆಯೇ ತನ್ನ ಜೊತೆಗಿರುವ ಜನಸಮೂಹಕ್ಕೂ ಕೂಡಾ. ಇನ್ನು ಕೆಲ ವಿದೇಶಿ ಚಿಂತಕರು ಭಾರತೀಯ ನೆಲದಲ್ಲಿ ಜಾತ್ಯಾತೀತತೆ ಎನ್ನುವುದು ಸಾಧ್ಯವೇ ಇಲ್ಲ ಯಾಕೆಂದರೆ ಇಲ್ಲಿ ವೃತ್ತಿ ಮತ್ತು ಪ್ರವೃತ್ತಿ ಎರಡೂ ಒಂದೇ ಆಗಿಲ್ಲ ಎನ್ನುವುದಿದೆ. ಅಂದರೆ ಆಚರಣೆ ಮತ್ತು ಅನುಸರಣೆಯ ಮಧ್ಯೆ ಇಲ್ಲಿ ತುಂಬಾ ಅಂತರಗಳಿವೆ ಎಂದು ಹೇಳುವವರಿದ್ದಾರೆ.
ಆಂದ್ರೇ ಬೀತೇ ಎನ್ನುವ ಚಿಂತಕರು ಈ ಜಾತ್ಯಾತೀತತೆ ಎನ್ನುವ ಪರಿಕಲ್ಪನೆ ಕೇವಲ ಭಾರತದಲ್ಲಿ ಮಾತ್ರವಲ್ಲದೇ ತಾವು ತುಂಬಾ ಸೆಕ್ಯುಲರ್ ಎಂದು ಹೇಳಿಕೊಳ್ಳುವ ಫ್ರಾನ್ಸ್ ಮತ್ತು ಜರ್ಮನಿಯಲ್ಲಿಯೂ ಗೊಂದಲಗಳನ್ನು ಒಳಗೊಂಡಿರುವುದಿದೆ. ಅತಿ ಮುಖ್ಯವಾಗಿ ಆಯಾ ರಾಷ್ಟ್ರೀಯ ನೆಲೆಯಲ್ಲಿ ಜಾತ್ಯಾತೀತತೆ ಎನ್ನುವುದು ಅರ್ಥೈಸುವಂತಾದರೂ ಅದರ ಮೂಲ ಆಶಯ ಮಾತ್ರ ಧರ್ಮ, ಜಾತಿ, ಜನಾಂಗ, ಭಾಷೆಗಳಿಗೆ ಸಂಬಂಧಿಸಿರುವ ಉದಾರ ಮನೋಭಾವವೇ ಆಗಿರಬೇಕೇ ಹೊರತು ಮೂಲ ಆಶಯದಿಂದ ವ್ಯತಿರಿಕ್ತವಾಗಿ ಜಾತ್ಯಾತೀತತೆಯ ವ್ಯಾಖ್ಯಾನವೇ ವಿಭಿನ್ನವಾಗುವುದು ವಿಪರ್ಯಾಸ.
ಭಾರತವನ್ನು ನಾವು ಗಣನೆಗೆ ತೆಗೆದುಕೊಂಡಾಗ ಇಲ್ಲಿರುವ ಧರ್ಮಗಳು, ಭಾಷೆಗಳು, ವೇಷ- ಭೂಷಣಗಳು, ಆಹಾರ ಪದ್ಧತಿಗಳು, ಹಬ್ಬ ಹರಿದಿನಗಳು, ಜಾತ್ರೆಗಳು ಈ ನೆಲದ ಬದುಕಿನಲ್ಲಿ ಸ್ವಾಭಾವಿಕವಾಗಿಯೇ ಜಾತ್ಯಾತೀತತೆಯ ಗುಣಗಳನ್ನು ಸಂಪೋಷಿಸಿಕೊಂಡು ಬರುವಲ್ಲಿ ಕಾರಣವಾಗಿವೆ. ಈ ಗುಣಕ್ಕೆ ಧಕ್ಕೆ ಬಂದಾಗಲೆಲ್ಲಾ ಬದುಕು ಭಯವಾಗಿ ಕಾಡುವುದಿದೆ. ಬದುಕಿನ ರಿಕ್ತತೆಯನ್ನು ಮೀರಿಯೂ ಕೂಡಿ ಬದುಕುವ ತಹತಹಿಕೆಗೆ ತೊಡಕಾಗುವ ಶಕ್ತಿಗಳನ್ನು ಸಹಿಸದಿರುವ ಗುಣ ಈ ಮಣ್ಣಿನಲ್ಲಿಯೇ ಇದೆ. ನಾವು ಅಭಿವೃದ್ಧಿ ಹೊಂದುತ್ತಿರುವ ಮಾರ್ಗಗುಂಟ ಆಧುನೀಕರಣ ಹೊಂದುವ ಹಂಬಲದವರಾದರೆ  ಆ ದಿಶೆಯಲ್ಲಿ ನೆರವಾಗುವ ಬಹುತೇಕ ಸಂಸ್ಥೆಗಳನ್ನು ಜಾತ್ಯಾತೀತ ನೆಲೆಯಲ್ಲಿಯೇ ಪ್ರತಿಷ್ಟಾಪನೆ ಮಾಡುವ ಜರೂರತ್ತಿದೆ.
ನಮ್ಮ ಮಕ್ಕಳು ನೆರೆಮನೆಯ ಹುಡುಗರೊಂದಿಗೆ ಕೂಡಿ ಆಡುವಾಗ ಅವರು ಹೀಗೆ, ಹಾಗೆ ಅದನ್ನ ತಿಂತಾರೆ ಇದನ್ನು ತಿಂತಾರೆ ಎಂದು ಮಕ್ಕಳ ಕಿವಿಯಲ್ಲಿ ಪಿಸುಗುಡುವ ಪಿಚಕಾರಿಗಳಾಗದೇ ಒಂದು ಮಗು ಇನ್ನೊಂದು ಮಗುವಿಗಿಂತಾ ಯಾವುದೇ ರೀತಿಯಲ್ಲೂ ಭಿನ್ನವಾಗಲಾರದು ಎನ್ನುವ ಉದಾರತೆಯಿಂದ ಆರಂಭವಾಗುವ ಪಾಠ, ಶಾಲೆ-ಕಾಲೇಜುಗಳು, ನಮ್ಮ ನೌಕರಶಾಹಿ ವ್ಯವಸ್ಥೆಗಳು, ವಿಶ್ವವಿದ್ಯಾಲಯಗಳನ್ನೊಳಗೊಂಡು ನಮ್ಮ ದೈನಂದಿನ ಬದುಕನ್ನು ತನ್ನಿಷ್ಟದಂತೆ ರೂಪಿಸಹೊರಟ ಸಮೂಹ ಮಾಧ್ಯಮಗಳವರೆಗೂ ಮುಂದುವರೆಯಬೇಕು. ಹೀಗೆ ಸಮಾಜದ ಎಲ್ಲ ಸ್ತರದ ಸಂಘ-ಸಂಸ್ಥೆಗಳು ಜಾತ್ಯಾತೀತತೆಯ ನೆಲೆಯಲ್ಲಿಯೇ ಮೈದಳೆದು, ಕಾರ್ಯ ನಿರ್ವಹಿಸುವಂತಾಗಬೇಕು. ’ಈ ಮುಂಚಿನ ಧಾರ್ಮಿಕ ಭಿನ್ನತೆಗಳನ್ನು ಸಾರೂಪ್ಯಗೊಳಿಸುವಲ್ಲಿಯೇ ಜಾತ್ಯಾತೀತತೆಯ ಗುಣದ ಅಗಮ್ಯ ಶಕ್ತಿ ಅಡಗಿದೆ’ ಎಂದು ಸಮಾಜಶಾಸ್ತ್ರಜ್ಞ ಎಮ್.ಎನ್.ಶ್ರೀನಿವಾಸರು ಹೇಳಿರುವುದಿದೆ. ಜಾತ್ಯಾತೀತತೆಯ ಸ್ಥಾಪನೆಯಲ್ಲಿ ಧಾರ್ಮಿಕ ಸಂಗತಿಗಳು ಸಮಾಜದಲ್ಲಿಯ ಮಿಕ್ಕ ಎಲ್ಲ ಸಂಸ್ಥೆಗಳನ್ನು ನಿಯಂತ್ರಿಸುವ ಬದಲಾಗಿ ಅವುಗಳ ಮುಕ್ತ, ಸ್ವಾಯತ್ತ ಕಾರ್ಯ ನಿರ್ವಹಣೆಯಲ್ಲಿ ತೊಡಕಾಗದಿರುವಂತೆ ವ್ಯವಹರಿಸುವುದು ಕೂಡಾ ಅಷ್ಟೇ ಮುಖ್ಯವಾದುದು. ಆ ಮೂಲಕ ಜಾತಿ ಧರ್ಮಗಳ ಪ್ರಭುತ್ವವನ್ನು ತಕ್ಕ ಮಟ್ಟಿಗಾದರೂ ಕಡಿಮೆ ಮಾಡಬಹುದು. ಜಾತ್ಯಾತೀತತೆ ಎನ್ನುವದು ಒಂದು ಬಲವಂತದ ಹೇರಿಕೆ ಇಲ್ಲವೇ ಕಷ್ಟದ ಆಯ್ಕೆಯಾಗದೇ ಒಂದು ಬೃಹತ್ ಸಮಷ್ಠಿಯ ಇಷ್ಟವಾಗಬೇಕು.
ಕೃಪೆ : ವರ್ತಮಾನ

ಮಾತ್ಗವಿತೆ-55

ನಿನ್ನೊಳಗಿನ ನನ್ನ ನೋಡುವ ತವಕದಿಂದ
ಕಳ್ಳಿಸಾಲಿನಲ್ಲಿ ಖಾಲಿ ಕುಂತಾಗ
ಕೈಯಾಡಿಸಿದಾಗ ಯಾಕೆ ಕೊಸರಿಕೊಂಡೆ ?
ನಾನು-ನೀನಾಗಿ, ನೀನು-ನಾನಾಗಿ
ಚಿಗುರು ಒಡಮೂಡಿದ ನಾಚಿಕೆಯೋ ?
ಅಂಜಿಕೆಯೋ ? ; ಭಂಜಿಕೆಯೋ ?

ಮಾತ್ಗವಿತೆ-54

ನೋಡು ನೋಡುತ್ತಲೇ ಬೆಕ್ಕಸ ಬೆರಗಾಗಿ
ಮಿಥುನದ ಮಥನದಲ್ಲಿ ಮೈ ಮರೆತು
ಕಕ್ಕಿಕೊಳ್ಳಬೇಕು ಎನ್ನುವಷ್ಟರಲ್ಲಿಯೇ
ಗತಿಗೇಡಿ ಬೆಕ್ಕಿಗೆ ಉಣಿಸಿದ್ದು
ನೆನಪಿಗೆ ಬಂತು !

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.