Showing posts with label ಕನ್ನಡ ಸಾಹಿತ್ಯ ಸಮ್ಮೇಳನ. Show all posts
Showing posts with label ಕನ್ನಡ ಸಾಹಿತ್ಯ ಸಮ್ಮೇಳನ. Show all posts

Monday, February 11, 2013

ಸಾಹಿತ್ಯ ಸಮ್ಮೇಳನದ ಅವಘಡ !


            ಮಾತಾಡುವುದಕ್ಕೆ ತ್ರಾಣ ಕೊಡದ ಅಧ್ಯಕ್ಷರ ಇಳಿ ವಯಸ್ಸು, ಯಾವುದೇ ಹೊಸ ಚಿಂತನೆಗಳನ್ನು ಹೊಳೆಸದ ಹಳೆ ಪ್ರಶ್ನೆಗಳು ಮತ್ತು ಆಗಲೇ ಹೇಳಿದ ಉತ್ತರಗಳ ಪುನರಾವರ್ತನೆ - ಇವುಗಳೊಂದಿಗೆ ಬಹುನಿರೀಕ್ಷಿತ ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದ ಕೊನೆಗೊಂಡಿತು.

    ಅಧ್ಯಕ್ಷರ ಅನಾರೋಗ್ಯದಿಂದಾಗಿಯೇ ತಡವಾಗಿ ಸಂವಾದವನ್ನು ಪ್ರಾರಂಭಿಸಿದರಾದರೂ ಅವರಾಗಲೇ ತುಂಬ ಸುಸ್ತಾಗಿದ್ದರು. ಅವರನ್ನು ಹೊಗಳುತ್ತಾ, ವಿಷಯಾಂತರ ಮಾಡುತ್ತಾ ಸಂವಾದಕರು ಪ್ರಶ್ನೆ ಕೇಳುತ್ತಾ ಹೋದರು. ಅವರ ಪ್ರಶ್ನೆ ಮತ್ತು ಇವರ ಉತ್ತರದ ನಡುವೆ ಲೇಖಕಿ ಡಾ.ವಸುಂಧರಾ ಭೂಪತಿ ನಿರ್ವಾಹಕಿಯಾಗಿ ಕೆಲಸ ಮಾಡಿದರು. ಆದರೆ ಸಂವಾದದ ಮೂಲಕ ಸಮ್ಮೇಳನಾಧ್ಯಕ್ಷರನ್ನು ಪ್ರೇಕ್ಷಕರು ಅರಿತುಕೊಳ್ಳುವ ಇಂಥ ಸಂವಾದದ ಮೂಲ ಆಶಯವೇ ಈಡೇರಲಿಲ್ಲ.

    ಅಧ್ಯಕ್ಷ ಕೋಚೆ ಇಳಿವಯಸ್ಸು ಮತ್ತು ಅನಾರೋಗ್ಯದ ಕಾರಣಕ್ಕೆ ಹಣ್ಣಾಗಿದ್ದರಾದರೂ ಮನೋಚೈತನ್ಯ ಕುಂದಿರಲಿಲ್ಲ. ಕೇಳಿದ ಪ್ರಶ್ನೆಗೆ ಉತ್ತರ ಕೊಡುತ್ತಿರುವಾಗ ಇನ್ನೊಂದು ಪ್ರಶ್ನೆಯ ಕಡೆ ಹೋಗಲಾಯಿತು. ಆದರೆ ಯಾವ ಪ್ರಶ್ನೆಗೂ ಸರಿಯಾಗಿ ಉತ್ತರಿಸದೇ ಮುನ್ನಡೆಯಬಾರದು ಎಂದು ಹೇಳಿ ತಮ್ಮ ಉತ್ತರವನ್ನು ಕೋಚೆ ಮುಂದುವರಿಸಿದರು.

            ಅವರಿಗೆ ತೊಂದರೆಯಾಗದಿರಲೆಂದು ಎಲ್ಲರ ಪ್ರಶ್ನೆಗಳನ್ನೂ ಒಟ್ಟಿಗೇ ನೀಡಿ, ಉತ್ತರವನ್ನು ಕಡೆಯಲ್ಲಿ ನೀಡುವ ಅವಕಾಶ ಕಲ್ಪಿಸಲಾಯಿತು. ಆದರೆ 'ತುಂಬ ಪ್ರಶ್ನೆ ಒಟ್ಟಿಗೇ ಕೇಳಿಬಿಟ್ಟರೆ ನನಗೆ ಯಾರು ಏನು ಕೇಳಿದರು ಅಂತ ಗೊತ್ತಾಗುವುದಿಲ್ಲ, ನೆನಪೂ ಇರುವುದಿಲ್ಲ' ಎಂದು ತಮಾಷೆಯಾಗಿಯೇ ಅಸಮಾಧಾನ ವ್ಯಕ್ತಪಡಿಸಿದರು.

ಸಮಿತಿ ರಚಿಸಿ:

          ಕನ್ನಡ ಶಾಲೆಗಳನ್ನು ಮುಚ್ಚುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೋಚೆ, ಕನ್ನಡ ಶಾಲೆಗಳು ಮತ್ತು ಇಂಗ್ಲಿಷ್‌ ಶಾಲೆಗಳನ್ನು ಮುಚ್ಚುವ ಸ್ಥಿತಿ ಯಾಕೆ ಬಂದಿದೆ ಎಂಬ ಬಗ್ಗೆ ಅಧ್ಯಯನ ಆಗಬೇಕು ಎಂದರು. ಸರ್ಕಾರ ಒಂದು ಸಮಿತಿಯನ್ನು ರಚಿಸಿ ಸರ್ವೇ ನಡೆಸಬೇಕು. ಕಳೆದ ಹತ್ತು ವರ್ಷಗಳಲ್ಲಿ ಕನ್ನಡ ಶಾಲೆಯಲ್ಲಿ ಓದಿದವರು ಮತ್ತು ಇಂಗ್ಲಿಷ್‌ ಶಾಲೆಗಳಲ್ಲಿ ಓದಿದವರು ಪಡೆದುಕೊಂಡ ಯಶಸ್ಸಿನ ಅನುಪಾತವನ್ನು ತೆಗೆಯಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮಾತೃಭಾಷೆಯ ಶಿಕ್ಷಣದಲ್ಲಿ ಅಪಾರ ಯಶಸ್ಸು ಗಳಿಸಿದ್ದಾರೆ. ಆದರೆ ಇಂಗ್ಲಿಷ್‌ ಓದಿದರೆ ಮಾತ್ರ ಗೆಲುವು ಮತ್ತು ಉದ್ಯೋಗ ಸಾಧ್ಯ ಎನ್ನುವ ಭ್ರಮೆ ಮೂಡಿರುವುದರಿಂದಲೇ ಕನ್ನಡ ಶಾಲೆಗಳ ಈ ದುಸ್ಥಿತಿಗೆ ಕಾರಣ ಎಂದು ಕೋಚೆ ಹೇಳಿದರು.

ಮಾತುಕತೆಯಿಂದಷ್ಟೇ ಸಾಧ್ಯ:

        ಕಾವೇರಿ, ಕೃಷ್ಣಾ ನದಿ ಹಂಚಿಕೆ ವಿವಾದದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಕೋಚೆ, ಕಳೆದ 20ವರ್ಷಗಳಿಂದ ಕರ್ನಾಟಕ ಮತ್ತು ನೆರೆ ರಾಜ್ಯಗಳ ಮಧ್ಯೆ ನೀರಿನ ಹಂಚಿಕೆ ವಿವಾದ ನಡೆಯುತ್ತಲೇ ಇದೆ. ಇದನ್ನು ನ್ಯಾಯಾಲಯದ ಮೂಲಕವೇ ಪರಿಹರಿಸಿಕೊಳ್ಳುವುದು ಸಾಧ್ಯವಿಲ್ಲ. ಪರಸ್ಪರ ಕೂತು ಚರ್ಚಿಸಿ ಈ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.

ದೇಣಿಗೆ ಸಂಗ್ರಹಿಸೋಣ:

         ಸಮ್ಮೇಳನ ಸರ್ಕಾರದ ಸಹಾಯಕ್ಕೆ ಕೈಚಾಚಬೇಕೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲೆ ಸಾರ್ವಜನಿಕರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಿದ ಹಣದಲ್ಲಿ ನಡೆಯುತ್ತಿತ್ತು. ಈಗ ಹಾಗಿಲ್ಲ, ಸರ್ಕಾರದ ಹಣ ಎಂದಾಕ್ಷಣ ಅದ್ದೂರಿತನವೂ ಬರುತ್ತದೆ. ಹಾಗಾಗಿ ಮತ್ತೆ ಜನರಿಂದ ಹಣ ಸಂಗ್ರಹಿಸಿ, ಸರಳ ಸಮ್ಮೇಳನ ಆಯೋಜಿಸಲು ಸಾಧ್ಯ ಎಂದರು.

ಒಂದಾಗಿ ಬಾಳ್ಳೋಣ:

              ಗಡಿ, ಪ್ರಾದೇಶಿಕ ಅಸಮಾನತೆ ಸೇರಿದಂತೆ ಇವತ್ತು ನಡೆಯುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಪ್ರೀತಿಯೇ ಉತ್ತರ ಎಂದು ಕೋಚೆ ನುಡಿದರು. ತಮ್ಮ ಸಂವಾದದ ಕೊನೆಯ ಆಶಯ ಇಷ್ಟೇ, ಎಲ್ಲರೂ ಒಂದಾಗಿ ಇರೋಣ, ಪ್ರೀತಿಯಿಂದ ಬಾಳ್ಳೋಣ ಎಂದರು. 

ಕೃಪೆ : ಉದಯವಾಣಿ

Monday, February 04, 2013

ದಲಿತ ಸಾಹಿತ್ಯದ ಗೈರುಹಾಜರಿಯಲ್ಲಿ ಕಸಾಪ ಸಮ್ಮೇಳನ !


ಬಸವರಾಜ ಸೂಳಿಭಾವಿ - ಡಾ. ಎಚ್.ಎಸ್.ಅನುಪಮಾ


ಸರ್ಕಾರ ಅಲುಗಾಡುತ್ತಿರುವಾಗಲೂ ಸರ್ಕಾರಿ ಕೃಪಾಪೋಷಿತ ಸಾಹಿತ್ಯ ಪರಿಷತ್ತು ಮತ್ತೊಂದು ಸಾಹಿತ್ಯ ಸಮ್ಮೇಳನಕ್ಕೆ ಭರದಿಂದ ಸಜ್ಜಾಗುತ್ತಿರುವಾಗ ಅದರ ಸ್ವರೂಪದ ಬಗ್ಗೆ ಮತ್ತೆ ಗಂಭೀರ ಚರ್ಚೆ ನಡೆಯತೊಡಗಿದೆ. ವಿಜಾಪುರದ ಬರದ ನಾಡು ತನ್ನಲ್ಲಿರುವ ಸೌಂದರ್ಯ, ಐತಿಹಾಸಿಕ ಸ್ಮಾರಕಗಳನ್ನೆಲ್ಲ ತೋರಿಸಲು ತವಕಿಸುತ್ತಿರುವಾಗ ಪರಿಷತ್ತಿನ ನಿಜಮುಖ ಮತ್ತೆ ಮುನ್ನೆಲೆಗೆ ಬಂದಿದೆ.


ಈ ಸಮ್ಮೇಳನದಲ್ಲಿ ಮಹಿಳಾ ಸಾಹಿತ್ಯ, ಮಕ್ಕಳ ಸಾಹಿತ್ಯ, ವಚನ ಸಾಹಿತ್ಯ, ಅನುಭಾವಿ ಸಾಹಿತ್ಯ, ಗಝಲ್ ಸಾಹಿತ್ಯ, ಜಾನಪದ ಸಾಹಿತ್ಯ ಇತ್ಯಾದಿ ಸಾಹಿತ್ಯದ ನಾನಾ ಪ್ರಕಾರಗಳಿಗೆ ಒಂದೊಂದು ಗೋಷ್ಠಿ ಇದೆ. ಎಂದಿನಂತೆ ದಲಿತ ಸಾಹಿತ್ಯ ಪ್ರಕಾರವಷ್ಟೇ ಗೈರುಹಾಜರಿ. ರಾಜಾಶ್ರಯದಲ್ಲಿ ಹುಟ್ಟಿದ ಕಸಾಪ ತಳ ಸಮುದಾಯಗಳ ತಲ್ಲಣ ಒಳಗೊಂಡ ಸಾಹಿತ್ಯದ ದನಿಯಲ್ಲ ಎಂಬುದನ್ನು ಅದರ ನಡೆ ಸ್ಪಷ್ಟಪಡಿಸುತ್ತಲೇ ಬಂದಿದೆ.


ನೂರು ವರ್ಷ ಮಿಕ್ಕಿದ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಈ ತನಕ ಆಯ್ಕೆಯಾದವರಲ್ಲಿ ಒಬ್ಬರೂ ದಲಿತ ಸಮುದಾಯದಿಂದ ಬಂದವರಿಲ್ಲ. ನಡೆದ ಎಪ್ಪತ್ತೊಂಬತ್ತು ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾದವರಲ್ಲಿ ಗೀತಾ ನಾಗಭೂಷಣ ಒಬ್ಬರಷ್ಟೇ ಪರಿಶಿಷ್ಟ ಪಂಗಡದವರು. ಜಿಲ್ಲಾ ಘಟಕಗಳ ಸಂಘಟನೆ ಮತ್ತು ಸಮ್ಮೇಳನಗಳಲ್ಲಿಯೂ ಇದು ಪುನರಾವರ್ತನೆಯಾಗಿದೆ.


ಈ ಅವಧಿಯಲ್ಲಿ ಚಾಮರಾಜನಗರ ಜಿಲ್ಲೆ ಹೊರತು ಪಡಿಸಿ ಉಳಿದೆಲ್ಲ ಜಿಲ್ಲೆಗಳ ಕಸಾಪ ಅಧ್ಯಕ್ಷರ ಯಾದಿಯಲ್ಲಿ ದಲಿತ ಸಮುದಾಯದ ಸಾಹಿತಿಗಳ ಹೆಸರುಗಳಿಲ್ಲ. ಇದು ಆಕಸ್ಮಿಕವಾಗಿರಲು ಸಾಧ್ಯವಿಲ್ಲ. ಕಟುಸತ್ಯವೆಂದರೆ ಕಸಾಪಕ್ಕಿರುವುದು ದಲಿತ ಅಸ್ಮಿತೆ ನಿರಾಕರಿಸುವ ಮೇಲ್ಜಾತಿ ಚಹರೆ. ಜಾತಿ ಆಧಾರಿತ ಸಮಾಜದಲ್ಲಿ ಕಸಾಪ ಮೇಲ್ವರ್ಗದವರ ಸಾಹಿತ್ಯಿಕ ಸಂವೇದನೆಗಳ ಅಭಿವ್ಯಕ್ತಿ ಘಟಕದಂತಿದೆ. ಸಾಹಿತ್ಯ ಪರಿಷತ್ತು ನಡೆಸುವ ಸಮ್ಮೇಳನಗಳಲ್ಲಿ ದಲಿತ ಸಾಹಿತ್ಯ ಗೋಷ್ಠಿ ಇಡಬೇಕೆಂಬ ಅಭಿಪ್ರಾಯ ವ್ಯಕ್ತಗೊಂಡಾಗಲೂ ಅದನ್ನು ನಿರಾಕರಿಸುವ ಅಸಡ್ಡೆ ಪ್ರಕಟವಾಗಿರುವುದನ್ನು ಈ ಹಿನ್ನೆಲೆಯಲ್ಲಿ ಗಮನಿಸಬೇಕಾಗಿದೆ.


ಹಂಪನಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದಾಗ 1979ರಲ್ಲಿ ನಡೆದ ಧರ್ಮಸ್ಥಳ ಸಾಹಿತ್ಯ ಸಮ್ಮೇಳನದಲ್ಲಿ ದಲಿತ ಸಾಹಿತ್ಯ ಗೋಷ್ಠಿ ಇಡಿ ಎಂಬ ಕೂಗು ಕೇಳಿಬಂತು. ಚನ್ನಣ್ಣ ವಾಲೀಕಾರರ ಆ ನಿಲುವಿಗೆ ಕಸಾಪ ಅಧ್ಯಕ್ಷರು ಸಾಹಿತ್ಯದಲ್ಲಿ `ದಲಿತ-ಬಲಿತ' ಎಂಬುದಿಲ್ಲ ಎಂದು ಹೇಳಿದ್ದರು. ಈ ಮಾತು ಅವರೊಬ್ಬರ ಹೇಳಿಕೆ ಮಾತ್ರವಲ್ಲ, ಸಾಹಿತ್ಯದಲ್ಲಿ ಮೇಲ್ಜಾತಿಗಳ ಪ್ರಾಬಲ್ಯ ಮತ್ತು ಧೋರಣೆಯ ಪುರಾವೆಯೂ ಆಗಿದೆ. ಕಸಾಪದ ಈ ಮನೋಧರ್ಮವನ್ನು ವಿರೋಧಿಸಿಯೇ ಬಂಡಾಯ ಸಾಹಿತ್ಯ ಸಂಘಟನೆ ಹುಟ್ಟಿಕೊಂಡಿದ್ದರೂ ಆ ಧೋರಣೆ ವಿಜಾಪುರ ಸಾಹಿತ್ಯ ಸಮ್ಮೇಳನದವರೆಗೂ ಮುಂದುವರೆದುಕೊಂಡು ಬಂದಿದೆ.


ಸಮ್ಮೇಳನದಲ್ಲಿ ಯಾವ ಗೋಷ್ಠಿಯನ್ನಾದರೂ ಇಡುವ ಸ್ವಾತಂತ್ರ್ಯವಿರುವಾಗ ದಲಿತ ಸಾಹಿತ್ಯಕ್ಕೆ ಸಂಬಂಧಿಸಿದ ಗೋಷ್ಠಿಗೆ ಅವಕಾಶ ನೀಡಿ ಎಂದು ವಿಜಾಪುರ ಸಮ್ಮೇಳನದ ಪೂರ್ವಭಾವಿ ಸಭೆಗಳಲ್ಲಿ ದಲಿತ ಸಾಹಿತಿಗಳು ಒತ್ತಾಯಿಸುತ್ತಲೇ ಬಂದಿದ್ದರು. ದಲಿತ ಸಂಘಟನೆಗಳ ಅಭಿಮತವೂ ಅದೇ ಆಗಿತ್ತು. ಅಷ್ಟಾದರೂ ದಲಿತ ಸಾಹಿತ್ಯ ಗೋಷ್ಠಿಗೆ ಅವಕಾಶ ನೀಡುವ ವಿಚಾರ ಕೈಬಿಟ್ಟುಹೋಗಿದೆ. ಜಾತಿಪದ್ಧತಿ ವಿರುದ್ಧ ಚಾರಿತ್ರಿಕ ಹೋರಾಟ ಕಟ್ಟಿ, ಅನುಭವ ಮಂಟಪದಲ್ಲಿ ದಲಿತ ದಮನಿತ ದನಿಗಳಿಗೆ ವಿಪುಲ ಅವಕಾಶ ನೀಡಿದ ಬಸವಣ್ಣನ ನಾಡಿನಲ್ಲಿ ನಡೆವ ಸಮ್ಮೇಳನ ದಲಿತ ಸಾಹಿತ್ಯ ಚರ್ಚೆಗೆ ಆಸ್ಪದ ಕಲ್ಪಿಸದೇ ಹೋಗಿರುವುದು ಕಸಾಪದ ಮೇಲ್ಜಾತಿ ಪ್ರೇಮವನ್ನು ಢಾಳಾಗಿ ತೋರ್ಪಡಿಸಿದೆ.


ದಲಿತ ಚಳವಳಿಯ ಮುನ್ನ ಮತ್ತು ನಂತರ ರಚಿತವಾದ ಅಪಾರ ದಲಿತ ಸಾಹಿತ್ಯವನ್ನು ಗಮನದಲ್ಲಿಟ್ಟುಕೊಂಡಾಗ; ಸಂವಿಧಾನಾತ್ಮಕ ಕ್ರಮಗಳ ಹೊರತಾಗಿಯೂ ದಲಿತ ಸಮುದಾಯ ಬಿಕ್ಕಟ್ಟುಗಳಲ್ಲಿ ಮುಳುಗಿರುವಾಗ; ಬೆರಳೆಣಿಕೆಯಷ್ಟು ದಲಿತ ಸಾಹಿತಿಗಳು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದರೂ ದಲಿತ ಸಂವೇದನೆ - ಬಿಕ್ಕಟ್ಟು ಕುರಿತು ಒಂದೂ ಗೋಷ್ಠಿಯಿಲ್ಲದಿರುವುದು ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬಹುದೊಡ್ಡ ಲೋಪವಾಗಿ ಕಾಣಿಸುತ್ತಿದೆ.


ಇಲ್ಲಿ ಕೆಲ ಪ್ರಶ್ನೆಗಳೇಳುತ್ತವೆ. ಭಾಗವಹಿಸುತ್ತಿರುವ ದಲಿತ ಲೇಖಕರು ಏಕೆ ಈ ಕುರಿತು ಪ್ರಶ್ನಿಸುವುದಿಲ್ಲ? ಸಾಹಿತ್ಯ ಪರಿಷತ್ತಿನಲ್ಲಿ ಪರಿಶಿಷ್ಟಜಾತಿ ಕೋಟಾದಲ್ಲಿ  ಪ್ರಾತಿನಿಧ್ಯ ಪಡೆದವರೇಕೆ ಪ್ರತಿಭಟಿಸುವುದಿಲ್ಲ? ದಲಿತ ಪ್ರಶ್ನೆಯನ್ನು ದಲಿತರೇ ಎತ್ತಬೇಕೆಂದು ದಲಿತೇತರ ಲೇಖಕರು ಏಕೆ ಭಾವಿಸುತ್ತಾರೆ? ಮಾತೆತ್ತಿದರೆ ದಲಿತ ಪರ ಯೋಜನೆ, ಕಾರ್ಯಕ್ರಮಗಳನ್ನು ಘೋಷಿಸುವ ಸರ್ಕಾರದಿಂದ ಅನುದಾನ ಪಡೆಯುವ ಪರಿಷತ್ತು ಗೋಷ್ಠಿಯೊಂದನ್ನು ದಲಿತ ಸಂವೇದನೆಗೆ ಮೀಸಲಿಡಲು ಏಕೆ ಹಿಂದೆ ಮುಂದೆ ನೋಡುತ್ತದೆ? ಇಂಥ ಪ್ರಶ್ನೆಗಳಿಗೆ ಸಮಜಾಯಿಷಿ ಉತ್ತರಗಳು ಸಿದ್ಧವಾಗಿರುತ್ತವೆ. ಆದರೆ ಇಂಥ ಸಮಜಾಯಿಷಿಗಳ ಸಾರ ಇಷ್ಟೆ: ದಲಿತ ಭಾಗವಹಿಸುವಿಕೆ ಮತ್ತು ಪ್ರತಿನಿಧಿತ್ವ ಪ್ರಾತಿನಿಧಿಕವಾಗಿರಲೆಂದೇ ಹೊರತು ಸಮಾನ ನೆಲೆಯ ಸಹಭಾಗಿತ್ವ ಹಾಗೂ ಒಳಗೊಳ್ಳುವಿಕೆಗಲ್ಲ.


ಸಾಮಾಜಿಕ ನ್ಯಾಯದ ಮೇಲೆ ಆಣೆಯಿಡುವ ಸರ್ಕಾರದ ಲೋಪಗಳನ್ನು ಎತ್ತಿತೋರಿಸಿ ಪ್ರಶ್ನಿಸುವುದೇ ಇಷ್ಟು ಕಷ್ಟವಾದರೆ; ಭಾಷೆ ಕುರಿತ ತಪ್ಪು ನೀತಿಗಳ ವಿರುದ್ಧ, ನಿರುಪಯೋಗಿ ಕಾರ್ಯಕ್ರಮಗಳ ವಿರುದ್ಧ, ಜನವಿರೋಧಿ ತಾತ್ವಿಕತೆಯ ವಿರುದ್ಧ ಸಾಹಿತ್ಯ ಸಮ್ಮೇಳನದಲ್ಲಿ ಚರ್ಚೆಯಾಗುವುದು ದೂರವೇ ಉಳಿಯಿತು.


ಸಾಹಿತ್ಯ, ಕಲೆಗಳು ಎಂದಿನಿಂದ ರಾಜಾಶ್ರಯದಲ್ಲಿ ಅರಳಿವೆ, ನರಳಿವೆ. ಹಾಗೆಯೇ ರಾಜಸ್ವದ ಹಂಗಿಲ್ಲದೆ ಜನಪದರ ಬಯಲಲ್ಲಿ ಜೀವಂತವಾಗಿಯೂ ಉಳಿದಿವೆ. ಸಾಹಿತ್ಯಕ್ಕೆ ದೊರಕುವ ರಾಜಾಶ್ರಯ ಕೇವಲ ಆಸ್ಥಾನ ಕವಿ, ಪಂಡಿತರ ಸ್ವ-ಪೋಷಣೆಗಷ್ಟೇ ಸೀಮಿತವಾಗುವುದಾದರೆ; ರಾಜಾಶ್ರಯದ ಹೆಮ್ಮರ ಸಣ್ಣಪುಟ್ಟ ಸಸಿಗರಿಕೆಗಳೆಂಬ ಬಹುತ್ವ ಬಿಂಬಿಸುವ ಜೀವಸಂಕುಲದ ಬೆಳವಣಿಗೆಗೆ ಮಾರಕವಾಗುವುದಾದರೆ; ಅದು ಭಾಷೆಗೂ, ಆ ಭಾಷೆಯ ಸಾಹಿತ್ಯಕ್ಕೂ ಶತ್ರುವೇ.


ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರೀ ಅನುದಾನವನ್ನವಲಂಬಿಸಿದ ಒಂದು ಸಂಸ್ಥೆ. ಪ್ರತಿ ವರ್ಷ ನಡೆಯುವ ಸಮ್ಮೇಳನವೂ ಅದರ ಪ್ರತಿಬಿಂಬವೇ ಆಗಿರುತ್ತದೆ. ಅದು ಎಷ್ಟು ರಾಜಕೀಕರಣಗೊಂಡಿದೆಯೆಂದರೆ ಅಲ್ಲಿ ಸಾಹಿತಿಗಳನ್ನು ದುರ್ಬೀನು ಹಾಕಿ ಹುಡುಕಬೇಕು. ಅಷ್ಟೇ ಅಲ್ಲ, ಅದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಎನ್ನುವಂತೆಯೂ ಇಲ್ಲ. ಸರ್ಕಾರದ ಹಂಗಿನಲ್ಲಿರುವ ಕಸಾಪದಲ್ಲಿ ರಾಜಕೀಯ-ಸಾಮಾಜಿಕ ಬದುಕಿನ ಲೆಕ್ಕಾಚಾರ, ಸಮೀಕರಣಗಳೇ ಮುಂದುವರೆಯುತ್ತವೆ. ಎಲ್ಲೆಡೆ ಇಂಗ್ಲಿಷ್ ಶಾಲೆ ತೆರೆಯಲು ಅವಕಾಶ ಕೊಟ್ಟು ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿರುವ ಸರ್ಕಾರ ಮತ್ತು ಮಂತ್ರಿಗಳನ್ನು ತರಾಟೆಗೆ ತೆಗೆದುಕೊಳ್ಳಬೇಕಾದ ಕಸಾಪ, ಸರ್ಕಾರ ಕೊಡುವ ಅನುದಾನದಿಂದ ಬಾಯಿಮುಚ್ಚಿಕೊಂಡಿದೆ. ಸರ್ಕಾರದ ಅನುದಾನ ಜನರ ಹಣ, ಅದನ್ನು ಕೊಡಬೇಕಾದ್ದು ಸರ್ಕಾರದ ಕರ್ತವ್ಯ ಎಂದುಕೊಂಡರೂ ಅದರ ಅಧೀನತೆ ಮಗ್ಗಲು ಬದಲಿಸಿದಂತಾಗುತ್ತದೆ.


ಸಾಹಿತ್ಯ ಚಳವಳಿಯಲ್ಲಾಗುವ ಹೊಸತನಗಳಿಗೆ ತೆರೆದುಕೊಳ್ಳದೇ, ಕಾಲದ ಪಲ್ಲಟಗಳನ್ನು ಗಮನಿಸದೇ ಬೀಸುಗಾಲಿಡುವ ಕಸಾಪ ಉದ್ದಕ್ಕೂ ಸಾಂಪ್ರದಾಯಿಕ ನೆಲೆಯಲ್ಲಿ ಒಂದೇ ಮಾದರಿಯ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಕಾಲದ ಸಂಕಟಗಳಿಗೆ, ಅದನ್ನು ಒಳಗೊಳ್ಳುವ ಸಾಹಿತ್ಯ ಸಂವೇದನೆಯ ಕಡೆಗೆ ಕ್ಯಾರೆ ಅನ್ನದೆ ವರ್ಷವರ್ಷ ಸಮ್ಮೇಳನ ನಡೆದು ಗೊತ್ತುವಳಿ ಸ್ವೀಕರಿಸಲಾಗುತ್ತಿದೆ. ಪರಿಷತ್ತು ಜಾತಿ ವಾಸನೆಯಿಂದ ಎಂದೂ ಬಿಡಿಸಿಕೊಳ್ಳದಿರುವುದು; ರಾಜಕಾರಣಿಗಳಿಂದ ಉದ್ಘಾಟಿಸಲ್ಪಡುವುದು; ಸಾಹಿತ್ಯಕ್ಕೆ ಸಂಬಂಧವೇ ಇಲ್ಲದ ಸ್ವಾಮಿಗಳನ್ನು ಕರೆತಂದು ಉಧೋ ಉಧೋ ಎನ್ನುವುದು ಇವೆಲ್ಲ ಅದರ ಸ್ವರೂಪಕ್ಕೆ ತಕ್ಕ ಪುರಾವೆಗಳಾಗಿವೆ. 


ಎಂದೇ ಕಸಾಪ ಹೊಸತನ ಪಡೆದುಕೊಳ್ಳಬಯಸಿದಲ್ಲಿ ತುಂಬ ನಿಷ್ಠುರ ದಾರಿ ಕ್ರಮಿಸಬೇಕಾಗುತ್ತದೆ. ಸ್ವಾಯತ್ತ ಸಂಸ್ಥೆಯಾಗಿ ತನ್ನ ಹಣಕಾಸನ್ನು ತಾನೇ ಉತ್ಪಾದಿಸಿಕೊಂಡು ಸರ್ಕಾರದ ಹಂಗಿನಿಂದ ಹೊರಬರಬೇಕು. ಕಸಾಪ ವರ್ತಮಾನದ ತಲ್ಲಣಗಳ ಬಗ್ಗೆ ಮಾತನಾಡಿ ಜನರ ಧ್ವನಿಯಾಗಬೇಕು. ಸಾಹಿತ್ಯದ ಬೆಳವಣಿಗೆ ಗಮನಿಸಿ ಹೊಸ ಸಾಧ್ಯತೆಗಳಿಗೆ ಅವಕಾಶ ನೀಡಬೇಕು. ರಾಜಕಾರಣದ ಮತ್ತು ಆಳುವವರ ಭಾಷೆಯಾದ ಮೆರವಣಿಗೆಯ ಔಚಿತ್ಯ ಏನೆಂದು ವಿವೇಚನೆಗೊಳಪಟ್ಟು ಸರಳತೆ ಸಾಹಿತ್ಯ ಸಮ್ಮೇಳನಗಳ ಆದ್ಯತೆಯಾಗಬೇಕು. ಸಾಹಿತ್ಯ ಅರಿವಿನ ವಿನಯದತ್ತ ಸಾಗಬೇಕು.

ಕಸಾಪ ಮುನ್ನಡೆಸುವವರು ಈ ಎಲ್ಲದರ ಕುರಿತು ತುರ್ತಾಗಿ ಯೋಚಿಸಬೇಕು.
ಕೃಪೆ : ಪ್ರಜಾವಾಣಿ

Monday, January 30, 2012

ಪ್ರಖರ ವಿದ್ವಾಂಸ ಎಲ್.ಬಸವರಾಜು ನಿಧನ

ಮೈಸೂರು: ಹಿರಿಯ ಸಾಹಿತಿ ಲಿಂಗಪ್ಪ ಬಸವರಾಜು (93) ಭಾನುವಾರ ರಾತ್ರಿ ಇಲ್ಲಿ ಸ್ವಗೃಹದಲ್ಲಿ ನಿಧನರಾದರು.
ಮೂಲತಃ ಕೋಲಾರ ಜಿಲ್ಲೆ ಇಡಗೂರು ಗ್ರಾಮದವರಾದ ಅವರು 1919ರಲ್ಲಿ ಜನಿಸಿದ್ದರು. 40ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು ಚಿತ್ರದುರ್ಗದಲ್ಲಿ ನಡೆದ 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

1977ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, 1994ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2000ರಲ್ಲಿ ಭಾಷಾಂತರಕ್ಕೆ ಸಾಹಿತ್ಯ ಅಕಾಡೆಮಿ ಬಹುಮಾನ, 2005ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾ ಸಮ್ಮಾನ್, ಬಸವ ಪುರಸ್ಕಾರ, ನಾಡೋಜ ಪ್ರಶಸ್ತಿ, ಪಂಪ ಪ್ರಸಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳಿಗೆ ಅವರು ಪಾತ್ರರಾಗಿದ್ದರು.


ಮೈಸೂರು ವಿವಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ 32 ವರ್ಷಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಎಲ್.ಬಸವರಾಜು ಅವರು, ವಚನಗಳ ಸಂಶೋಧನೆ, ಗ್ರಂಥಸಂಪಾದನೆ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.


ಇಡಗೂರು, ಸಿದ್ದಗಂಗೆ ಮತ್ತು ಬೆಂಗಳೂರುಗಳಲ್ಲಿ ಹೈಸ್ಕೂಲುವರೆಗಿನ ಶಿಕ್ಷಣ ಪಡೆದ ನಂತರ ವಿಶೇಷ ವ್ಯಾಸಂಗಕ್ಕಾಗಿ ಮೈಸೂರಿಗೆ ತೆರಳಿದ ಎಲ್.ಬಸವರಾಜು, 1946 ರಲ್ಲಿ ಬಿಎ ಆನರ್ಸ್ ಮತ್ತು 1951 ರಲ್ಲಿ ಎಂ.ಎ. ಪದವಿ ಪಡೆದರು. ಸ್ವಲ್ಪ ಕಾಲ, ದಾವಣಗೆರೆ ಮತ್ತು ಮೈಸೂರಿನ ಯುವರಾಜ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ನಂತರ, ಬಸವರಾಜು ಅವರು ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯನ್ನು ಸೇರಿದರು.(1967) 1979 ರಲ್ಲಿ ಸೇವೆಯಿಂದ ನಿವತ್ತರಾದರು.


ಎಲ್.ಬಸವರಾಜು ಅವರು ಗ್ರಂಥಸಂಪಾದನೆಯ ಕ್ಷೇತ್ರದಲ್ಲಿ, ಅನೇಕ ಹೊಸ ಆವಿಷ್ಕಾರಗಳನ್ನು ಮಾಡಿದ್ದಾರೆ; ವಿಶಿಷ್ಟವಾದ ದೃಷ್ಟಿಕೋನಗಳನ್ನು ಅಳವಡಿಸಿಕೊಂಡಿದ್ದಾರೆ. ಕನ್ನಡ ಸಾಹಿತ್ಯದ ಅಭಿಜಾತ ಕೃತಿಗಳು ಮತ್ತು ಜ್ಞಾನದ ಆಕರಗಳನ್ನು, ಪಂಡಿತರೇನೂ ಅಲ್ಲದ ಜನಸಾಮಾನ್ಯರ ಅಳವಿಗೆ ನಿಲುಕುವಂತೆ ನೀಡಬೇಕೆನ್ನುವುದೇ ಅವರ ಗುರಿ.


ಆದ್ದರಿಂದಲೇ ಅವರು ಅನೇಕ ಮಹಾಕಾವ್ಯಗಳ ಸರಳವಾದ ಗದ್ಯರೂಪಗಳನ್ನು ಸಿದ್ಧಪಡಿಸಿ ಕೊಟ್ಟಿದ್ದಾರೆ. ಪ್ರಾಚೀನ ಕಾವ್ಯಗಳಲ್ಲಿ ಬರುವ ಪದ್ಯಗಳನ್ನು, ಬಿಡಿ ಪದಗಳಾಗಿ ಒಡೆದು, ಗದ್ಯಸಮೀಪವಾದ ವಾಕ್ಯರಚನೆಯಲ್ಲಿ ಮರುಜೋಡಣೆ ಮಾಡುವ ಪ್ರಯತ್ನವನ್ನೂ ಅವರು ಮಾಡಿದ್ದಾರೆ. ಅಗತ್ಯವಿರುವ ಕಡೆಗೆ ಸೂಕ್ತವಾದ ಲೇಖನಚಿಹ್ನೆಗಳನ್ನು ಕೊಟ್ಟಿದ್ದಾರೆ.
ಈ ರೀತಿಯ ಪ್ರಯೋಗಗಳಲ್ಲಿ ತೊಡಗಿಕೊಳ್ಳುವುದಕ್ಕಿಂತ ಮುಂಚಿತವಾಗಿಯೂ ಅವರು ಪರಿಶ್ರಮ ವಹಿಸಿ ಗ್ರಂಥಸಂಪಾದನೆ ಮಾಡಿದ್ದರು. ಓಲೆಗರಿಗಳು ಮತ್ತು ಕಾಗದದ ಹಸ್ತಪ್ರತಿಗಳ ನೆರವಿನಿಂದ ಮೂಲಪಠ್ಯವನ್ನು ಗುರುತಿಸುವ ಕೆಲಸದಲ್ಲಿ ಮಗ್ನರಾಗಿದ್ದರು. ಬಸವರಾಜು ಅವರು ಸಂಪಾದನೆ ಮಾಡಹೊರಡುವ ಕತಿಗಳ ಆಯ್ಕೆಯಲ್ಲಿ ಜಾತ್ಯತೀತವಾದ ಧೋರಣೆಯನ್ನು ಹೊಂದಿದ್ದಾರೆ.

`ಆದಿಪುರಾಣ`ದಂತಹ ಜೈನ ಕೃತಿ, `ಬುದ್ಧಚರಿತ`ದಂತಹ ಬೌದ್ಧಕೃತಿ, `ತೊರವೆಯ ರಾಮಾಯಣ`, `ಶಬ್ದಮಣಿದರ್ಪಣ` ಯಾವುದೂ ಅವರ ಅನಾದರಕ್ಕೆ ಗುರಿಯಾಗಿಲ್ಲ. ತಮ್ಮ ಅನಿಸಿಕೆಗಳನ್ನು ಸ್ಪಷ್ಟವಾಗಿ ಮಂಡಿಸಲು ಅವರು ಯಾವಾಗಲೂ ಹಿಂಜರಿದಿಲ್ಲ.


`ಬಸವೇಶ್ವರರ ವಚನಗಳು` `ಅಲ್ಲಮನ ವಚನಚಂದ್ರಿಕೆ`  `ಶಿವದಾಸ ಗೀತಾಂಜಲಿ`,     `ಬಸವ ವಚನಾಮೃತ`,  `ಅಕ್ಕನ ವಚನಗಳು`, `ಅಲ್ಲಮನ ವಚನಗಳು` ಇವು ಬಸವರಾಜು ಅವರು ಸಂಪಾದಿಸಿರುವ ಕೆಲವು ಪ್ರಮುಖ ಗ್ರಂಥಗಳು.
ಕೃಪೆ : ಪ್ರಜಾವಾಣಿ 

ಕನ್ನಡ ಸಾಹಿತ್ಯ ಸಂಪತ್ತು ಎಲ್ ಬಸವರಾಜು ಇನ್ನಿಲ್ಲ

ಎಲ್ ಬಸವರಾಜು ನೆನಪಿನಲ್ಲಿ ಅವರು ಬಿ.ಎಸ್. ನಾರಾಯಣಸ್ವಾಮಿಯವರೊಂದಿಗಿನ ಸಂದರ್ಶನ ಇಲ್ಲಿದೆ :
“ಬರಿಮಾತಿನ ಸಾಹಿತಿ, ಸ್ವಾಮೀಜಿ, ರಾಜಕಾರಣಿಗಳಿಂದ ದೇಶ ಹಾಳು”ಚಿತ್ರದುರ್ಗ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಎಲ್. ಬಸವರಾಜು ಅವರು ಆಯ್ಕೆಯಾದ ಕೂಡಲೇ ಅದುವರೆಗಿದ್ದ ವಿವಾದದ ಹೊಗೆಯೆಲ್ಲವೂ ಒಮ್ಮೆಗೇ ಮಾಯವಾಯಿತು. ಆ ಸ್ಥಾನಕ್ಕೆ ಪ್ರೊಫೆಸರ್ ಎಲ್‌ಬಿ ಅಷ್ಟು ಸೂಕ್ತರು ಹಾಗೂ ವಿವಾದಾತೀತರು. 90ರ ಹರೆಯದಲ್ಲೂ ಗ್ರಂಥ ಸಂಪಾದನೆ ಮತ್ತು ಸೃಜನಶೀಲ ಸಾಹಿತ್ಯದ ಸಹವಾಸದಿಂದ ಅವರು ದೂರವಾಗಿಲ್ಲ. ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಎಲ್‌ಬಿ ಅವರೊಂದಿಗೆ ಬಿ.ಎಸ್. ನಾರಾಯಣಸ್ವಾಮಿ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನೀವು ಬಹು ಹಿಂದೆಯೇ ಆಯ್ಕೆಯಾಗಬೇಕಿತ್ತು.
ಇದೀಗ ನಾಡೋಜ ಪ್ರಶಸ್ತಿಯೂ ಸಂದಿದೆ. ಈ ಬಗ್ಗೆ…?
ಈ ಪ್ರಶಸ್ತಿಗಳೆಲ್ಲಾ ನಮ್ಮೊಳಗಿನ ಅಹಂಕಾರವನ್ನು ತೃಪ್ತಿಪಡಿಸುತ್ತವೆ ಅಷ್ಟೆ. ಪ್ರಶಸ್ತಿ, ಪದವಿಯನ್ನೆಲ್ಲಾ ನಾನು ಯಾವತ್ತೂ ನಿರೀಕ್ಷಿಸಿದವನಲ್ಲ; ಅದಕ್ಕಾಗಿ ಕೆಲಸ ಮಾಡಿದವನಲ್ಲ. ಗ್ರಂಥ ಸಂಪಾದನೆ ಮತ್ತು ಸೃಜನಶೀಲ ಬರಹಗಳೆರಡರಲ್ಲೂ ತೊಡಗಿಸಿಕೊಂಡಿದ್ದೀರಿ. ನಿಮಗೆ ಖುಷಿ ಕೊಟ್ಟಿದ್ದು…ಗ್ರಂಥ ಸಂಪಾದನೆ ಇರಲಿ, ಸೃಜನಶೀಲ ಬರವಣಿಗೆ ಇರಲಿ ಎರಡನ್ನೂ ಖುಷಿಯಿಂದಲೇ ಮಾಡಿದ್ದೀನಿ ಅಂತ ಹೇಳಬಲ್ಲೆ. ಈಗ ತಿರುಗಿ ನೋಡಿದರೆ ಇವನ್ನೆಲ್ಲಾ ಬರೆದದ್ದು ನಾನೇನಾ ಅನಿಸುತ್ತದೆ. ನಾನು ಬರೆದಿಲ್ಲ; ಯಾವುದೋ ಶಕ್ತಿ ನನ್ನ ಕೈಯಿಂದ ಬರೆಸಿತು ಅನ್ನುವುದೇ ನಿಜ. ಏನೇ ಮಾಡಿದರೂ ಆ ಒಂದು ಆವೇಶದಿಂದ, ಮನಃಪೂರ್ವಕವಾಗಿ ಮಾಡಬೇಕು. ಇಲ್ಲದೇ ಹೋದರೆ ಅದು ಕೂಲಿ ಕೆಲಸ ಆಗುತ್ತದೆ.
ಗ್ರಂಥ ಸಂಪಾದನೆಯತ್ತ ನಿಮ್ಮ ಒಲವು ಹರಿದಿದ್ದು ಹೇಗೆ?

ನಾನು ವಿದ್ಯಾರ್ಥಿ ದೆಸೆಯಲ್ಲಿ ನಮ್ಮ ಪ್ರಾಚೀನ ಪಠ್ಯಗಳನ್ನು ಓದುತ್ತಾ, ಅರ್ಥ ಮಾಡಿಕೊಳ್ಳುತ್ತಿದ್ದಾಗ ಕೆಲವು ಕಡೆ ಏನೋ ತಪ್ಪಿದೆ; ಅರ್ಥ ಸರಿ ಬರುತ್ತಿಲ್ಲಾ ಎನಿಸುತ್ತಿತ್ತು. ಇದನ್ನು ನಮ್ಮ ಗುರುಗಳಿಗೂ ಹೇಳುತ್ತಿದ್ದೆ. ಅವರೂ ಕೂಡಾ ನನ್ನ ಹಾಗೇ ಅಭಿಪ್ರಾಯಪಡುತ್ತಿದ್ದರು. ಆನಂತರ ಪ್ರಾಚೀನ ಕೃತಿಯೊಂದರ ಹಲವು ಪಠ್ಯಗಳನ್ನು ಓದಿ ಯಾವುದು ಸರಿ ಎಂದು ನಿರ್ಣಯಿಸುವುದೇ ನನಗೆ ಒಂದು ಹವ್ಯಾಸವಾಗಿ ಹೋಯಿತು. ಹೀಗಾಗಿ ಗ್ರಂಥ ಸಂಪಾದನೆಯತ್ತ ನನ್ನನ್ನು ತೊಡಗಿಸಿಕೊಂಡೆ. ಮೇಲಾಗಿ ನಮ್ಮ ಪ್ರಾಚೀನ ಕೃತಿಗಳಲ್ಲಿ ಸಾಕಷ್ಟು ಪ್ರಕ್ಷೇಪಗಳಿವೆ. ಕೃತಿಯ ಉದ್ದೇಶವೇ ಮರೆಯಾಗಿ ಹೋಗುವಂತಹ ಪ್ರಕ್ಷೇಪಗಳಾಗಿವೆ. ಬಸವಣ್ಣನವರದಲ್ಲದ ಹಲವು ವಚನಗಳು ಅವರ ಅಂಕಿತನಾಮದಿಂದ ಪ್ರಕಟವಾಗಿದ್ದವು. ನಾನು ಅವನ್ನೆಲ್ಲಾ ಸ್ಥೂಲವಾಗಿ ಅಧ್ಯಯನ ಮಾಡಿ ಇವು ಬಸವಣ್ಣ ಅವರದಲ್ಲ ಎಂದು ಹೇಳಿದೆ. ಹೀಗೆ ಹೇಳಿದ್ದಕ್ಕೆ ಹಲವು ವಿರೋಧಗಳೂ ಬಂದವು. ಇನ್ನು ‘ಶೂನ್ಯಸಂಪಾದನೆ’ಯಂತಹ ಕೃತಿಗಳು ಬಹಳಷ್ಟು ಕಾಲ ಕೃತಿಕಾರನ ಹೆಸರಿನ ಬದಲಿಗೆ ಯಾರ್‍ಯಾರದೋ ಹೆಸರಿನಲ್ಲಿ ಪ್ರಕಟಗೊಳ್ಳುತ್ತಿತ್ತು. ಇಂತಹ ‘ಕಳ್ಳತನ’ದಲ್ಲಿ ಹಲವು ಮಠಗಳು, ಸ್ವಾಮೀಜಿಗಳೂ ಪಾಲ್ಗೊಂಡಿದ್ದು ಬೇಸರ ತರುವ ವಿಷಯ.
ಪ್ರಾಚೀನ ಕೃತಿಗಳು ಇಂದಿನ ಕಾಲಕ್ಕೆ ಎಷ್ಟು ಪ್ರಸ್ತುತ?
ಪ್ರಾಚೀನ ಕೃತಿಗಳಲ್ಲಿ ಎಲ್ಲಾ ಕಾಲಕ್ಕೂ ಪ್ರಸ್ತುತವಾಗುವ ಗಟ್ಟಿ ಕೃತಿಗಳೇ ಈಗಲೂ ಉಳಿದಿರುವುದು. ಅವು ಇಂದಿಗೂ ಪ್ರಸ್ತುತ. ಪಂಪ, ರನ್ನ, ಬಸವಾದಿ ಶರಣರು… ಅವರೆಲ್ಲಾ ಎಂಥಾ ನೀತಿ ಹೇಳಿದ್ದಾರೆ? ಆದರೆ ಅವುಗಳನ್ನೆಲ್ಲಾ ಈಗಿನವರು ಓದಬೇಕಲ್ಲಾ… ಓದಿ ಅದರಂತೆ ನಡೆಯಬೇಕಲ್ಲಾ… ರನ್ನನ ಒಂದು ಕಂದ ಪದ್ಯ ಹೀಗಿದೆ: ‘ಶ್ರೀಯುತನೊಳುದಾರತೆ, ವಾಕ್‌ಶ್ರೀಯುತನೊಳಮತ್ಸರತ್ವಂ ಆಗದು…’ ಅಂದರೆ ಶ್ರೀಮಂತರಲ್ಲಿ ಉದಾರತೆಯೂ, ಕವಿ-ಸಾಹಿತಿಗಳಲ್ಲಿ ಅಮತ್ಸರವೂ (ಪ್ರೀತಿ) ಇರುವುದಿಲ್ಲ. ಅದರ ಬದಲು ಉದಾರವಂತನೇ ಶ್ರೀಮಂತನಾಗಿ, ಅಮತ್ಸರನು ಕವಿಯಾದರೆ ಎಷ್ಟು ಚೆನ್ನ ಎನ್ನುತ್ತಾನೆ ರನ್ನ. ಇದು ಈಗಲೂ ಎಷ್ಟು ನಿಜ ನೋಡಿ. ನಮ್ಮ ಸಾಹಿತ್ಯವಲಯದಲ್ಲಿ ಎಷ್ಟು ಮತ್ಸರ ಇದೆ ಗೊತ್ತಲ್ಲ! ಇಂದಿನವರು ಹಿರಿಯರ ನೀತಿಯನ್ನು ಪಾಲಿಸುವುದಿಲ್ಲ. 12ನೇ ಶತಮಾನದಲ್ಲಿ ಬಸವಣ್ಣ ವೈದಿಕ ಧರ್ಮಕ್ಕೆ ಪ್ರತಿಯಾಗಿ ಸಮಾಜ ಸುಧಾರಣೆಯಾಗುವಂತಹ ಕಾಯಕ ಧರ್ಮವನ್ನು ಬೋಧಿಸಿದ. ಅದು ಜಾತಿರಹಿತ ಧರ್ಮ. ಆದರೆ ಈಗ ಬಸವನ ಅನುಯಾಯಿ ಎಂದುಕೊಳ್ಳುವವರು ‘ಬ್ರಾಹ್ಮಣ’ರಾಗಲು ಹೊರಟಿದ್ದಾರೆ; ಜಾತಿ ರಾಜಕೀಯದಲ್ಲೇ ತೊಡಗಿದ್ದಾರೆ.
ಹಾಗಿದ್ದರೆ ಈಗಿನ ಸಾಹಿತ್ಯದ ಜಾಡು ಎತ್ತ ಸಾಗುತ್ತಿದೆ?
ಈಗಿನ ಸಾಹಿತ್ಯವೇ? ಅದೇ ನೋಡಿ, ಯಾರಿಗೆ ಅಕಾಡೆಮಿ ಪ್ರಶಸ್ತಿ ಬಂತು, ಯಾರಿಗೆ ಪಂಪ ಪ್ರಶಸ್ತಿ ಬಂತು, ನಾಡೋಜ ಬಂತು; ತನಗೆ ಬರಲಿಲ್ಲ… ಎಂಬ ಮತ್ಸರದಲ್ಲಿ ತೊಡಗಿದೆ ಅಷ್ಟೇ. ನನಗೆ ಪ್ರಶಸ್ತಿ ಬಂತು ಅಂತ ನಾನು ಉಳಿದವರ ಬಗ್ಗೆ ತಿರಸ್ಕಾರದಿಂದ ಈ ಮಾತು ಹೇಳುತ್ತಿಲ್ಲ. ಆದರೆ ವಾಸ್ತವ ಹೀಗಿದೆ. ಸಾಹಿತ್ಯ ಎನ್ನುವುದು ಸತ್ಕ್ರಿಯೆಗೆ ಪ್ರೇರೇಪಣೆ ನೀಡಬೇಕು. ಅಂದರೆ ಒಂದು ರೀತಿಯಲ್ಲಿ ದೀಪದಿಂದ ದೀಪ ಹಚ್ಚುವ ಕೆಲಸ ಮಾಡಬೇಕು. ಆದರೆ ಇವತ್ತು ಸಾಹಿತಿಗಳು ಬರೀ ಮಾತನಾಡುತ್ತಿದ್ದಾರೆಯೇ ವಿನಾ ಕೆಲಸ ಮಾಡುತ್ತಿಲ್ಲ. ಇವತ್ತಿನ ಜ್ವಲಂತ ಸಮಸ್ಯೆಗಳಿಗೂ ತನಗೂ ಸಂಬಂಧವೇ ಇಲ್ಲ ಎನ್ನುವಂತೆ ಸಾಹಿತ್ಯ ಸಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವಂಥ ಕೃತಿಗಳು ಬರುತ್ತಿಲ್ಲ. ಸಾಮಾನ್ಯವಾಗಿ ಬರೆಯುವವರು, ಸಾಹಿತಿಗಳನ್ನು ಜನ ಮಹಾತ್ಮ ಎಂದೇ ತಿಳಿಯುತ್ತಾರೆ. ಆದರೆ ಆತ ಮಹಾತ್ಮನೇನೂ ಆಗಿರುವುದಿಲ್ಲ. ಅವನಲ್ಲೂ ಎಲ್ಲರಂತೆ ಓರೆ-ಕೋರೆಗಳು ಇರುತ್ತವೆ. ಯುರೋಪ್‌ನಲ್ಲಿ ಇಂಗ್ಲೆಂಡ್-ಫ್ರೆಂಚ್ ಯುದ್ಧದ ಸಂದರ್ಭದಲ್ಲಿ ವರ್ಡ್ಸ್‌ವರ್ತ್ ಕವಿ ತನ್ನ ದೇಶದ ಬಗ್ಗೆ ಬಹಳ ಅಭಿಮಾನದಿಂದ ಬರೆದ. ಆದರೆ ಅದೇ ವೇಳೆ ಅವನ ದೇಶದ ಜನ ಭಾರತದಲ್ಲಿ ಶೋಷಣೆ ಮಾಡುತ್ತಿದ್ದಾಗ ಅದರ ಬಗ್ಗೆ ಚಕಾರ ಎತ್ತಲಿಲ್ಲ. ಹೀಗಾಗಿ ಕವಿಗಳೆಲ್ಲಾ ಮಹಾತ್ಮರೇನಲ್ಲ. ಇಂದು ಎಲ್ಲಾ ಕ್ಷೇತ್ರ ಹೊಲಸಾದ ಹಾಗೆ ಸಾಹಿತ್ಯವಲಯ ಕೂಡಾ ಹೊಲಸಾಗಿಬಿಟ್ಟಿದೆ. ನನಗಂತೂ ಯಾವುದೇ ಆಶಾವಾದ ಕಾಣುತ್ತಿಲ್ಲ. ಇವತ್ತು ಸ್ವಾಮೀಜಿಗಳು, ರಾಜಕಾರಣಿಗಳು ಮತ್ತು ಸಾಹಿತಿಗಳನ್ನು ಒಂದೇ ತಕ್ಕಡಿಯಲ್ಲಿ ತೂಗಬಹುದು.
ಸಾಹಿತ್ಯ ಸಮ್ಮೇಳನಗಳು ಕೂಡಾ ವಿವಾದಗಳಿಂದ ಹೊರತಾಗುತ್ತಿಲ್ಲ…
ಅದೇ ನಾನು ಹೇಳಿದೆನಲ್ಲಾ. ಇವತ್ತು ದುಡ್ಡು, ದುರಹಂಕಾರ, ದುರಾಡಳಿತ ಇವುಗಳಿಂದ ಎಲ್ಲಾ ಕ್ಷೇತ್ರಗಳೂ ಹೊಲಸಾಗುತ್ತಿವೆ. ಸಾಹಿತ್ಯ ವಲಯ ಕೂಡಾ ತಪ್ಪು ದಾರಿಯಲ್ಲಿ ಸಾಗುತ್ತಿದೆ. ನನಗೆ ಪರಮಾಶ್ಚರ್ಯ ಆಗುವಂಥ, ಆತಂಕಕಾರಿ ವಿಷಯ ಎಂದರೆ, ನಾವು ಪರಸ್ಪರ ಪ್ರೀತಿಸುತ್ತಲೇ ಇಲ್ಲ. ಬರೀ ದ್ವೇಷ ತುಂಬಿದೆ. ಪ್ರಾಯಶಃ ಯಾವ ದೇಶದಲ್ಲಿಯೂ ಇಷ್ಟೊಂದು ದ್ವೇಷ, ಕಚ್ಚಾಟ ಇಲ್ಲ ಎನಿಸುತ್ತೆ. ದ್ವೇಷ ಮಾಡುವುದೇ ನಮ್ಮ ಸಂಸ್ಕೃತಿಯಾ ಎಂಬ ಶಂಕೆ ಮೂಡಿಬಿಟ್ಟಿದೆ ನನಗೆ.ಸಮ್ಮೇಳನಗಳಲ್ಲಿ ಕೈಗೊಳ್ಳುವ ನಿರ್ಣಯಗಳು ಕೂಡಾ ಕೇವಲ ನೆಪಮಾತ್ರಕ್ಕೆ ಎನಿಸಿಬಿಟ್ಟಿವೆ. ಅವುಗಳಿಗೆ ಏನಾದರೂ ಅರ್ಥ ಇದೆ ಎನ್ನುತ್ತೀರಾ?ನಮ್ಮ ಭಾಷೆಯ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸರ್ಕಾರ ನಿರ್ಣಯ ಕೈಗೊಳ್ಳಬೇಕು. ಆದರೆ ಅದು ಯಾವುದೇ ನಿರ್ಣಯ ಕೈಗೊಳ್ಳುತ್ತಿಲ್ಲ. ಹೀಗಾಗಿ ನಾವು ಕೈಗೊಳ್ಳಬೇಕಿದೆ. ಇದು ಒಂದು ರೀತಿ ಬಾಯಿ ಬಡಿದುಕೊಳ್ಳುವ ಕೆಲಸ, ಅಷ್ಟೇ.
ಶಾಸ್ತ್ರೀಯ ಸ್ಥಾನ-ಮಾನ ಸಿಕ್ಕ ಹಿನ್ನೆಲೆಯಲ್ಲಿ ಕನ್ನಡಕ್ಕೆ ಈಗ ಆಗಬೇಕಾದ ಕೆಲಸಗಳೇನು?
ಪ್ರಾಚೀನ ಸಾಹಿತ್ಯ ಮತ್ತು ಜನಪದ ಸಾಹಿತ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಸಂಶೋಧನಾ ಕ್ಷೇತ್ರಕ್ಕೆ ನೆರವು ನೀಡಬೇಕು. ಅದಿರಲಿ. ಈ ಶಾಸ್ತ್ರೀಯ ಸ್ಥಾನ-ಮಾನ ಗಳಿಸಿಕೊಳ್ಳೋದಕ್ಕೆ ಎಷ್ಟೆಲ್ಲಾ ಹೋರಾಡಬೇಕಾಯಿತು ನೋಡಿ. ಅದೂ 90ರ ಅಂಚಿನಲ್ಲಿರುವ ದೇಜಗೌ ಅವರಂತಹ ಹಿರಿಯರು ಉಪವಾಸ ಮಾಡಬೇಕಾಯಿತು. ಆದರೆ ಕೇಂದ್ರ ಸರ್ಕಾರ ಕೊಡೋ ದುಡ್ಡಿನಿಂದಲೇ ಕನ್ನಡ ಭಾಷೆ ಅಭಿವೃದ್ಧಿ ಆಗಬೇಕೆ? ಏಕೆ, ರಾಜ್ಯ ಸರ್ಕಾರದ ಬಳಿ ದುಡ್ಡು ಇರಲಿಲ್ಲವೇ? ನಮ್ಮ ಭಾಷೆಯನ್ನು ನಾವೇ ಪ್ರೀತಿಸುತ್ತಿಲ್ಲ; ಮನುಷ್ಯ ಸ್ವಭಾವ ಎಷ್ಟು ವಿಚಿತ್ರ ನೋಡಿ. ನಮ್ಮ ಭಾಷೆಯನ್ನು ಉದ್ಧಾರ ಮಾಡೋದಕ್ಕೆ ನಮಗೇ ಮನಸಿಲ್ಲ!ಈಗಿನ ಭಯೋತ್ಪಾದನೆ ಜಾಗತಿಕ ಸಮುದಾಯದ ಮೇಲೆ ಒಡ್ಡಿರುವ ಸವಾಲಿಗೆ ಸಾಹಿತ್ಯ ಹೇಗೆ ಪ್ರತಿಕ್ರಿಯಿಸಬೇಕು?ಎಲ್ಲಿ ಮಹಾಕವಿ ವಿಫಲನಾಗುತ್ತಾನೋ ಅಲ್ಲಿ ಭಯೋತ್ಪಾದನೆ ದೈತ್ಯ ಸ್ವರೂಪ ತಾಳುತ್ತದೆ. ಇವತ್ತು ಮಹಾಕವಿ ವಿಫಲನಾಗಿದ್ದಾನೆ. ಎಲ್ಲಕ್ಕೂ ದ್ವೇಷವೇ ಮೂಲ ಆಗಿದೆ. ತಾನು ಒಂದು ಧರ್ಮ ಅನುಸರಿಸುತ್ತಿದ್ದೇನೆಂದರೆ ಮತ್ತೊಂದು ಧರ್ಮವನ್ನು ವಿರೋಧಿಸಬೇಕು, ದ್ವೇಷಿಸಬೇಕು ಎಂದು ಅರ್ಥವಲ್ಲ. ಪರಸ್ಪರ ಪ್ರೀತಿ, ಸೌಹಾರ್ದವನ್ನು ನಮ್ಮ ಹಿಂದಿನವರು ಹೇಳುತ್ತಲೇ ಬಂದಿದ್ದಾರೆ. ಆದರೆ ಕೇಳುವವರಿಲ್ಲ ಅಷ್ಟೇ. ಧರ್ಮವನ್ನು ಹೊಡೆದಾಟಕ್ಕೆ ಬಳಸಿಕೊಳ್ಳಲಾಗ್ತಿದೆ. ಆಡಳಿತ ಕೂಡಾ ಇದಕ್ಕೆ ಕುಮ್ಮಕ್ಕು ಕೊಡ್ತಿದೆ. ಪಾಕಿಸ್ತಾನದಲ್ಲಿ ಆಗುತ್ತಿರುವುದು ಇದೇ. ಹಿಂದೆ ಜೈನ, ವೈಷ್ಣವ ಮತ್ತು ಶೈವರ ನಡುವೆ ಕಿತ್ತಾಟ, ಜಗಳಗಳು ನಡೆದಿವೆ. ಅಂದರೆ ಪರಸ್ಪರ ದ್ವೇಷವೇ ಮನುಷ್ಯನ ಸಂಸ್ಕೃತಿ ಎನಿಸಿಬಿಟ್ಟಿದೆ. ಇದಕ್ಕೆ ಸಣ್ಣ ನೆಪಗಳು ಸಿಕ್ಕರೂ ಸಾಕು. ಬೇಸರದ ವಿಷಯ ಅಂದರೆ ಎಳೆಯ ಮಕ್ಕಳ ಮನಸ್ಸನ್ನು ತಿದ್ದುವಂಥ ಶಿಕ್ಷಕರು, ಅಧ್ಯಾಪಕರು ಬಹುಮಂದಿ ಇಲ್ಲ. ಶಿಕ್ಷಣ ವ್ಯವಸ್ಥೆ ಕೂಡಾ ಹಾಳಾಗಿದೆ. ಮನುಷ್ಯನ ಮನಸ್ಸು ಸಾತ್ವಿಕತೆ ಕಡೆ ಸಾಗಲು ಬೇಕಾದ ತಯಾರಿ ಕೂಡಾ ಇಲ್ಲದಂತಾಗಿದೆ. ವಿದ್ಯಾಭ್ಯಾಸವನ್ನೇ ಖಾಸಗೀಕರಣ ಮಾಡಿಬಿಟ್ಟಿದ್ದಾರೆ. ಅಂದರೆ ವಿದ್ಯೆಯನ್ನು ಶ್ರಮಪಟ್ಟು ಗಳಿಸುವುದಲ್ಲ; ಬದಲಿಗೆ ದುಡ್ಡುಕೊಟ್ಟು ಖರೀದಿಸುವಂಥ ಪರಿಸ್ಥಿತಿ ಇದೆ. ಹೀಗಾಗಿ ಮುಂದಿನ ಪೀಳಿಗೆ ಬಗ್ಗೆ ಯಾವುದೇ ಆಶಾವಾದ ಇಟ್ಟುಕೊಳ್ಳದಂಥ ಪರಿಸ್ಥಿತಿ ಇದೆ. ಇದನ್ನು ಹೇಗೆ ಉತ್ತಮಪಡಿಸುವುದು, ನನಗಂತೂ ಗೊತ್ತಾಗುತ್ತಿಲ್ಲ.
ನಿಮ್ಮ ಮುಂದಿನ ಬರವಣಿಗೆ?
ಪಂಪನ ‘ವಿಕ್ರಮಾರ್ಜುನ ವಿಜಯಂ’ ಕಾವ್ಯವನ್ನು ಮೂಲ ಮಹಾಭಾರತದೊಡನೆ ತುಲನೆ ಮಾಡಿ ಬರೆದ ಕೃತಿ ಅಚ್ಚಿನಲ್ಲಿದೆ. ಬಸವಣ್ಣನವರ ವಚನಗಳು ಈ ಕಾಲಕ್ಕೆ ಹೇಗೆ ಪ್ರಸ್ತುತವಾಗಿವೆ ಎಂಬುದರ ಬಗೆಗಿನ ವಿಮರ್ಶಾ ಕೃತಿಯೂ ಸದ್ಯವೇ ಪ್ರಕಟಗೊಳ್ಳಲಿದೆ. ಸದ್ಯಕ್ಕೆ ಈ ಎರಡು ಕೃತಿಗಳು ಬರಲಿವೆ. ಈಗಿನ ದೇಹಪ್ರಕೃತಿಯಲ್ಲಿ ಮುಂಚಿನ ಹಾಗೆ ಬರೆಯಲು ಸಾಧ್ಯವಾಗುವುದಿಲ್ಲ.ಯುವ ಜನಾಂಗಕ್ಕೆ, ಯುವ ಬರಹಗಾರರಿಗೆ ನಿಮ್ಮ ಕಿವಿಮಾತು ಏನು?ನಾನು ಆಗಲೇ ಹೇಳಿದೆನಲ್ಲಾ, ಕಿವಿಮಾತು ಹೇಳಿದರೆ ಅದನ್ನು ಕೇಳುವವರು ಯಾರು? ನಮ್ಮ ಪ್ರಾಚೀನರೇ ಎಲ್ಲಾ ಹೇಳಿದ್ದಾರೆ. ಆದರೆ ಅನುಸರಿಸುವವರಿಲ್ಲ ಅಷ್ಟೇ. ನಮ್ಮ ದೇಶ, ಸಂಸ್ಕೃತಿಯನ್ನು ನಾನು ತುಂಬಾ ಬೈಯುತ್ತಿದ್ದೀನಿ ಅಂತ ನಿಮಗೆ ಅನಿಸುತ್ತಿದೆಯೇ? ಹಾಗೇನಾದರೂ ನಿಮಗೆ ಅನಿಸಿದ್ದರೆ ನಾನು ವಿವೇಕಸ್ಥ ಅಂತ ಅರ್ಥ!
(ಕೃಪೆ: ಸಂಡೇ ಇಂಡಿಯನ್)

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.