Showing posts with label ಗಾಂಧಿ. Show all posts
Showing posts with label ಗಾಂಧಿ. Show all posts

Saturday, September 15, 2012

ಗಾಂಧಿ-ಅಂಬೇಡ್ಕರ್ ಮತ್ತು ಪುಣೆ ಒಪ್ಪಂದ



-ಅನಿಲ ಹೊಸಮನಿ

ಸಾಮಾಜಿಕ ಸಮಾನತೆಯ ಆಂದೋಲನದ ಜೊತೆ ಜೊತೆಗೆ ದೇಶದ ರಾಜಕಾರಣದಲ್ಲಿ ಭಾಗವಹಿಸುವುದರ ಅಗತ್ಯತೆ ಡಾ.ಅಂಬೇಡ್ಕರರಿಗೆ ಮನವರಿಕೆಯಾಗಿತ್ತು. ಅಧಿಕಾರ ಪ್ರಾಪ್ತಿ ಮಾಡಿಕೊಳ್ಳದೆ ಗುರಿ ಸಾಧನೆ ಯಾಗದೆಂಬುದು ಅವರ ಅರಿವಿಗೆ ಬಂದಿತ್ತು. ಮಹಾಡ್ ಸತ್ಯಾಗ್ರಹ, ಮನುಸ್ಮತಿ ದಹನ, ಕಾಳಾರಾಮ ಮಂದಿರ ಪ್ರವೇಶ ಚಳವಳಿಗಳಿಂದ ಅಸ್ಪಶ್ಯರಲ್ಲಿ ಅಭೂತಪೂರ್ವ ಸಂಘಟನೆ ಮತ್ತು ಜಾಗೃತಿ ಮೂಡಿತ್ತು. ಆದರೆ ಇಷ್ಟರಿಂದಲೇ ಅವರಿಗೆ ಸಮಾಧಾನವಿರಲಿಲ್ಲ. ಅದಕ್ಕಾಗಿಯೇ ಅವರು ಅಖಿಲ ಭಾರತ ಬಹಿಷ್ಕೃತ ವರ್ಗಗಳ ಸಮಾವೇಶವನ್ನು ಆಯೋಜಿಸುವ ನಿರ್ಧಾರ ಮಾಡಿದರು. 1930ರ ಅಗಸ್ಟ್ 9 ಮತ್ತು 10ರಂದು ನಾಗಪುರದಲ್ಲಿ ಸಂಘಟಿಸಲಾದ ಪ್ರಥಮ ರಾಷ್ಟ್ರಮಟ್ಟದ ಅಧಿವೇಶನದ ಅಧ್ಯಕ್ಷತೆಯನ್ನು ಡಾ.ಅಂಬೇಡ್ಕರ್ ವಹಿಸಿದ್ದರು.
ವಿದರ್ಭ ಮತ್ತು ದೇಶದ ವಿವಿಧ ಭಾಗಗಳಿಂದ ಬಹುಸಂಖ್ಯೆಯ ಪ್ರತಿನಿಧಿಗಳು ಈ ಅಧಿವೇಶನದಲ್ಲಿ ಭಾಗವಹಿಸಿದ್ದರು. ಅಸ್ಪಶ್ಯರ ರಾಜಕೀಯ ಹಕ್ಕುಗಳನ್ನು ಪಡೆದು ಕೊಳ್ಳುವುದಕ್ಕೋಸ್ಕರ ಈ ಅಧಿವೇಶನದಲ್ಲಿ ಗಂಭೀರ ಚರ್ಚೆ ನಡೆಯಿತು. ಅಧ್ಯಕ್ಷ ಸ್ಥಾನದಿಂದ ಡಾ.ಅಂಬೇಡ್ಕರ್ ಮಾಡಿದ ಭಾಷಣ ಅಲ್ಲಿದ್ದ ಪ್ರತಿಯೊಬ್ಬರ ಮೇಲೂ ಗಾಢ ಪ್ರಭಾವ ಬೀರಿತು. ಅವರು ಹೇಳಿದರು- ನಮಗೆ ರಾಜಕೀಯ ಸ್ವಾತಂತ್ರವೂ ಬೇಕು, ಸಾಮಾಜಿಕ ಸಮಾನತೆ ಕೂಡ ಬೇಕು. ಸ್ವತಂತ್ರ ಭಾರತಕ್ಕೆ ಹೊಸ ರಾಜ್ಯ ಘಟನೆ ರೂಪಿಸು ವಾಗ ಅದರಲ್ಲಿ ನಮ್ಮ ಹಕ್ಕುಗಳು ನಮೂದಾಗಬೇಕು.
ಅಲ್ಪಸಂಖ್ಯಾತ ಮತ್ತು ದುರ್ಬಲರ ನಿರ್ಲಕ್ಷ ಮಾಡುವುದನ್ನು ನಾವು ಸಹಿಸುವುದಿಲ್ಲ. ಜನಸಂಖ್ಯೆಯ ಆಧಾರದ ಮೇಲೆ ನಮಗೆ ಪ್ರತ್ಯೇಕ ಪ್ರತಿನಿಧಿತ್ವ ಬೇಕು. ನಮ್ಮ ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಆಸ್ಪದ ನೀಡುವ ಸ್ವತಂತ್ರ ಮತದಾರ ಕ್ಷೇತ್ರಗಳು ಬೇಕು. ಅಂಥ ವ್ಯವಸ್ಥೆ ಹೊಸ ಸಂವಿಧಾನದಲ್ಲಿ ಇರಬೇಕು. ಅನೇಕ ವಿಷಯಗಳಲ್ಲಿ ಬ್ರಿಟಿಷ್ ಸರಕಾರವು ಅಸಹಾಯಕವಾಗಿದೆ ಮತ್ತು ಸವರ್ಣ ಹಿಂದೂ ಗಳು ಕೂಡ ನಮ್ಮನ್ನು ಬೆಂಬಲಿಸುವುದಿಲ್ಲ. ಇಂಥ ಕಠಿಣ ಪರಿಸ್ಥಿತಿಯಲ್ಲಿ ನಾವು ಸ್ವತಂತ್ರ ವಾಗಿ ನಮ್ಮ ಸಂಘಟನಾ ಶಕ್ತಿಯನ್ನು ಹೆಚ್ಚಿಸಬೇಕು. ನಮ್ಮ ಸ್ವತಂತ್ರ ಅಸ್ತಿತ್ವವನ್ನು ಭಾರತಕ್ಕೆ ತೋರಿಸಿಕೊಡಬೇಕು ಮತ್ತು ಇಂಗ್ಲಿಷ್ ಸರಕಾರವೂ ನಮ್ಮ ಸ್ವತಂತ್ರ ಅಸ್ತಿತ್ವವನ್ನು ಮಾನ್ಯ ಮಾಡಬೇಕು.

ಇನ್ನೂ ಒಂದು ಮಹತ್ವದ ವಿಚಾರವನ್ನು ಡಾ.ಅಂಬೇಡ್ಕರ್ ಈ ಅಧಿವೇಶನದಲ್ಲಿ ಮಂಡಿಸಿದರು. ಅದೆಂದರೆ, 1) ಅಸ್ಪಶ್ಯರಿಗಾಗಿ ಮೀಸಲು ಮತಕ್ಷೇತ್ರಗಳು, 2) ಅಸ್ಪಶ್ಯರು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ. ಸರ್ವ ಸಾಮಾನ್ಯವಾಗಿ ಮೀಸಲು ಕ್ಷೇತ್ರಗಳಿರಲೆಂಬುದು ಬಹಳಷ್ಟು ಜನರ ಅಭಿಪ್ರಾಯವಾಗಿತ್ತು. ಆದರೆ ಅನೇಕರು ಸಂಯುಕ್ತ ಮತದಾರ ಕ್ಷೇತ್ರಗಳಿರ ಬೇಕು ಎಂಬ ವಿಚಾರ ವ್ಯಕ್ತಪಡಿಸಿದರು. ಆದರೆ ಡಾ.ಅಂಬೇಡ್ಕರ್‌ರು ಆ ವಿಚಾರವನ್ನು ವಿರೋಧಿ ಸಿದರು. ಸಂಯುಕ್ತ ಮತದಾರ ಕ್ಷೇತ್ರಗಳಲ್ಲಿ ಸವರ್ಣ ಹಿಂದೂಗಳು ತಮ್ಮ ಗುಲಾಮ ಅಭ್ಯರ್ಥಿಯನ್ನು ಅಸ್ಪಶ್ಯರ ಮೇಲೆ ಹೇರುವ ರೆಂಬ ಭಯ ಅವರಿಗಿತ್ತು. ಮೀಸಲು ಮತಕ್ಷೇತ್ರ ಗಳು ಡಾ.ಅಂಬೇಡ್ಕರರು ಅತ್ಯಂತ ವಿಚಾರ ಪೂರ್ವಕವಾಗಿ ಮಂಡಿಸಿದ ವಿಷಯವಾಗಿತ್ತು.
ಮುಸಲ್ಮಾನರಿಗಾಗಿ ಪ್ರತ್ಯೇಕ ಮತದಾರ ಕ್ಷೇತ್ರಗಳನ್ನು ಕೊಡುವುದಾದರೆ ಅಸ್ಪಶ್ಯರಿಗೆ ಏಕೆ ಬೇಡ? ಇದು ಅವರ ನೇರ ಪ್ರಶ್ನೆಯಾಗಿತ್ತು. ಕುಡಿಯುವ ನೀರಿನ ಸಮಸ್ಯೆ, ಮಂದಿರ ಪ್ರವೇಶದಂತಹ ಸಾಮಾನ್ಯ ಸವಲತ್ತುಗಳನ್ನು ನೀಡುವುದಕ್ಕೆ ಹಿಂದೂ ಸನಾತನಿಗಳು ಹಿಂಜರಿಯುತ್ತಿರುವಾಗ, ಅಸ್ಪಶ್ಯರ ಹಿತರಕ್ಷಣೆ ಗಾಗಿ ಪ್ರತ್ಯೇಕ ಮತದಾರ ಕ್ಷೇತ್ರಗಳನ್ನೇಕೆ ಕೇಳಬಾರದು? ಸಮಾಜವನ್ನು ರಾಜಕೀಯ ಶಕ್ತಿಯನ್ನಾಗಿ ಪರಿವರ್ತಿಸಬೇಕಾದರೆ, ಅದರ ಪ್ರತಿನಿಧಿಗಳು ಆಡಳಿತದಲ್ಲಿ ಇರುವುದು ಅಗತ್ಯ ವಿದೆ ಮತ್ತು ಅಸ್ಪಶ್ಯರು ತಮ್ಮ ಪ್ರತಿನಿಧಿಗಳನ್ನು ತಾವೇ ಆಯ್ಕೆ ಮಾಡಿಕೊಳ್ಳುವಂತಿರಬೇಕು ಎಂಬುದು ಡಾ.ಅಂಬೇಡ್ಕರರ ಅಭಿಪ್ರಾಯ ವಾಗಿತ್ತು. ರಾಜಕೀಯ ಹಕ್ಕುಗಳ ಮಂಡನೆಯ ನಂತರ ಅಧಿವೇಶನ ಮುಕ್ತಾಯಗೊಂಡಿತು.
1930ರ ಸೆಪ್ಟಂಬರ್ ತಿಂಗಳಲ್ಲಿ ಇಂಗ್ಲಿಷ್ ಸರಕಾರವು ದುಂಡು ಮೇಜಿನ ಪರಿಷತ್ತಿಗೆ ಡಾ.ಅಂಬೇಡ್ಕರರನ್ನು ಆಮಂತ್ರಿಸಿತು. ಈ ಮುಖೇನ ಸರಕಾರವು ಡಾ.ಅಂಬೇಡ್ಕರ್ ಭಾರತದ ಅಸ್ಪಶ್ಯರ ಪ್ರತಿನಿಧಿಯೆಂದು ಮನ್ನಿಸಿತ್ತು. ಬ್ಯಾ.ಜಿನ್ನಾ, ಸಪ್ರು, ಜಯಕರ ಮತ್ತಿತರ ಗಣ್ಯರೊಂದಿಗೆ ಡಾ.ಅಂಬೇಡ್ಕರ್ ದುಂಡು ಮೇಜಿನ ಪರಿಷತ್ತಿನಲ್ಲಿ ಭಾಗವಹಿಸುತ್ತಿದ್ದುದು ಮಹತ್ವದ ಸಂಗತಿಯಾ ಗಿತ್ತು. ಭಾರತದ ಹೊಸ ಸಂವಿಧಾನ ರಚಿಸು ವುದಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡುವ ನಿಟ್ಟಿನಲ್ಲಿ 12, ನವೆಂಬರ್ 1930ರಂದು ಲಂಡನ್‌ನಲ್ಲಿ ದುಂಡು ಮೇಜಿನ ಪರಿಷತ್ತು ನಡೆಯಲಿತ್ತು. ಇಂಗ್ಲೆಂಡಿನ ಅರಸು 5ನೆ ಜಾರ್ಜ್ ಈ ಪರಿಷತ್‌ನ ಉದ್ಘಾಟನೆ ನೆರವೇರಿಸಲಿದ್ದರು.

ನಾಗಪುರ ಅಧಿವೇಶನವು ಡಾ.ಅಂಬೇಡ್ಕರರ ವ್ಯಕ್ತಿತ್ವವನ್ನು ಹೆಚ್ಚಿಸಿತ್ತು. ಅದುವರೆಗೆ ಮಹಾ ರಾಷ್ಟ್ರದ ದಲಿತ ನೇತಾರರಾಗಿದ್ದ ಡಾ. ಅಂಬೇಡ್ಕರ್ ಈಗ ಇಡೀ ಭಾರತದ ದಲಿತರಿಗೆ ನಾಯಕರಾಗಿ ಮಾರ್ಪಟ್ಟರೆಂಬುದರಲ್ಲಿ ಎರಡು ಮಾತಿಲ್ಲ. ರಾಜಕೀಯ ಹಕ್ಕುಗಳು ದೊರೆತ ಮಾತ್ರಕ್ಕೆ ಮಂತ್ರದಂಡ ತಿರುಗಿಸಿದಂತೆ ಬದಲಾವಣೆ ಆಗಲಾರದು ಎಂಬ ಅಭಿಪ್ರಾಯ ಅವರದಾಗಿತ್ತು. ಹಾಗೆಂದೇ ತಮ್ಮ ಅಭಿವೃದ್ಧಿಗೆ ಅಸ್ಪಶ್ಯರೇ ಸ್ವತಃ ಕಂಕಣಬದ್ಧರಾಗಬೇಕೆನ್ನುವುದು ಅವರ ನಂಬುಗೆಯಾಗಿತ್ತು. ಮೊಟ್ಟಮೊದಲಿಗೆ ಎಲ್ಲ ಅಸ್ಪಶ್ಯರು ವಿದ್ಯೆ ಪಡೆಯಬೇಕು, ತಮ್ಮ ಜೀವನಕ್ರಮ ಬದಲಿಸಿಕೊಳ್ಳಬೇಕು ಮತ್ತು ನಿರ್ಭಯರಾಗಬೇಕು. ಭಾರತದ ರಾಜಕಾರಣ ದಲ್ಲಿ ಅಸ್ಪಶ್ಯ ಸಮಾಜವು ಒಂದು ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಬೇಕು ಎಂದು ಡಾ.ಅಂಬೇಡ್ಕರರು ತಮ್ಮ ವಿಚಾರಗಳನ್ನು ಮಂಡಿಸಿದರು. ಅವರ ಈ ವಿಚಾರ ಸರಣಿ ಜನಸಮುದಾಯದ ಮೇಲೆ ಗಾಢ ಪರಿಣಾಮ ಬೀರಿತು. ಮಹಾತ್ಮಾ ಗಾಂಧಿ ನೇತೃತ್ವದಲ್ಲಿ ಸ್ವಾತಂತ್ರ ಚಳವಳಿ ವಿಸ್ತೃತವಾಗತೊಡಗಿತ್ತು. ಅಸ್ಪಶ್ಯ ಸಮಾಜದ ಆಸೆ-ಆಕಾಂಕ್ಷೆಗಳ ಕುರಿತ ಡಾ.ಅಂಬೇಡ್ಕರ್ ಬೇಡಿಕೆಗಳನ್ನು ಒಪ್ಪಿಕೊಂಡು, ಈ ಸಮುದಾಯಗಳನ್ನೂ ರಾಷ್ಟ್ರೀಯ ಮುಕ್ತಿ ಆಂದೋಲನದಲ್ಲಿ ಭಾಗಿಯಾಗುವಂತೆ ಮಾಡುವ ವಿಚಾರಗಳೂ ಕೇಳಿಬಂದವು. ಆದರೆ ಸ್ವಾತಂತ್ರಾನಂತರ ಕಾರ್ಮಿಕರ, ರೈತರ, ಅಸ್ಪಶ್ಯರ ಸ್ಥಾನವೇನು? ಎಂಬ ಪ್ರಶ್ನೆಗೆ ಮಹಾತ್ಮಾ ಗಾಂಧಿ ತಮ್ಮ ಅಭಿಪ್ರಾಯ ಸ್ಪಷ್ಟಪಡಿಸಲಿಲ್ಲ. ಸ್ವರಾಜ್ಯ ಪ್ರಾಪ್ತಿಯ ನಂತರ ಅಸ್ಪಶ್ಯರ ಸಮಸ್ಯೆಯ ಬಗ್ಗೆ ಯೋಚಿಸುವ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ತೆಗೆದುಕೊಂಡರು. ಇದಕ್ಕೆ ಕಾಂಗ್ರೆಸ್‌ನ ನೇತೃತ್ವ ಉಚ್ಚವರ್ಣೀಯರ ಮತ್ತು ಉಚ್ಚ ವರ್ಗಗಳ ಕೈಯಲ್ಲಿತ್ತೆಂಬುದೇ ಕಾರಣವಲ್ಲದೆ ಬೇರೇನಲ್ಲ.
4ನೆ ಅಕ್ಟೋಬರ್ 1930ರಂದು ಡಾ.ಅಂಬೇಡ್ಕರ್‌ರು ಮುಂಬೈ ಬಂದರಿನಿಂದ ಇಂಗ್ಲೆಂಡಿಗೆ ಪ್ರಯಾಣ ಬೆಳೆಸಿದರು. ವಿದೇಶ ಪ್ರವಾಸ ಅವರಿಗೆ ಹೊಸದೇನೂ ಆಗಿರಲಿಲ್ಲ. ಅಮೇರಿಕ ಮತ್ತು ಇಂಗ್ಲೆಂಡ್ ದೇಶಗಳಲ್ಲಿ ಅವರು ಅನೇಕ ವರ್ಷಗಳವರೆಗೆ ಇದ್ದು, ತಮ್ಮ ಉನ್ನತ ಶಿಕ್ಷಣ ಪೂರೈಸಿದ್ದರು. ಹೆಸರಾಂತ ಪ್ರಾಧ್ಯಾಪಕರ ಮಾರ್ಗ ದರ್ಶನದ ಲಾಭವನ್ನು ಅವರು ಪಡೆದಿದ್ದರು. ಹೆಸರಾಂತ ವಿಶ್ವ ವಿದ್ಯಾಲಯದ ಪದವಿಗಳನ್ನು ಅವರು ತಮ್ಮ ಹೆಸರಿನ ಮುಂದೆ ಜೋಡಿಸಿಕೊಂಡಿದ್ದರು. ನಿಧಾನವಾಗಿ ಭಾರತದ ನಾಯಕರು ಲಂಡನ್ ತಲುಪತೊಡಗಿದ್ದರು.

ಮದ್ರಾಸ್‌ನ ರಾವ್ ಬಹುದ್ದೂರ್ ಕೂಡ ಅಂಬೇಡ್ಕರ್ ಜೊತೆಗಿದ್ದರು. ಮುಂಚೆಯೇ ನಿರ್ಧರಿಸಿದಂತೆ ನವೆಂಬರ್ 12, 1930ರಂದು ಇಂಗ್ಲೆಂಡ್ ದೊರೆ ದುಂಡು ಮೇಜು ಪರಿಷತ್ತನ್ನು ಉದ್ಘಾಟಿಸಿದರು. ಈ ದುಂಡು ಮೇಜಿನ ಪರಿಷತ್ತಿನಲ್ಲಿ ಡಾ.ಅಂಬೇಡ್ಕರ್ ಮಾಡಿದ ಭಾಷಣ ಅಭೂತಪೂರ್ವ. ಭಾರತದಲ್ಲಿ 4 ಕೋಟಿ 20 ಲಕ್ಷ ಅಸ್ಪಶ್ಯರಿದ್ದಾರೆ. ಈ ಸಂಖ್ಯೆಯು ಇಂಗ್ಲೆಂಡ್ ಅಥವಾ ಫ್ರಾನ್ಸ್ ಜನಸಂಖ್ಯೆಗಿಂತ ಜಾಸ್ತಿ. ಈ ಪೀಡಿತ ಮತ್ತು ಶೋಷಿತ ಜನರ ಪರವಾಗಿ ನಾನು ಮಾತನಾಡುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು. ಅಸ್ಪಶ್ಯತೆ ಎಂದರೇನೆಂಬುದೇ ಜಗತ್ತಿನ ಅನ್ಯ ದೇಶಗಳಿಗೆ ತಿಳಿಯದು. ಯಾಕೆಂದರೆ ಇಂಥ ಅಮಾನುಷ ಆಚರಣೆ ಜಗತ್ತಿನ ಯಾವ ಭಾಗ ದಲ್ಲೂ ಇಲ್ಲ. ಇಂಗ್ಲೆಂಡ್ ಮತ್ತು ಅಮೇರಿಕ ಗಳಲ್ಲಿ ನಿಗ್ರೋ ಗುಲಾಮರ ಮಾರಾಟ-ಖರೀದಿ ಬಹಳ ಹಿಂದೆ ಆಚರಣೆಯಲ್ಲಿತ್ತು. ನಂತರ ಕಾನೂನು ಮೂಲಕ ಈ ಗುಲಾಮಗಿರಿ ಅಂತ್ಯಕಂಡಿತು. ಅಲ್ಲಿ ಗುಲಾಮಗಿರಿಯಿತ್ತೇ ವಿನಃ ಅಸ್ಪಶ್ಯತೆಯಿರಲಿಲ್ಲ.
ಗುಲಾಮರ ಸ್ಪರ್ಶ ಮಾಡುವುದಕ್ಕೆ ಯಾವುದೇ ಅಭ್ಯಂತರವಿರಲಿಲ್ಲ. ಆದರೆ ಭಾರತದ ಪರಿಸ್ಥಿತಿ ಬೇರೆಯೇ ಇದೆ ಎಂಬುದರ ಪರಿಚಯ ಮಾಡಿಕೊಟ್ಟರು. ಭಾರತೀಯ ಸೈನ್ಯದಲ್ಲಿ ಅಸ್ಪಶ್ಯರಿಗೆ ಪ್ರವೇಶವಿಲ್ಲ. ಪೊಲೀಸ್ ಖಾತೆಯಲ್ಲಿ ಮತ್ತು ಸರಕಾರಿ ನೌಕರಿಗಳು ಅವರಿಗೆ ಸಿಗುತ್ತಿಲ್ಲ. ಮಾನವೀಯ ಮರ್ಯಾದೆ ಪಡೆಯುವುದಕ್ಕೋಸ್ಕರ ಭಾರತದ ಐದನೇ ಒಂದು ಭಾಗದಷ್ಟು ಜನರು ಹೋರಾಡುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ, ದೇವಾಲಯಗಳಲ್ಲಿ ಅವರಿಗೆ ಪ್ರವೇಶ ನಿಷೇಧಿಸಲಾಗಿದೆ. ಗಾಂಧಿ ಮತ್ತು ಅಂಬೇಡ್ಕರ್‌ರವರ ಈ ವೈಚಾರಿಕ ಸಂಘರ್ಷವು ವಿಕೋಪಕ್ಕೆ ತಿರುಗಿತು. ಗಾಂಧಿಯಾದರೋ ಈ ಸಂಬಂಧ ತಮ್ಮ ಪ್ರಾಣತ್ಯಾಗ ಮಾಡಲೂ ಸಿದ್ಧರಾಗಿ ದ್ದರು.
ಗಾಂಧೀಜಿ ಪ್ರಾಣ ಉಳಿಸುವಂತೆ ಅಂಬೇಡ್ಕರ್‌ರ ಮೇಲೆ ಒತ್ತಡಗಳು ಬರಲಾರಂಭಿಸಿದವು. ಉಪವಾಸ ಸತ್ಯಾಗ್ರಹ ಒಂದೊಂದೇ ದಿನ ಹೆಚ್ಚುತ್ತಾ ಹೋದಂತೆ ಗಾಂಧೀಜಿ ಆರೋಗ್ಯ ಹದಗೆಡಲಾರಂಭಿಸಿತು. ಇಡೀ ದೇಶವೇ ಚಿಂತೆಯಲ್ಲಿ ಮುಳುಗಿತು. ಕೊನೆಗೆ ಡಾ.ಅಂಬೇಡ್ಕರರು ಗಾಂಧಿಯನ್ನು ಭೇಟಿ ಮಾಡಿದರು. ಪರಸ್ಪರ ಮಾತುಕತೆಯ ನಂತರ ಪ್ರತ್ಯೇಕ ಮತದಾರ ಕ್ಷೇತ್ರಗಳನ್ನು ಬಿಟ್ಟುಕೊಡಲು ಡಾ.ಅಂಬೇಡ್ಕರ್ ಒಪ್ಪಿ ಕೊಂಡರು. ಗಾಂಧೀಜಿ ಉಪವಾಸ ಕೊನೆಗೊಳಿಸಿದರು. ಈ ಒಪ್ಪಂದವೇ ಪುಣೆ ಒಪ್ಪಂದ ಎಂದು ಜನಜನಿತವಾಯಿತು. ಒಬ್ಬ ಅಸ್ಪಶ್ಯ ಗಾಂಧೀಜಿಯ ಪ್ರಾಣ ಉಳಿಸಿದರೆ, ಒಬ್ಬ ಬ್ರಾಹ್ಮಣ ಕೈಯಲ್ಲಿ ಪಿಸ್ತೂಲು ಹಿಡಿದು ಹತ್ಯೆ ಮಾಡಿದನು.

Tuesday, January 31, 2012

ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು ?


ದಿನೇಶ್ ಅಮೀನ್ ಮಟ್ಟು
`ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ.

ಹೀಗಿದ್ದರೂ ಯಾಕೆ ನನ್ನ ಹತ್ಯೆಗೆ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತಿಲ್ಲ. ನಾನು ಸಾಯುವುದಿಲ್ಲ, 125 ವರ್ಷ ಬದುಕುತ್ತೇನೆ...`- ತಮ್ಮ ಹತ್ಯೆಗೆ ಏಳನೇ ಬಾರಿ ನಡೆದ ಪ್ರಯತ್ನ ವಿಫಲಗೊಂಡ ನಂತರ 1946ರ ಜೂನ್ 30ರಂದು ಗಾಂಧೀಜಿ ಪುಣೆಯ ಬಹಿರಂಗ ಸಭೆಯಲ್ಲಿ ನೋವು ತುಂಬಿದ್ದ ದನಿಯಲ್ಲಿ ಈ ಮಾತು ಹೇಳಿದ್ದರು. ಆ ಘಟನೆ ನಡೆದ ನಂತರ 1948ರ ಜನವರಿ 21ರಂದು ದೆಹಲಿಯ ಬಿರ್ಲಾ ಭವನದಲ್ಲಿಯೇ ಗಾಂಧೀಜಿ ಹತ್ಯೆಗೆ ಮತ್ತೊಂದು ಪ್ರಯತ್ನ ನಡೆದಿತ್ತು. ಅದರಿಂದಲೂ ಅವರು ಪಾರಾಗಿದ್ದರು. ಕೊನೆಗೆ 1948ರ ಜನವರಿ 30ರಂದು ಅವರು ಸಾವಿಗೆ ಶರಣಾದರು.

ಪ್ರಾಣದ ಆಸೆ ಇಲ್ಲದ ಕೊಲೆಗಡುಕ, ಕೊಲೆ ಮಾಡುವುದನ್ನು ತಡೆಯುವುದು ಎಷ್ಟು ಕಷ್ಟವೋ, ಪ್ರಾಣದ ಆಸೆ ಇಲ್ಲದ ವ್ಯಕ್ತಿಯನ್ನು ಕೊಲೆಗಡುಕನಿಂದ ಉಳಿಸಿಕೊಳ್ಳುವುದು ಅಷ್ಟೇ ಕಷ್ಟ. ಗಾಂಧೀಜಿ ಹತ್ಯೆ ನಡೆಯುವ ಹೊತ್ತಿಗೆ ಕೊಲೆಗಡುಕ ನಾಥುರಾಮ್ ಗೋಡ್ಸೆ ಮಾತ್ರವಲ್ಲ, ಕೊಲೆಯಾಗಿದ್ದ ಗಾಂಧೀಜಿ ಕೂಡಾ ಬದುಕುವ ಆಸೆಯನ್ನು ಕಳೆದುಕೊಂಡಿದ್ದರು.


ಅವರ ಹತ್ಯೆಯ ದಿನವೇ ತನ್ನೆರಡು `ಊರುಗೋಲು`ಗಳಾದ ಆಭಾ ಮತ್ತು ಮನು ಜತೆ ಮಾತನಾಡುತ್ತಾ ಒಂದಲ್ಲ ಎರಡು ಬಾರಿ ತನ್ನ ಸಾವಿನ ಬಗ್ಗೆ ಗಾಂಧೀಜಿ ಮಾತನಾಡಿದ್ದರು. ತಾನು ನಂಬಿದವರೇ ತನ್ನ ಜತೆ ಇಲ್ಲವೇನೋ ಎಂಬ ಅನಾಥಪ್ರಜ್ಞೆಯೇ ಅವರಿಂದ ಈ ಮಾತುಗಳನ್ನು ಆಡಿಸಿತ್ತೋ ಏನೋ? ಹಿಂದೆ ಏಳು ಬಾರಿ ಅವರ ಹತ್ಯೆಗೆ ಪ್ರಯತ್ನ ನಡೆದಾಗ ಭಾರತೀಯರು ಶತ್ರುಗಳೆಂದು ತಿಳಿದುಕೊಂಡಿದ್ದ ಬ್ರಿಟಿಷರು ಅಧಿಕಾರದಲ್ಲಿದ್ದರು. ಹಾಗಿದ್ದರೂ ಆ ಪ್ರಯತ್ನಗಳು ವಿಫಲವಾಗಿದ್ದವು.

ಆದರೆ ಅವರ ಹತ್ಯೆ ನಡೆದಾಗ ಅವರ ಶಿಷ್ಯೋತ್ತಮರೇ ಅಧಿಕಾರದಲ್ಲಿದ್ದರು. ಅವರಿಗೂ ಬಾಪುವನ್ನು ಉಳಿಸಿಕೊಳ್ಳಲು ಆಗಲಿಲ್ಲ. ಶಿಷ್ಯಂದಿರ ವರ್ತನೆಯ ಸುಳಿವು ಸಿಕ್ಕಿಯೇ ಗಾಂಧೀಜಿ ಬದುಕುವ ಆಸೆ ಕಳೆದುಕೊಂಡಿದ್ದರೇ?

ಗಾಂಧೀಜಿ ಹತ್ಯೆ ಮುಗಿದ ಅಧ್ಯಾಯ ಎಂದೇ ಹೆಚ್ಚಿನವರು ನಂಬಿದ್ದಾರೆ. ಕೊಲೆಗಡುಕರು ಯಾರೆಂದು ಗೊತ್ತಾಗಿದೆ, ಅವರಿಗೆ ಶಿಕ್ಷೆಯೂ ಆಗಿದೆ, ಇನ್ನೇನು ಎಂದು ಕೇಳುವವರಿದ್ದಾರೆ. ಆದರೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ವಿಚಾರವಷ್ಟೇ ಗಾಂಧೀಜಿಯವರನ್ನು ಕೊಲ್ಲಲು ಗೋಡ್ಸೆಗೆ ಪ್ರೇರಣೆ ನೀಡಿತ್ತೇ? ಇಲ್ಲವೇ ಬೇರೆ ಕಾರಣಗಳೂ ಇದ್ದವೇ? ಎಂಬ ಪ್ರಶ್ನೆಗೆ ನ್ಯಾಯಾಲಯದ ತೀರ್ಪಿನಲ್ಲಿ ಉತ್ತರ ಸಿಗುವುದಿಲ್ಲ.

ಹತ್ಯೆಯ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿರುವುದು ಗೊತ್ತಿದ್ದರೂ ಗಾಂಧೀಜಿಯವರನ್ನು ಉಳಿಸಿಕೊಳ್ಳಲು ಅವರ ಅನುಯಾಯಿಗಳಿಗೆ ಯಾಕೆ ಸಾಧ್ಯವಾಗಿಲ್ಲ ಎನ್ನುವ ಪ್ರಶ್ನೆಗೂ ಇನ್ನೂ ಉತ್ತರ ಸಿಕ್ಕಿಲ್ಲ. ಗಾಂಧೀಜಿ ಹತ್ಯೆಗೆ ಸಂಬಂಧಿಸಿದ ಹಲವಾರು ಪುಸ್ತಕಗಳು, ನ್ಯಾಯಾಲಯದಲ್ಲಿನ ವಿಚಾರಣೆಯ ದಾಖಲೆಗಳು ಹಾಗೂ ಕೊಲೆಗಾರರಿಗೆ ಶಿಕ್ಷೆಯಾದ ನಂತರ ಎದ್ದ ವಿವಾದದಿಂದಾಗಿ ಮಹಾರಾಷ್ಟ್ರ ಸರ್ಕಾರವೇ ನೇಮಿಸಿದ ಕಪೂರ್ ಆಯೋಗದ ವರದಿಗಳ ಪುಟಗಳನ್ನು ತಿರುವಿಹಾಕಿದರೆ ಇನ್ನಷ್ಟು ಪ್ರಶ್ನೆಗಳು ಹುಟ್ಟುತ್ತವೆಯೇ ಹೊರತು ಉತ್ತರ ಸಿಗುವುದಿಲ್ಲ.

ಗಾಂಧೀಜಿ ಹತ್ಯೆಗೆ ನಡೆದ ಐದು ಪ್ರಯತ್ನಗಳನ್ನು ದೃಢೀಕರಿಸುವ ದಾಖಲೆಗಳು ಲಭ್ಯ ಇವೆ. ಈ ಐದೂ ಪ್ರಯತ್ನಗಳಲ್ಲಿ ನಾಥುರಾಮ್ ಗೋಡ್ಸೆ ಪ್ರತ್ಯಕ್ಷವಾಗಿ ಇಲ್ಲವೇ ಪರೋಕ್ಷವಾಗಿ ಭಾಗವಹಿಸಿದ್ದ ಉಲ್ಲೇಖಗಳಿವೆ.

ಈ ಕಾರಣದಿಂದಾಗಿಯೇ ಪೊಲೀಸರು ಆತನನ್ನು ತಡೆಯುವ ಪ್ರಯತ್ನ ಯಾಕೆ ಮಾಡಲಿಲ್ಲ ಎನ್ನುವ ಪ್ರಶ್ನೆ ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಗಾಂಧೀಜಿ ಹತ್ಯೆಗೆ ಮೊದಲ ಪ್ರಯತ್ನ ನಡೆದಿದ್ದು 1934ರ ಜೂನ್ 25ರಂದು ಪುಣೆಯಲ್ಲಿ. `ಹರಿಜನ ಯಾತ್ರೆ`ಯಲ್ಲಿ ಪಾಲ್ಗೊಳ್ಳಲು ಗಾಂಧೀಜಿ ಅಲ್ಲಿಗೆ ಹೋಗಿದ್ದರು. ಅಲ್ಲಿ ದುಷ್ಕರ್ಮಿಗಳು ಎಸೆದ ಬಾಂಬು ಗಾಂಧಿ ವಿರೋಧಿ ಅಣ್ಣಾಸಾಹೇಬ್ ಬೋಪಟ್ಕರ್ ಕಾರು ಮೇಲೆ ಬಿದ್ದ ಕಾರಣ ಗಾಂಧೀಜಿ ಪಾರಾಗಿದ್ದರು.

ಈ ಪ್ರಕರಣದ ಆರೋಪಿಗಳ್ಯಾರು ಎನ್ನುವ ಬಗ್ಗೆ ಸ್ಪಷ್ಟ ಉಲ್ಲೇಖಗಳು ಸಿಗುವುದಿಲ್ಲ. ಅಲ್ಲೆಲ್ಲೂ ಗೋಡ್ಸೆ ಹೆಸರು ಬರುವುದಿಲ್ಲ. ಆದರೆ ಗಾಂಧೀಜಿಯವರ ಕೊನೆಯ ದಿನಗಳ ಬಗ್ಗೆ ಎರಡು ಸಂಪುಟಗಳಲ್ಲಿ ಬರೆದಿರುವ ಪ್ಯಾರೇಲಾಲ್ ಅವರು ಗಾಂಧೀಜಿ ಹತ್ಯೆಯ ಮೊದಲ ಪ್ರಯತ್ನದ ಬಗ್ಗೆ ಬರೆಯುತ್ತಾ `ಈ ಪ್ರಯತ್ನದಲ್ಲಿ ಭಾಗಿಯಾಗಿದ್ದವರೇ 1948ರಲ್ಲಿ ಗಲಭೆಗ್ರಸ್ತ ದೆಹಲಿಯಲ್ಲಿ ಶಾಂತಿಪಾಲನೆಗಾಗಿ ಹೋರಾಡುತ್ತಿದ್ದ ಗಾಂಧೀಜಿಯವರ ಕೊಲೆಗೈದರು` ಎಂದು ಹೇಳಿದ್ದಾರೆ.

`ಗಾಂಧೀಜಿ ಮುಸ್ಲಿಮ್ ಪಕ್ಷಪಾತಿಯಾಗಿದ್ದರು, ಭಾರತದ ವಿಭಜನೆಗೆ ಕಾರಣರಾಗಿದ್ದರು. ಪಾಕಿಸ್ತಾನಕ್ಕೆ 55 ಕೋಟಿ ರೂಪಾಯಿ ನೀಡುವಂತೆ ಭಾರತ ಸರ್ಕಾರದ ಮೇಲೆ ಅವರು ಒತ್ತಡ ಹೇರಿದ್ದರು. ಇದನ್ನು ಕಂಡು ಕ್ರುದ್ಧರಾದ ಹಿಂದೂ ಮಹಾಸಭಾಕ್ಕೆ ಸೇರಿದ್ದ ಗೋಡ್ಸೆ ಮತ್ತು ಆಪ್ಟೆ ಗಾಂಧೀಜಿಯವರ ಹತ್ಯೆಗೆ ಮುಂದಾದರು` ಎನ್ನುವ ಸಾಮಾನ್ಯ ಅಭಿಪ್ರಾಯ ಜನಜನಿತವಾಗಿದೆ. ಅಪರಾಧಿಗಳು ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಗಳು ಮತ್ತು ನ್ಯಾಯಾಲಯದ ತೀರ್ಪು ಕೂಡಾ ಇದನ್ನೇ ಹೇಳುತ್ತವೆ.

ಗಾಂಧೀಜಿ ಹತ್ಯೆಗೆ ಮೊದಲ ಪ್ರಯತ್ನ ನಡೆದಿದ್ದಾಗ ಭಾರತದ ವಿಭಜನೆ ಆಗಿರಲಿಲ್ಲ, ಮುಸ್ಲಿಮ್ ಪಕ್ಷಪಾತಿ ಎಂಬ ಆರೋಪ ಕೂಡಾ ಅವರ ಮೇಲೆ ಇರಲಿಲ್ಲ. ಆಗಿನ್ನೂ ಬ್ರಿಟಿಷರ ವಿರುದ್ಧದ ಹೋರಾಟಕ್ಕಿಂತಲೂ ಹೆಚ್ಚಾಗಿ ಹಿಂದೂ ಸಮಾಜದ ಅನಿಷ್ಟವಾದ ಅಸ್ಪೃಶ್ಯತೆ ಮತ್ತು ಕಂದಾಚಾರಗಳ ವಿರುದ್ಧ ಜನಜಾಗೃತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಹರಿಜನರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಬೇಕೆಂದು ಚಳವಳಿ ಪ್ರಾರಂಭಿಸಿದ್ದರು.

ಗಾಂಧೀಜಿಯವರ ಈ ವಿಚಾರಗಳೇ ಅವರ ವಿರೋಧಿಗಳ ಸಿಟ್ಟಿಗೆ ಕಾರಣವಾಗಿತ್ತೇ?
ಗಾಂಧಿ ಹತ್ಯೆಯ ಎರಡನೇ ಪ್ರಯತ್ನ ಮಹಾರಾಷ್ಟ್ರದ ಪಂಚಗಣಿಯಲ್ಲಿ 1944ರ ಜುಲೈ ತಿಂಗಳಲ್ಲಿ ನಡೆದಿತ್ತು.

ಮಲೇರಿಯಾ ಪೀಡಿತರಾಗಿದ್ದ ಗಾಂಧೀಜಿ ವಿಶ್ರಾಂತಿಗಾಗಿ ಅಲ್ಲಿಗೆ ಹೋಗಿದ್ದರು. ಅಲ್ಲಿಗೆ ನಾಥುರಾಮ್ ಗೋಡ್ಸೆ ತನ್ನ ಬೆಂಬಲಿಗರೊಂದಿಗೆ ಹೋಗಿ ಪ್ರತಿಭಟನೆ ನಡೆಸಿದ್ದ. ಆತನನ್ನು ಮಾತುಕತೆಗೆ ಗಾಂಧೀಜಿ ಕರೆದಾಗ ಹೋಗದ ಗೋಡ್ಸೆ ಪ್ರಾರ್ಥನೆಯ ಸಮಯದಲ್ಲಿ ಕೈಯಲ್ಲಿ ಕಠಾರಿ ಝಳಪಿಸುತ್ತಾ ಗಾಂಧೀಜಿ ಕಡೆ ನುಗ್ಗಿದ್ದ.

ಆಗ ಗಾಂಧಿ ಅನುಯಾಯಿಗಳು ಆತನನ್ನು ತಡೆದು ಹೊರಗೆ ಒಯ್ದಿದ್ದರು. `ಕೊಲೆ ಮಾಡಲು ಬಂದವನು ನಾಥುರಾಮ್ ಗೋಡ್ಸೆ` ಎಂದು ಆತನ ಯತ್ನವನ್ನು ವಿಫಲಗೊಳಿಸಿದ್ದ ಅಲ್ಲಿನ ವಿಶ್ರಾಂತಿಗೃಹದ ಮಾಲೀಕ ಮಣಿಶಂಕರ್ ಪುರೋಹಿತ್ ಮತ್ತು ಸತಾರದ ಡಿ.ಬಿಲಾರೆ ಗುರೂಜಿ ಅವರು ಕಪೂರ್ ಆಯೋಗದ ಮುಂದೆ ಸಾಕ್ಷ್ಯ ಹೇಳಿದ್ದಾರೆ.

ಮೂರನೇ ಪ್ರಯತ್ನ 1944ರ ಸೆಪ್ಟೆಂಬರ್‌ನಲ್ಲಿ ಗಾಂಧೀಜಿ ಮತ್ತು ಜಿನ್ನಾ ನಡುವಿನ ಮಾತುಕತೆಯ ಮೊದಲು, ಸೇವಾಗ್ರಾಮದಲ್ಲಿಯೇ ನಡೆದಿತ್ತು. ಆ ಮಾತುಕತೆಗೆ ಹೋಗದಂತೆ ತಡೆಯಲು ನಾಥುರಾಮ್ ಗೋಡ್ಸೆ ತನ್ನ ಬೆಂಬಲಿಗರೊಂದಿಗೆ ಗಾಂಧೀಜಿ ಉಳಿದುಕೊಂಡಿದ್ದ ಸೇವಾಗ್ರಾಮಕ್ಕೆ ಹೋಗಿದ್ದ. ಗಾಂಧೀಜಿ ಕಡೆ ನುಗ್ಗಿ ಬರುತ್ತಿದ್ದ ಗೋಡ್ಸೆಯನ್ನು ಆಶ್ರಮವಾಸಿಗಳು ತಡೆದು ನಿಲ್ಲಿಸಿದ್ದರು.

ಪೊಲೀಸರು ಬಂದು ತಪಾಸಣೆ ಮಾಡಿದಾಗ ಆತನ ಅಂಗಿಯ ಕಿಸೆಯಲ್ಲಿ ಕಠಾರಿ ಇದ್ದದ್ದು ಗೊತ್ತಾಗಿತ್ತು. ರೈಲು ಅಪಘಾತದ ಮೂಲಕ ಗಾಂಧೀಜಿಯವರನ್ನು ಕೊಲ್ಲುವ ನಾಲ್ಕನೇ ಪ್ರಯತ್ನ ಪುಣೆಯಲ್ಲಿಯೇ 1946ರ ಜೂನ್ 29ರಂದು ನಡೆದಿತ್ತು.ಗಾಂಧೀಜಿಯವರು ಪ್ರಯಾಣಿಸುತ್ತಿದ್ದ `ಗಾಂಧೀ ವಿಶೇಷ` ಎನ್ನುವ ಹೆಸರಿನ ರೈಲು ಪುಣೆಗೆ ಹೋಗುತ್ತಿರುವಾಗ ಹಳಿಗಳ ಮೇಲೆ ಕಲ್ಲುಬಂಡೆಗಳನ್ನು ಇಟ್ಟು ಅಪಘಾತ ನಡೆಸುವ ಪ್ರಯತ್ನ ನಡೆಸಲಾಗಿತ್ತು.

ಆದರೆ ರೈಲಿನ ಚಾಲಕ ವಹಿಸಿದ್ದ ಎಚ್ಚರಿಕೆಯಿಂದಾಗಿ ಆ ಅಪಘಾತ ನಡೆಯಲಿಲ್ಲ. ಈ ಘಟನೆ ನಡೆದ ಮರುದಿನವೇ ಗಾಂಧೀಜಿ ಪುಣೆಯಲ್ಲಿ ನಡೆದ ಸಭೆಯಲ್ಲಿ `ನಾನು 125 ವರ್ಷ ಬದುಕುತ್ತೇನೆ...`ಎಂದು ಹೇಳಿದ್ದು. ಅದನ್ನು ಕೇಳಿ ಆ ಸಭೆಯಲ್ಲಿದ್ದ ನಾಥುರಾಮ್ ಗೋಡ್ಸೆ `ಅಷ್ಟುದಿನ ನಿಮ್ಮನ್ನು ಬದುಕಲು ಯಾರು ಬಿಡುತ್ತಾರೆ` ಎಂದು ಪ್ರತಿಕ್ರಿಯಿಸಿದ್ದನ್ನು ಆತನ ಜತೆಯಲ್ಲಿದ್ದವರು ನಂತರದ ದಿನಗಳಲ್ಲಿ ಬಹಿರಂಗಪಡಿಸಿದ್ದಾರೆ.

ಗಾಂಧೀಜಿಯವರ ಹತ್ಯೆಯ ಕೊನೆಯ ಪ್ರಯತ್ನ ವಿಫಲಗೊಂಡದ್ದು 1948ರ ಜನವರಿ 20ರಂದು. ತಾವು ನಂಬಿದ್ದ `ಗುರುಹಿರಿಯರ` ಆಶೀರ್ವಾದದೊಂದಿಗೆ ಸರ್ವಸನ್ನದ್ಧರಾಗಿ ದೆಹಲಿಗೆ ಬಂದಿದ್ದ ನಾಥೂರಾಮ್ ಗೋಡ್ಸೆ ಮತ್ತು ಸಂಗಾತಿಗಳು, ಸಂಜೆ ಹೊತ್ತಿಗೆ ಬಿರ್ಲಾ ಭವನದೊಳಗೆ ಸೇರಿಕೊಂಡಿದ್ದರು. ಮೊದಲು ಮದನ್‌ಲಾಲ್ ಪಹವಾ ಗಾಂಧೀಜಿ ಪ್ರಾರ್ಥನೆ ಮಾಡುವ ಸ್ಥಳದ ಹಿಂದಿನ ಗೋಡೆಯಲ್ಲಿ ಬಾಂಬು ಇಟ್ಟು ಸ್ಫೋಟಿಸಬೇಕು.

ಅದಾದ ಕೂಡಲೇ ಗೋಡ್ಸೆ ಮತ್ತು ವಿಷ್ಣು ಕರಕರೆ ಗ್ರೆನೇಡ್ ಎಸೆಯಬೇಕು. ಅಂತಿಮವಾಗಿ ದಿಗಂಬರ ಬಡ್ಗೆ ಗಾಂಧೀಜಿಯವರ ಕಡೆ ರಿವಾಲ್ವರ್‌ನಿಂದ ಗುಂಡುಹಾರಿಸಬೇಕು-ಇದು ಮೂಲ ಯೋಜನೆ. ಆದರೆ ಬಾಂಬು ಸ್ಫೋಟವಾದ ಕೂಡಲೇ ಪೊಲೀಸರು ಮದನ್‌ಲಾಲ್‌ನನ್ನು ವಶಕ್ಕೆ ತೆಗೆದುಕೊಂಡಿದ್ದರು. ಅದನ್ನು ನೋಡಿದ ಕೂಡಲೇ ಉಳಿದವರು ಅಲ್ಲಿಂದ ಪಲಾಯನಗೈದರು.

ಮದನ್‌ಲಾಲನನ್ನು ಬಂಧಿಸಿದ್ದ ಪೊಲೀಸರು 24 ಗಂಟೆಗಳ ಅವಧಿಯಲ್ಲಿ ಗಾಂಧಿ ಹತ್ಯೆಯ ಸಂಚಿನ ವಿವರಗಳನ್ನೆಲ್ಲ ಸಂಗ್ರಹಿಸಿದ್ದರು. ಪಂಜಾಬಿ ನಿರಾಶ್ರಿತ ಮದನ್‌ಲಾಲ್‌ಗೆ ಆಶ್ರಯ ನೀಡಿ ಸಾಕಿದ್ದವರು ಮಹಾರಾಷ್ಟ್ರದ ಪ್ರೊ.ಜಗದೀಶ್‌ಚಂದ್ರ ಜೈನ್ ಎಂಬ ಪ್ರಾಧ್ಯಾಪಕರು.

ತಾನು ಗಾಂಧಿ ಹತ್ಯೆಯ ಸಂಚಿನಲ್ಲಿ ಸೇರಿಕೊಂಡದ್ದನ್ನು ಆತ ಪ್ರೊ.ಜೈನ್ ಅವರಿಗೂ ತಿಳಿಸಿದ್ದ. ಮದನ್‌ಲಾಲ್ ಬಂಧನದ ಸುದ್ದಿ ಪತ್ರಿಕೆಯಲ್ಲಿ ಓದಿದ ಕೂಡಲೇ ಜಾಗೃತರಾದ ಪ್ರೊ.ಜೈನ್ ಆಗ ಮಹಾರಾಷ್ಟ್ರದ ಗೃಹಸಚಿವರಾಗಿದ್ದ ಮೊರಾರ್ಜಿ ದೇಸಾಯಿ ಅವರನ್ನು ಭೇಟಿಯಾಗಿ ಸಂಚಿನ ವಿವರ ತಿಳಿಸಿದ್ದರು.

ಆ ಮಾತುಕತೆಯಲ್ಲಿ ವಿ.ಡಿ.ಸಾವರ್ಕರ್ ಮತ್ತು `ಕರ್ಕರೆ ಸೇಠ್` ಜತೆ ಮದನ್‌ಲಾಲ್ ಹೊಂದಿದ್ದ ಸಂಪರ್ಕವನ್ನು ಕೂಡಾ ಅವರು ಒತ್ತಿ ಹೇಳಿದ್ದರು. `ದಕ್ಷತೆಗೆ ಹೆಸರಾಗಿದ್ದ ಮತ್ತು ಗಾಂಧಿವಾದಿಯಾಗಿದ್ದ ಮೊರಾರ್ಜಿ ದೇಸಾಯಿ ವರ್ತನೆ ಆಶ್ಚರ್ಯಕರವಾಗಿತ್ತು. ಪ್ರೊ.ಜೈನ್ ಹೇಳಿದ್ದನ್ನು ಅವರು ದಾಖಲಿಸಿರಲಿಲ್ಲ, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಸಿ ಚರ್ಚಿಸಿರಲಿಲ್ಲ. ಪ್ರೊ.ಜೈನ್ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಲು ಪೊಲೀಸರಿಗೆ ತಿಳಿಸಬಹುದಿತ್ತು.

ಅದನ್ನೂ ಮಾಡಿರಲಿಲ್ಲ. ಅಹಮದಾಬಾದ್‌ಗೆ ಹೊರಟಿದ್ದ ಅವರು ರೈಲ್ವೆ ನಿಲ್ದಾಣಕ್ಕೆ ಡಿಸಿಪಿ ನಗರ್‌ವಾಲಾ ಅವರನ್ನು ಕರೆಸಿ ವಿಷಯವನ್ನಷ್ಟೇ ತಿಳಿಸಿದ್ದರು` ಎಂದು ಗಾಂಧೀಜಿ ಮೊಮ್ಮಗ ತುಷಾರ್ ಗಾಂಧಿ `ಲೆಟ್ ಅಸ್ ಕಿಲ್ ಗಾಂಧಿ` ಎಂಬ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ.

ಮೊರಾರ್ಜಿ ಅವರಿಂದ ವಿಷಯ ತಿಳಿದುಕೊಂಡ ಡಿಸಿಪಿ ನಗರ್‌ವಾಲ್ ತನ್ನ ಬಳಿ ಎಲ್ಲ ಮಾಹಿತಿ ಇದೆ ಎಂದು ಹೇಳುತ್ತಲೇ ಇದ್ದರೂ ಅದನ್ನು ಕೊನೆಗೂ ಬಹಿರಂಗಪಡಿಸಿದ್ದು ಗಾಂಧಿ ಹತ್ಯೆಯಾದ ಹನ್ನೆರಡು ಗಂಟೆಗಳ ನಂತರ. ಜನವರಿ 20ರಿಂದ 30ರ ವರೆಗಿನ ಹತ್ತು ದಿನಗಳ ಅವಧಿಯಲ್ಲಿ ನಾಥುರಾಮ್ ಗೋಡ್ಸೆ ಮತ್ತು ಸಂಗಾತಿಗಳು ದೆಹಲಿ-ಮುಂಬೈ ನಡುವೆ ನಿರಾತಂಕವಾಗಿ ಓಡಾಡುತ್ತಾ ಗಾಂಧಿ ಹತ್ಯೆಯ ಕೊನೆಯ ಪ್ರಯತ್ನಕ್ಕೆ ಸಿದ್ಧತೆ ನಡೆಸುತ್ತಿದ್ದರು.

ಆಗ ಕೇಂದ್ರದಲ್ಲಿ ಮಾತ್ರವಲ್ಲ, ಎಲ್ಲ ರಾಜ್ಯಗಳ ಆಡಳಿತ ಗಾಂಧೀಜಿ ಅನುಯಾಯಿಗಳ ಕೈಯಲ್ಲಿಯೇ ಇತ್ತು. ಕೇಂದ್ರದಲ್ಲಿ ಗೃಹಸಚಿವರಾಗಿದ್ದವರು `ಉಕ್ಕಿನ ಮನುಷ್ಯ` ಸರ್ದಾರ್ ವಲ್ಲಭಭಾಯಿ ಪಟೇಲ್. ಸಂಚು ರೂಪುಗೊಂಡ ಮಹಾರಾಷ್ಟ್ರದಲ್ಲಿ ಗೃಹಸಚಿವರಾಗಿದ್ದವರು ಮೊರಾರ್ಜಿ ದೇಸಾಯಿ. ಪ್ರಧಾನಿಯಾಗಿದ್ದವರು ಗಾಂಧೀಜಿ ತನ್ನ ಮಕ್ಕಳಿಗಿಂತಲೂ ಹೆಚ್ಚು ಪ್ರೀತಿಸುತ್ತಿದ್ದ ಜವಾಹರಲಾಲ್ ನೆಹರೂ.
ದೆಹಲಿ ಪೊಲೀಸರು ಮದನ್‌ಲಾಲ್ ನೀಡಿದ ಮಾಹಿತಿ ಆಧರಿಸಿ ಸಂಚುಕೋರರು ತಂಗಿದ್ದ ಹೊಟೇಲ್ ಕೋಣೆ ಜಾಲಾಡಿಸಿದ್ದರು.

ಅಲ್ಲಿ ಹಿಂದೂ ಮಹಾಸಭಾದ ಲೆಟರ್‌ಹೆಡ್ ಸಿಕ್ಕಿದ್ದರೂ ಆ ಸಂಘಟನೆಯ ಪದಾಧಿಕಾರಿಗಳನ್ನು ಪೊಲೀಸರು ವಿಚಾರಿಸಿರಲಿಲ್ಲ. ಕಪೂರ್ ಆಯೋಗದ ಮುಂದೆ ಮಹಾಸಭಾದ ಪದಾಧಿಕಾರಿ ಅಶೋಕ್ ಲಾಹಿರಿಯವರೇ ಇದನ್ನು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ. ಮದನ್‌ಲಾಲ್ ಪ್ರಮುಖವಾಗಿ `ಅಗ್ರಾಣಿ` ಮತ್ತು `ಹಿಂದೂ ರಾಷ್ಟ್ರ` ಎನ್ನುವ ಎರಡು ಪತ್ರಿಕೆಗಳ ಸಂಪಾದಕರು ಮತ್ತು ಪ್ರಕಾಶಕರ ಬಗ್ಗೆ ತಿಳಿಸಿದ್ದ.

ಅವರು ಯಾರು ಎಂದು ತಿಳಿದುಕೊಳ್ಳುವ ಪ್ರಯತ್ನವನ್ನೂ ಪೊಲೀಸರು ಹತ್ತು ದಿನಗಳ ಅವಧಿಯಲ್ಲಿ ಮಾಡಿರಲಿಲ್ಲ. ಕನಿಷ್ಠ ಆ ಒಂದು ಸಣ್ಣ ಪ್ರಯತ್ನ ಮಾಡಿದ್ದರೆ ಗಾಂಧಿ ಹತ್ಯೆಯ ಸಂಚನ್ನು ಭಗ್ನಗೊಳಿಸಬಹುದಿತ್ತು. ಯಾಕೆಂದರೆ ಆ ಸಂಪಾದಕರು ಮತ್ತು ಪ್ರಕಾಶಕರ ಹೆಸರು- ನಾಥುರಾಮ್ ಗೋಡ್ಸೆ ಮತ್ತು ನಾರಾಯಣ ಅಪ್ಟೆ. ಗಾಂಧೀಜಿಯವರನ್ನು ಕೇವಲ ನಾಥುರಾಮ್ ಗೋಡ್ಸೆ ಕೊಂದದ್ದು ಎಂದು ಹೇಗೆ ಹೇಳುವುದು?

Monday, December 05, 2011

ಗಾಂಧಿ-ಅಂಬೇಡ್ಕರ್ ಮತ್ತು ನಮ್ಮ ತಪ್ಪು ನಿಲುವುಗಳು !


    ಡಾ. ಸಿದ್ರಾಮ ಕಾರಣಿಕ

ರವಿವಾರದ ಪ್ರಜಾವಾಣಿ ಸಾಪ್ತಾಹಿಕದಲ್ಲಿ (4-12-2011)  ಎನ್.ಎಸ್. ಶಂಕರ್ ಎಂಬುವವರು ಅಂಬೇಡ್ಕರ್ ಪರಿನಿರ್ವಾಣ ದಿನದ ಸಂದರ್ಭದಲ್ಲಿ ಒಂದು ವಿಶೇಷ ಲೇಖನ ಬರೆದಿದ್ದಾರೆ. ನಿಜಕ್ಕೂ ಅದೊಂದು ವಿಶೇಷವಾದ ಲೇಖನವೇನೂ ಅಲ್ಲ ! ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಸರಿಯಾಗಿ ಗ್ರಹಿಸದೆ ಅಥವಾ ಗ್ರಹಿಸಿದರೂ ಅವರ ವಿಚಾರಗಳಿಗೆ ಸಮ್ಮತಿಯಿಲ್ಲದ ಮನೋಭಾವದವರು ಹೀಗೆ ಬರೆಯುವುದರಲ್ಲಿ ಅಚ್ಚರಿ ಪಡುವಂಥದ್ದೇನೂ  ಇಲ್ಲ. ಯಾಕೆಂದರೆ ಇಂಥ ದಿಕ್ಕುಗಾಣದ ಅಭಿಪ್ರಾಯಗಳು ಇಂದು ನಿನ್ನೆಯವಲ್ಲ ; ಅವುಗಳಿಗೂ ದೊಡ್ಡ ಇತಿಹಾಸವೇ ಇದೆ. ಗಾಂಧಿಯನ್ನು ಖಳನಾಯಕನನ್ನಾಗಿ ನೋಡಿದ್ದು ಯಾರು ಮತ್ತು ಯಾಕೆ ಎಂಬುದು ಎಲ್ಲರಿಗೂ ತಿಳಿದ ವಿಷಯವೇ ಆಗಿದೆ. ಒಂದು ವೇಳೆ ಗಾಂಧಿ-ಅಂಬೇಡ್ಕರ್ ಇಬ್ಬರೂ ಒಂದೇ ಹೋರಾಟದ ಎರಡು ವಿಭಿನ್ನ ಧ್ವನಿಗಳು ಎಂದು ಗುರುತಿಸೋಣ ; ಆದರೆ ಹಾಗೆ ಗುರುತಿಸುವಾಗ ಐತಿಹಾಸಿಕ ಸತ್ಯಗಳನ್ನು ಮರೆ ಮಾಚಿ ಮಾತನಾಡುವುದು ಸರಿಯಲ್ಲ. ಗಾಂಧಿ, ದಲಿತರ ವಿರೋಧಿಯಲ್ಲ ಎಂಬುದು ಎಷ್ಟು ಸತ್ಯವೋ ಅಷ್ಟೇ ಅವರು ದಲಿತಪರವಾದ ಕಾಳಜಿಯನ್ನೂ ಹೊಂದಿರದ ವ್ಯಕ್ತಿ. 'ಹರಿಜನ' ಎಂಬ ಒಂದು ಪತ್ರಿಕೆಯನ್ನು ಪ್ರಕಟಿಸಿ, ಕೆಲ ಅಸಹ್ಯಕರವಾದ ಆಚರಣೆಗಳನ್ನು ಪಾಲಿಸದಂತೆ ಸಮೂಹದಲ್ಲಿ ತೋರಿಸಿಕೊಳ್ಳುವುದು ಕೇವಲ ಡಾಂಭಿಕತೆ ಅಷ್ಟೆ ! ಕೇವಲ ಪೂನಾ ಒಪ್ಪಂದ ಮಾತ್ರವಲ್ಲ ; ಗಾಂಧಿಯ ನಡೆಯನ್ನು ನಿರಾಕರಿಸಲು ಇನ್ನೂ ಬಹಳಷ್ಟು ಕಾರಣಗಳು ಇವೆ ಎಂಬುದನ್ನು ಮರೆಯಬಾರದು ; ಮರೆತು ಮಾತನಾಡಿದರೆ ಅದನ್ನು 'ಜ್ಞಾನ, ಅರೆಜ್ಞಾನ ಮತ್ತು ಅಪಕಲ್ಪನೆ'ಎನ್ನಬೇಕಾಗುತ್ತದೆ ! 
1930 ರಲ್ಲಿ ದುಂಡುಮೇಜಿನ ಪರಿಷತ್ತಿನಲ್ಲಿ ಭಾಗವಹಿಸಿದ ಮೇಲೆ 'ಅಂಬೇಡ್ಕರ ಇನ್ನೂ ಸಾರ್ವಜನಿಕ ಜೀವನವನ್ನು ಪ್ರವೇಶಿಸಿರಲೂ ಇಲ್ಲ' ಎಂಬ ವ್ಯಾಖ್ಯಾನ ಮಾಡುವುದು ಅಜ್ಞಾನವಲ್ಲದೇ ಮತ್ತೇನು ? ಇದು ಡಾ.ಬಾಸಾಹೇಬ ಅಂಬೇಡ್ಕರ ಬಗ್ಗೆ ಇರುವ ಅರೆಜ್ಞಾನ ಎನ್ನಬೇಕಾಗುತ್ತದೆ. 1930 ಕ್ಕಿಂತಲೂ ಮುಂಚೆಯೇ ಡಾ. ಬಾಬಾಸಾಹೇಬರು ಮಾಡಿರುವ ಕಾರ್ಯಗಳ ಬಗ್ಗೆ ಯಾಕೆ ಇವರು ಅರಿವು ಇಟ್ಟುಕೊಂಡು ಮಾತಾಡುವುದಿಲ್ಲ ? 1920 ರಲ್ಲಿಯೇ ಡಾ. ಬಾಬಾಸಾಹೇಬ ಅಂಬೇಡ್ಕರ 'ಮೂಕ ನಾಯಕ' ಎಂಬ ಪಾಕ್ಷಿಕ ಪತ್ರಿಕೆಯನ್ನು ಆರಂಭಿಸಿದರು. 1924 ರಲ್ಲಿ 'ಬಹಿಷ್ಕೃತ ಹಿತಕಾರಿಣಿ ಸಭಾ' ಸ್ಥಾಪನೆ ಮಾಡಿದರು. 1927 ರ ಎಪ್ರಿಲ್ ತಿಂಗಳಲ್ಲಿ 'ಬಹಿಷ್ಕೃತ ಭಾರತ' ಪಾಕ್ಷಿಕ ಪತ್ರಿಕೆಯನ್ನು ಆರಂಭಿಸಿದರು. ಅದೇ ವರ್ಷ ಮುಂಬಯಿ ವಿಧಾನಮಂಡಲದ ಸದಸ್ಯರಾದರು. ಅದೇ ವರ್ಷ ಸಪ್ಟೆಂಬರ್ ತಿಂಗಳಿನಲ್ಲಿ ;ಸಮಾಜ ಸಮತಾ ಸಂಘ' ಸ್ಥಾಪಿಸಿದರು. ಅದೇ 1927 ರ ನವ್ಹೆಂಬರ್ ತಿಂಗಳಲ್ಲಿ ಅಮರಾವತಿಯ ಅಂಬಾದೇವಿಯ ಮಂದಿರ ಪ್ರವೇಶ ಚಳುವಳಿ ನಡೆಸಿದರಲ್ಲದೆ, ಡಿಸೆಂಬರ್ ತಿಂಗಳಿನಲ್ಲಿ 'ಮನುಸ್ಮೃತಿ' ಮಹಾಡದಲ್ಲಿ ಸುಟ್ಟು ಹಾಕಿ ವೈದಿಕ ಸನಾತನಿ ಸಂಪ್ರದಾಯಕ್ಕೆ ಸವಾಲು ಹಾಕಿದರು. ಐತಿಹಾಸಿಕತೆ ರೂಪಿಸಿದ ನಾಶಿಕದ 'ಕಾಳಾರಾಮ ಮಂದಿರ ಪ್ರವೇಶ ಚಳುವಳಿ' ನಡೆಸಿದ್ದೂ 1930 ಮಾರ್ಚ್ ತಿಂಗಳಲ್ಲಿ ; ಆನಂತರವೇ ಅಂದರೆ ಅದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ದುಂಡು ಮೇಜಿನ ಪರಿಷತ್ತಿನಲ್ಲಿ ಪಾಲ್ಗೊಳ್ಳಲು ಇಂಗ್ಲಂಡಿಗೆ ಹೋದರು. ಅವರು ಇಂಗ್ಲಂಡಿಗೆ ಹೋಗುವುದಕ್ಕಿಂತ ಮುಂಚೆಯೇ ಇಷ್ಟೆಲ್ಲ ಸಾಮಾಜಿಕ ಕಾರ್ಯಗಳನ್ನು ಮಾಡಿದರೂ ಏನೂ ಮಾಡಿಯೇ ಇಲ್ಲ ಎಂದು ಹೇಳಿಕೆ ಕೊಡುವುದು ಅರೆಜ್ಞಾನದಿಂದ ಬಂದ ಅಹಂಕಾರವೇ ಸರಿ. ಒಂದು ಲೇಖನ ಬರೆಯುವಾಗ ವಿಷಯದ ಆಳ-ಅಗಲಗಳನ್ನು ಸರಿಯಾಗಿ ತಿಳಿದುಕೊಳ್ಳದೇ ಅಥವಾ ತಿಳಿದುಕೊಂಡಿದ್ದರೂ ಮರೆಮಾಚಿ ಸುಳ್ಳನ್ನು ಹೇಳುವ ಮೂಲಕ ಅವಮಾನಿಸುವ ಪ್ರವೃತ್ತಿಯನ್ನು ಬಿಡಬೇಕಾಗುತ್ತದೆ. ಎನ್.ಎಸ್. ಶಂಕರ ಅವರು ಇನ್ನೊಂದಿಷ್ಟು ಓದಿಕೊಂಡರೆ ಚೆನ್ನ !
                                                             

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.