Showing posts with label ಸುದ್ದಿ. Show all posts
Showing posts with label ಸುದ್ದಿ. Show all posts

Saturday, July 27, 2013

‘ಅನಂತನ್‌’ ಅವಾಂತರ : ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಗುದಮುರುಗಿ !

RCUB Anantan-Cartoon
ಅವಧಿ ಮುಗಿದರೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯಲ್ಲಿ ಪ್ರೊ.ಬಿ.ಆರ್. ಅನಂತನ್ ವಿರಾಜಮಾನರಾಗಿದ್ದಾರೆ.
ರಾಜ್ಯಪಾಲರು ಹಾಗೂ ಉನ್ನತ ಶಿಕ್ಷಣ ಇಲಾಖೆ ಆದೇಶದನುಸಾರ ಅನಂತನ್ ಅವರ ಅಧಿಕಾರಾವಧಿ 2013ರ ಮೇ 2ಕ್ಕೆ ಮುಗಿದಿದೆ.
ಆದರೆ ಕಳೆದ 2 ತಿಂಗಳಿಂದ ಅನಧಿಕೃತವಾಗಿ ಕುಲಪತಿ ಹುದ್ದೆಯಲ್ಲಿ ಅನಂತನ್ ಮುಂದುವರಿದಿದ್ದಾರೆ. ಆದರೆ ಉನ್ನತ ಶಿಕ್ಷಣ ಸಚಿವರು ಹಾಗೂ ರಾಜ್ಯಪಾಲರು ಮಾತ್ರ ಕುಲಪತಿ ನೇಮಕ ಹಾಗೂ ಶೋಧನಾ ಸಮಿತಿ ರಚನೆ ಕುರಿತಂತೆ ಮೌನವಹಿಸಿದ್ದಾರೆ.
ಕಳೆದ 2010ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ ಪ್ರೊ. ಅನಂತನ್ ಅವರು 4 ವರ್ಷದ ಅವಧಿಗೆ ಅಥವಾ 65 ವರ್ಷ ಆಗುವವರೆಗೆ ರಾಣಿ ಚೆನ್ನಮ್ಮ ವಿವಿಯ ಪ್ರಥಮ ಕುಲಪತಿಯಾಗಿರುತ್ತಾರೆ. ಇದಲ್ಲದೇ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, 4 ವರ್ಷದ ಸೇವಾವಧಿ ಅಥವಾ 65 ವರ್ಷಗಳಲ್ಲಿ ಯಾವುದು ಮೊದಲಾಗುತ್ತದೆಯೋ ಅದನ್ನು ಪರಿಗಣಿಸಲಾಗುವುದು ಎಂದು. ಆದರೆ ಪ್ರೊ.ಅನಂತನ್ ಅವರು ಬೇರೆ ಲೆಕ್ಕಾಚಾರ ಮಾಡುತ್ತಿದ್ದು, ತಮ್ಮ ಸೇವಾವಧಿ ಇನ್ನು 2 ವರ್ಷವಿದೆ ಎಂದು ಅಕ್ರಮವಾಗಿ ವಿವಿಯಲ್ಲಿ ಠಿಕಾಣಿ ಹೂಡಿದ್ದಾರೆ.
ವಿಚಿತ್ರವೆಂದರೆ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ಚಕಾರವೆತ್ತುತ್ತಿಲ್ಲ. ಈ ಬಗ್ಗೆ ತಿಳಿದಿದ್ದರೂ ಯಾವುದೇ ಕ್ರಮತೆಗೆದುಕೊಳ್ಳುತ್ತಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಹೇಳುತ್ತಾರೆ. ನೂತನ ವಿಶ್ವವಿದ್ಯಾಲಯದ ಮೊದಲ ಕುಲಪತಿಯೇ ಇಂತಹ ನೀತಿಗಳಿಗೆ ನಾಂದಿ ಹಾಡಿದರೆ ವಿವಿಯ ಸ್ಥಿತಿ ಅಧೋಗತಿಗೆ ತಲುಪುವುದರಲ್ಲಿ ಅನುಮಾನವಿಲ್ಲ ಎಂಬುದುದ ಅವರ ಅಭಿಪ್ರಾಯ.
ಸರ್ಕಾರದ ಆದೇಶದಲ್ಲೇನಿದೆ?: ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಯು.ಬಿ.ಉಳವಿ ಅವರು 2010ರ ಅಗಸ್ಟ್ 16ರಂದು ಹೊರಡಿಸಿದ ಆದೇಶ ಹೀಗಿದೆ, ‘ಕರ್ನಾಟಕ ವಿಶ್ವವಿದ್ಯಾಲಯ ಕಾಯಿದೆ ಪ್ರಕಾರ ಪ್ರೊ.ಬಿ.ಆರ್. ಅನಂತನ್ ಅವರನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಯನ್ನಾಗಿ 4 ವರ್ಷಗಳ ಅವಧಿಗೆ ಅಥವಾ ಸದರಿಯವರಿಗೆ 65ವರ್ಷಗಳು ವಯಸ್ಸಾಗುವುವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಲಾಗಿದೆ’.
ಈ ಆದೇಶದಲ್ಲಿ ಒಂದಂಶವನ್ನು ಸರ್ಕಾರ ಸೇರಿಸಿದೆ. ‘ಕರ್ನಾಟಕ ರಾಜ್ಯ ವಿವಿ ಅಧಿನಿಯಮದ 14(5) ಮತ್ತು 14(6)ನ್ನು ಓದಿಕೊಂಡು’ ಎಂದು ಹೇಳಲಾಗಿದೆ. ಇದು ಗೊಂದಲಕ್ಕೆ ಕಾರಣವಾಗಿದೆ.
ತಿದ್ದುಪಡಿಯೇನು?: ಕಳೆದ 2011ರ ಫೆಬ್ರುವರಿಯಲ್ಲಿ ಅಧಿನಿಯಮಕ್ಕೆ ತಿದ್ದುಪಡಿ ತಂದು, ಕುಲಪತಿಯಾಗಲು ಇರುವ ವಯೋವುತಿಯನ್ನು 67ಕ್ಕೆ ಏರಿಸಲಾಯಿತು. ಇದನ್ನೇ ನೆಪವಾಗಿರಿಸಿಕೊಂಡಿರುವ ಅನಂತನ್ ಇನ್ನು ಹುದ್ದೆಯಲ್ಲಿ ಮುಂದುವರಿದಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯೊಬ್ಬರು ಹೇಳಿದ ಪ್ರಕಾರ, ‘ಅನಂತನ್ ಅವರ ನೇಮಕವು 2010ರಲ್ಲಿ ಆಗಿದೆ. ಆದರೆ ಈ ತಿದ್ದುಪಡಿಯಾಗಿರುವುದು 2011ರಲ್ಲಿ. ಆದ್ದರಿಂದ ಅವರ ಅಧಿಕಾರವಧಿ 2013ರ ಮೇ ತಿಂಗಳಿನಲ್ಲಿಯೇ ಕೊನೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ಈ ಗೊಂದಲದ ಅರಿವಿದ್ದರೂ ಯಾವುದೆ ಕ್ರಮ ತೆಗೆದುಕೊಂಡಿಲ್ಲ’.
ಆದರೆ 2010ರ ಅ.16 ರಂದು ಹೊರಡಿಸಿದ ಅಧಿಸೂಚನೆ ಹಾಗೂ ಅ.17ರಂದು ಹೊರಡಿಸಿದ ಸರ್ಕಾರಿ ಆದೇಶವು ವಿಭಿನ್ನವಾಗಿದೆ. ಅ.17ರಂದು ಪ್ರಕಟವಾಗಿರುವ ಸರ್ಕಾರಿ ಆದೇಶದಲ್ಲಿ ‘ಕರ್ನಾಟಕ ರಾಜ್ಯ ವಿವಿ ಅಧಿನಿಯಮದ 14(5) ಮತ್ತು 14(6)ನ್ನು ಓದಿಕೊಂಡು’ ಎಂಬಂಶ ಪ್ರಕಟವಾಗಿಲ್ಲ. ಈ ಹಿನ್ನೆಲೆಯಲ್ಲಿ ಅನಂತನ್ ಅವರ ವಾದಕ್ಕೆ ಮನ್ನಣೆ ದೊರಕುವುದಿಲ್ಲ.
ಹುಟ್ಟಿದ ದಿನಾಂಕದ ದಾಖಲೆ ನೀಡಿಲ್ಲ!
ವಿವಿಯ ವಿಶೇಷಾಧಿಕಾರಿ ಹಾಗೂ ಕುಲಪತಿಗಳಾಗಿ ನೇಮಕವಾದ ಬಳಿಕ ಹುಟ್ಟಿದ ದಿನಾಂಕದ ಮಾಹಿತಿಯನ್ನು ಇಲಾಖೆಗೆ ನೀಡಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಕಾರಣದಿಂದ ಅವರ ನಿವೃತ್ತಿ ವಯಸ್ಸು ತಿಳಿದಿಲ್ಲ ಎಂಬ ವಾದವನ್ನು ಇಲಾಖೆ ಹೇಳುತ್ತಿದೆ. ಆದರೆ ‘ಕನ್ನಡಪ್ರಭ’ಕ್ಕೆ ಈ ಕುರಿತ ದಾಖಲೆಗಳು ದೊರೆತಿದ್ದು, 1948ರ ಮೇ 2ರಂದು ಪ್ರೊ.ಅನಂತನ್ ಅವರು ಜನಿಸಿದ್ದಾರೆ.
ಕೃಪೆ : ಕನ್ನಡಪ್ರಭ 16 Jul 2013 02:00:00 AM IST

Saturday, January 19, 2013

ಧಾರವಾಡ ಸಾಹಿತ್ಯ ಸಂಭ್ರಮ : ನಿಬಂಧನೆಗಳು ರದ್ದು !

ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಾಹಿತ್ಯ ಸಂಭ್ರಮ' ಕಾರ್ಯಕ್ರಮದ ನಿಬಂಧನೆಗಳನ್ನು ನಾಡಿನ ಹಲವಾರು ಬರಹಗಾರರು ಖಂಡಿಸುವ ಮೂಲಕ, ವಿರೋಧಿಸುವ ಮೂಲಕ ಪರ್ಯಾಯ ಕಾರ್ಯಕ್ರಮ ಮಾಡುವುದಾಗಿ ಘೋಷಿಸಿದ ಮೇಲೆ ಸಾಹಿತ್ಯ ಸಂಭ್ರಮದ ಸಂಘಟಕರು ಎಚ್ಚೆತ್ತುಕೊಂಡು ತಾವು ವಿಧಿಸಿದ್ದ ನಿಬಂಧನೆಗಳನ್ನು ರದ್ದುಪಡಿಸಿದ್ದಾರೆ. ಈ ಬಗ್ಗೆ ಪ್ರಜಾವಾಣಿ ದಿನಪತ್ರಿಕೆಯಲ್ಲಿ ಬಂದ ಸುದ್ದಿ ಇಲ್ಲಿದೆ ನೋಡಿ ;

ಇದೇ 25, 26 ಮತ್ತು 27ರಂದು ನಗರದಲ್ಲಿ ನಡೆಯಲಿರುವ `ಧಾರವಾಡ ಸಾಹಿತ್ಯ ಸಂಭ್ರಮ'ದಲ್ಲಿ ಪಾಲ್ಗೊಳ್ಳುವವರಿಗೆ ವಿಧಿಸಲಾಗಿದ್ದ ನಿಬಂಧನೆಗಳನ್ನು ರದ್ದುಪಡಿಸಲಾಗಿದೆ ಎಂದು `ಧಾರವಾಡ ಸಾಹಿತ್ಯ ಸಂಭ್ರಮ'ದ ಅಧ್ಯಕ್ಷ ಡಾ.ಗಿರಡ್ಡಿ ಗೋವಿಂದರಾಜ ಸ್ಪಷ್ಟಪಡಿಸಿದ್ದಾರೆ.
`ಈ ನಿಬಂಧನೆಗಳ ಬಗ್ಗೆ ಬಹಳಷ್ಟು ತಪ್ಪು ತಿಳಿವಳಿಕೆ ಉಂಟಾಗಿದ್ದರಿಂದ ಮತ್ತು ಇವುಗಳನ್ನೇ ಮುಖ್ಯವಾಗಿರಿಸಿಕೊಂಡು ವಿರೋಧ ವ್ಯಕ್ತವಾಗುತ್ತಿರುವುದರಿಂದ ಇವುಗಳನ್ನು ರದ್ದುಪಡಿಸಲಾಗಿದೆ. ಈ ಸಂಭ್ರಮವನ್ನು ಮೊದಲ ಪ್ರಯೋಗವಾಗಿ ಹಮ್ಮಿಕೊಳ್ಳಲಾಗಿದ್ದು, ಚರ್ಚಿಸಬೇಕಾಗಿರುವ ಸಾಕಷ್ಟು ವಿಷಯಗಳನ್ನು ಮುಂಬರುವ ಸಂಭ್ರಮಗಳಲ್ಲಿ ಎತ್ತಿಕೊಳ್ಳಲು ಅವಕಾಶ ಇದ್ದೇ ಇದೆ. 60 ಸಂಪನ್ಮೂಲ ವ್ಯಕ್ತಿಗಳು ಮತ್ತು ಸುಮಾರು 60 ವಿಶೇಷ ಆಮಂತ್ರಿತರು ವಿವಿಧ ಗೋಷ್ಠಿಗಳಲ್ಲಿ ಪಾಲ್ಗೊಳ್ಳುತ್ತಿದಾರೆ'.
`ಅವರಿಗೆ ಯಾವುದೇ ಶುಲ್ಕ ಇರುವುದಿಲ್ಲ. 300 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಸರ್ಕಾರ ಕೊಡುವ ಅನುದಾನ ಸಾಲದೇ ಇದ್ದುದರಿಂದ ಸಂಭ್ರಮದ ಖರ್ಚು ವೆಚ್ಚಗಳನ್ನು ನಿಭಾಯಿಸಲು ಪ್ರತಿನಿಧಿ ಶುಲ್ಕ ಆಕರಿಸಲಾಗುತ್ತಿದೆ. ಕೆಲವರು ತಪ್ಪು ತಿಳಿವಳಿಕೆಯಿಂದ ಆರೋಪಿಸುತ್ತಿರುವಂತೆ ಇದರಿಂದ ಯಾವುದೇ ಹಣ ಮಾಡಿಕೊಳ್ಳುವ ಉದ್ದೇಶ ಖಂಡಿತವಾಗಿಯೂ ಇಲ್ಲ. ಸಂಭ್ರಮದ ವೆಚ್ಚ ಸುಮಾರುರೂ 16ರಿಂದರೂ 18 ಲಕ್ಷದಷ್ಟು ಎಂದು ಅಂದಾಜಿಸಲಾಗಿದೆ. ಆದರೆ ಕೆಲವರು ಆರೋಪಿಸುತ್ತಿರುವಂತೆರೂ 40ರಿಂದರೂ 50 ಲಕ್ಷ ಸಂಗ್ರಹಿಸಲಾಗಿಲ್ಲ. ಸಂಭ್ರಮ ಮುಗಿದ ಕೆಲವೇ ದಿನಗಳೊಳಗಾಗಿ ಇದರ ಖರ್ಚು ವೆಚ್ಚವನ್ನು ಪಾರದರ್ಶಕವಾಗಿ ಪ್ರಕಟಿಸಲಾಗುವುದು' ಎಂದು ಡಾ.ಗಿರಡ್ಡಿ ತಿಳಿಸಿದ್ದಾರೆ.

Wednesday, January 02, 2013

ಕೋರೆಗಾವ ವಿಜಯ ದಿನ

ಬೆಂಗಳೂರು, ಜ.1: ದೇಶದಲ್ಲಿ ದಲಿತರ ಹಾಗೂ ಬಡವರ ಇತಿಹಾಸವನ್ನು ಪ್ರಜ್ಞಾಪೂರ್ವಕವಾಗಿ ಮೂಲೆಗುಂಪು ಮಾಡಲಾಗುತ್ತಿದೆ. ಅದಕ್ಕೆ ಮಹಾರಾಷ್ಟ್ರದಲ್ಲಿ ನಡೆದ ಕೋರೆಗಾಂವ್ ಘಟನೆಯೇ ಉದಾಹರಣೆಯಾಗಿದೆ ಎಂದು ಬೆಂಗಳೂರು ನಗರ ಕೇಂದ್ರ ವಿಭಾಗದ ಪೊಲೀಸ್ ಉಪ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ. ಮಂಗಳವಾರ ನಗರದ ಪುರಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕೋರೆಗಾಂವ್ ವಿಜಯ ದಿನದ ಅಂಗವಾಗಿ ಏರ್ಪಡಿಸಿದ್ದ ‘ಮಹಾರ್ ವೀರ ಯೋಧರ ಬಲಿದಾನದ ನೆನಪಿಗಾಗಿ ರಕ್ತದಾನ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕೋರೆಗಾಂವ್ ಯದ್ಧವು ದಲಿತ ಮಹಾರ್ ಸೈನಿಕರು ತಮ್ಮ ಸ್ವಾಭಿಮಾನದ ರಕ್ಷಣೆಗಾಗಿ ಪೇಶ್ವೆಯ ಬೃಹತ್ ಸೈನ್ಯದ ವಿರುದ್ಧ ನಡೆಸಿದ ಹೋರಾಟವಾಗಿದೆ. ಆದರೆ ಭಾರತೀಯ ಇತಿಹಾಸದಲ್ಲಿ ದಲಿತರ ಈ ದಿಗ್ವಿಜಯವನ್ನು ವ್ಯವಸ್ಥಿತವಾಗಿ ನಿರ್ಲಕ್ಷಿಸಲಾಗಿದ್ದು, ಈ ಬಗ್ಗೆ ಹೆಚ್ಚು ಮಾಹಿತಿಗಳೇ ಇಲ್ಲ ಎಂದು ರವಿಕಾಂತೇಗೌಡ ಆಕ್ಷೇಪ ವ್ಯಕ್ತಪಡಿಸಿದರು.
ಬ್ರಿಟಿಷರು ತಮ್ಮ ದೊಡ್ಡ ರೆಜಿಮೆಂಟ್‌ನ್ನು ವಿಸರ್ಜಿಸಿ ದಲಿತ ಸೈನಿಕರಿಗೆ ಆದ್ಯತೆ ನೀಡಲು ಸಾಧ್ಯವಾದದ್ದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ರಿಂದ. ಈ ಘಟನೆ ನಮ್ಮ ಪರಂಪರೆಗೆ ಸಿಕ್ಕ ದೊಡ್ಡ ಗೌರವವಾಗಿದೆ. ನಾವು ನಮ್ಮ ಇತಿಹಾಸ ಪರಂಪರೆಗಳ ಕಡೆಗೆ ಮತ್ತೆ ತಿರುಗಿ ನೋಡಬೇಕಿದೆ. ಇತಿಹಾಸದ ಸತ್ಯಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದ್ದು, ಈ ಬಗ್ಗೆ ಗಂಭೀರ ಚಿಂತನೆಯಾಗಬೇಕು. ಈ ನಿಟ್ಟಿನಲ್ಲಿ ದಲಿತಾರ ಸೈನಿಕರ ಈ ದಿಗ್ವಿಜಯ ನಮ್ಮೆಲ್ಲರ ಕಣ್ಣುಗಳನ್ನು ಇತಿಹಾಸದ ಕಡೆಗೆ ತೆರೆಸುವ ಮೂಲಕ ಸ್ವಾಭಿಮಾನದೆಡೆಗೆ ಕೊಂಡೊಯ್ಯಲಿ ಎಂದು ರವಿಕಾಂತೇಗೌಡ ಆಶಿಸಿದರು.
ನಾವೆಲ್ಲ ಯದ್ಧ ವಿರೋಧಿಗಳಾಗಿದ್ದು, ಯದ್ಧಗಳನ್ನು ಮಾಡಿ ರಕ್ತ ಸುರಿಸುವುದಕ್ಕಿಂತ, ಮಡಿದ ವೀರ ಯೋಧರ ನೆನಪಲ್ಲಿ ರಕ್ತದಾನ ಮಾಡುವುದು ಶ್ರೇಷ್ಠ ಕಾರ್ಯವಾಗಿದೆ. ಪೊಲೀಸ್ ಇಲಾಖೆ ಸಹ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದ್ದು, ರಕ್ತದ ತುರ್ತು ಅಗತ್ಯವಿರವವರು ಸಂಪರ್ಕಿಸಿದರೆ, ಪೊಲೀಸ್ ಸಿಬ್ಬಂದಿ ರಕ್ತ ನೀಡಲಿದ್ದಾರೆ ಎಂದು ಅವರು ಹೇಳಿದರು.
ಇದೇ ವೇಳೆ ಮಾತನಾಡಿದ ಕರ್ನಾಟಕ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಸಿದ್ದರಾಮ ಕಾರ್ಣಿಕ್, ಅಂಬೇಡ್ಕರ್ ನಮಗೆಲ್ಲ ಕೇವಲ ಹೆಸರಾಗಿದ್ದಾರೆಯೇ ಹೊರತು, ಉಸಿರಾಗಿಲ್ಲ. ನಮಗೆ ಅವರು ಹೆಸರು ಹಾಗೂ ಉಸಿರಾದಾಗ ಮಾತ್ರ ದಲಿತರ ಬದುಕು ಹಸನಾಗಲಿದೆ ಎಂದು ಅಭಿಪ್ರಾಯಪಟ್ಟರು.
ಮಹಾರಾಷ್ಟ್ರದಲ್ಲಿ ಶಿವಾಜಿ, ಸಾಂಬಜಿ ಸೇರಿದಂತೆ ಹಲವು ನಾಯಕರ ಸಮಾಧಿಗಳನ್ನು ಸರಕಾರ ಅಭಿವೃದ್ಧಿಪಡಿಸಿದೆ. ಆದರೆ ಸ್ವಾಭಿಮಾನಕ್ಕಾಗಿ ಹುತಾತ್ಮರಾದ ಮಹರ್ ಯೋಧರ ಸ್ಮಾರಕ ಶಿಥಿಲಗೊಂಡಿದ್ದು, ಸರಕಾರ ನಿರ್ಲಕ್ಷಿಸಿದೆ. ಆದುದರಿಂದ ಮಹಾರಾಷ್ಟ್ರ ಸರಕಾರ ಕೋರೆಗಾಂವ್ ಸ್ಮಾರಕವನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.
ದಲಿತರು ಎಚ್ಚೆತ್ತುಕೊಳ್ಳದ ಕಾರಣ ಕೋರೆಗಾಂವ್‌ನಂತಹ ಹಲವು ಐತಿಹಾಸಿಕ ಘಟನೆಗಳು ಮುಚ್ಚು ಹೋಗುತ್ತಿವೆ. ನಾವು ಎದ್ದು ನಿಲ್ಲದಿದ್ದರೆ ನಮ್ಮ ಅವಸಾನವಾಗಲಿದೆ. ಆದುದರಿಂದ ಕೋರೆಗಾಂವ್ ಯೋಧರ ತ್ಯಾಗ, ಬಲಿದಾನ, ಸ್ವಾಭಿಮಾನಗಳನ್ನು ಅರ್ಥಮಾಡಿಕೊಂಡು ನಾವೆಲ್ಲ ಮುಂದುವರಿ ಯಬೇಕು. ಆ ಮೂಲಕ ಅಧಿಕಾರದ ಕೇಂದ್ರ ಸ್ಥಾನಗಳ ಗದ್ದುಗೆ ಏರಬೇಕು ಎಂದು ಡಾ.ಸಿದ್ದರಾಮ ಕಾರ್ಣಿಕ್ ನುಡಿದರು. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ರಂಗಸ್ವಾಮಿ, ಅಂಬೇಡ್ಕರ್‌ರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾನತೆಗಾಗಿ ಹೋರಾಟ ನಡೆಸೋಣ ಎಂದರು.
ಅಧ್ಯಕ್ಷತೆಯನ್ನು ಡಿಎಸ್‌ಎಸ್‌ನ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ವಹಿಸಿದ್ದರು. ಕಿವಿ, ಸಾಹಿತಿ ರುದ್ರಪ್ಪ ಹನಗವಾಡಿ, ಪ್ರಜಾವಿಮೋಚನಾ ಚಳವಳಿಯ ಮುಖಂಡ ಪಟಾಪಟ್ ನಾಗರಾಜ್, ಟಿಪ್ಪು ಸಂಯುಕ್ತ ರಂಗದ ಅಧ್ಯಕ್ಷ ಅಹ್ಮದ್ ಖುರೇಷಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೃಪೆ : ವರ್ತಮಾನ ಭಾರತಿ

ದಾಸಿಮಯ್ಯನ ವಚನ

ಒಡಲುಗೊಂಡವ ಹಸಿವ;  ಒಡಲುಗೊಂಡವ ಹುಸಿವ  ಒಡಲುಗೊಂಡವನೆಂದು  ನೀನೆನ್ನ ಜರಿದೊಮ್ಮೆ ನುಡಿಯದಿರ ನೀನೆನ್ನಂತೆ ಒಮ್ಮೆ ಒಡಲುಗೊಂಡು ನೋಡ ರಾಮನಾಥ.